ಕೊರೊನಾ ಎರಡನೇ ಅಲೆ; ರಾಜ್ಯದಲ್ಲಿ ಮತ್ತೆ ಲಾಕ್ಡೌನ್? ಸಚಿವ ಬಿ.ಸಿ. ಪಾಟೀಲ್ ಹೇಳಿಕೆ
ಬೆಂಗಳೂರು, ಮಾ. 22: ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಕಳೆದ ವರ್ಷದ ಮಾರ್ಚ್ 22 ರಂದು ಜನತಾ ಕರ್ಫ್ಯೂ ಆಚರಣೆ ಮಾಡಿ ಇಂದಿಗೆ ಒಂದು ವರ್ಷವಾಗಿದೆ. ನಿಧಾನವಾಗಿ ಕಡಿಮೆಯಾಗುತ್ತಿದ್ದ ಕೊರೊನಾ ಸೋಂಕಿತ ಪ್ರಕರಣಗಳ ಸಂಖ್ಯೆ ಈಗ ಮತ್ತೆ ಹೆಚ್ಚಾಗುತ್ತಿವೆ. ಕೊರೊನಾ ವೈರಸ್ನ 2ನೇ ಅಲೆ ಬಂದಿದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಈಗಾಗಲೇ ಘೋಷಣೆ ಮಾಡಿದ್ದಾರೆ. ಇದೇ ಸಂದರ್ಭದಲ್ಲಿ ಮತ್ತೆ ಲಾಕ್ಡೌನ್ ಜಾರಿಮಾಡಲಾಗುತ್ತದೆಯಾ ಎಂಬುದರ ಕುರಿತು ಸಚಿವ ಬಿ.ಸಿ. ಪಾಟೀಲ್ ಅವರು ವಿಧಾನಸೌಧದಲ್ಲಿ ಮಾತನಾಡಿದ್ದಾರೆ.
Recommended Video
ಹೆಚ್ಚುತ್ತಿರುವ ಕೊರೊನಾವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಸದ್ಯಕ್ಕೆ ಲಾಕ್ಡೌನ್ ಜಾರಿ ಮಾಡದಿರಲು ಸರ್ಕಾರ ನಿರ್ಧರಿಸಿರುವುದಾಗಿ ಬಿ.ಸಿ. ಪಾಟೀಲ್ ಅವರು ಸ್ಪಷ್ಟಪಡಿಸಿದ್ದಾರೆ. ಇಂದಿನ ಆರ್ಥಿಕ ಸಂಕಷ್ಟದಲ್ಲಿ ಲಾಕ್ಡೌನ್ ಜಾರಿಗೊಳಿಸುವ ಪರಿಸ್ಥಿತಿ ಇಲ್ಲ. ಕಳೆದ ವರ್ಷಕ್ಕು ಈ ವರ್ಷಕ್ಕೂ ಪರಿಸ್ಥಿತಿ ಬೇರೆ ಇದೆ. ಸಾಕಷ್ಟು ಮುನ್ನೆಚ್ಚರಿಕೆ ತೆಗೆದುಕೊಂಡಿದ್ದೇವೆ. ಜನರೂ ಪರಿಸ್ಥಿತಿ ಅರ್ಥಮಾಡಿಕೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಬೆಂಗಳೂರಿನ ಈ ಕಂಟೇನ್ಮೆಂಟ್ ಝೋನ್ಗಳ ಬಗ್ಗೆ ಎಚ್ಚರವಿರಲಿ
ತಾವೂ ಸೇರಿದಂತೆ ಆರು ಸಚಿವರು ಕೋರ್ಟ್ ಮೊರೆ ಹೋಗಿರುವುದರ ಕುರಿತು ಪ್ರತಿಕ್ರಿಯೆ ನೀಡಿರುವ ಬಿ.ಸಿ. ಪಾಟೀಲ್ ಅವರು, ನ್ಯಾಯಾಲಯಕ್ಕೆ ಹೋಗುವುದು ನನ್ನ ಹಕ್ಕು, ಅದನ್ನು ಪ್ರಶ್ನಿಸಲು ಕಾಂಗ್ರೆಸ್ನವರಿಗೆ ಯಾವುದೇ ಅಧಿಕಾರವಿಲ್ಲ. ಕಾಂಗ್ರೆಸ್ ನಾಯಕರು ನೀತಿ ಸಿದ್ಧಾಂತದ ಮೇಲೆ ಹೊರಾಟ ಮಾಡಬೇಕು. ಅವರಿಗೆ ಹೋರಾಟ ಮಾಡಲು ಯಾವುದೇ ವಿಷಯಗಳು ಸಿಗುತ್ತಿಲ್ಲ. ಹೀಗಾಗಿ ಮೈತ್ರಿ ಸರ್ಕಾರ ಪತನಗೊಂಡ ಕಾರಣಕ್ಕೆ ನಮ್ಮ ಮೇಲೆ ವೈಯಕ್ತಿಕ ದ್ವೇಷ ಸಾಧಿಸುತ್ತಿದ್ದಾರೆಂದು ಆರೋಪಿಸಿದ್ದಾರೆ.
ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆಗಳು ರೈತರ ಪರವಾಗಿಯೇ ಇರುವ ಕಾಯ್ದೆಗಳಾದ್ದರಿಂದ ಆ ಕಾಯ್ದೆಗಳಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಇದೇ ಸಂದರ್ಭದಲ್ಲಿ ಬಿಸಿ ಪಾಟೀಲ್ ಸ್ಪಷ್ಟಪಡಿಸಿದರು.