ಗೋವಾ ಮತ್ತು ಕೇರಳದಿಂದ ಕರ್ನಾಟಕಕ್ಕೆ ಆಗಮಿಸುವ ಪ್ರಯಾಣಿಕರಿಗೆ ಸಿಹಿಸುದ್ದಿ
ಬೆಂಗಳೂರು, ಫೆಬ್ರವರಿ 17: ದೇಶದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ ನಿಯಂತ್ರಣಕ್ಕೆ ಬಂದಿರುವ ಹಿನ್ನೆಲೆ ಗೋವಾ ಮತ್ತು ಕೇರಳದಿಂದ ಕರ್ನಾಟಕಕ್ಕೆ ಆಗಮಿಸುವ ಪ್ರಯಾಣಿಕರಿಗೆ RT-PCR ನೆಗೆಟಿವ್ ವರದಿ ಕಡ್ಡಾಯ ಎಂಬ ನಿಯಮವನ್ನು ರದ್ದುಗೊಳಿಸಲಾಗಿದೆ.
ಕೇರಳ ಮತ್ತು ಗೋವಾದಿಂದ ರೈಲ್ವೆ, ವಿಮಾನ ಹಾಗೂ ರಸ್ತೆ ಸಾರಿಗೆ ಮೂಲಕ ಕರ್ನಾಟಕಕ್ಕೆ ಆಗಮಿಸುವ ಪ್ರಯಾಣಿಕರು RT-PCR ನೆಗೆಟಿವ್ ವರದಿಯನ್ನು ತೆಗೆದುಕೊಂಡು ಹೋಗುವುದು ಕಡ್ಡಾಯವಲ್ಲ ಎಂದು ಸರ್ಕಾರ ಸುತ್ತೋಲೆ ಹೊರಡಿಸಿದೆ.
ಕರ್ನಾಟಕಕ್ಕೆ ಆಗಮಿಸುವ ಪ್ರಯಾಣಿಕರು RT-PCR ವರದಿಯನ್ನು ಹೊಂದಿರುವುದು ಕಡ್ಡಾಯವಲ್ಲ. ಆದರೆ ಅಂಥ ಪ್ರಯಾಣಿಕರು ಕಡ್ಡಾಯವಾಗಿ ಎರಡು ಡೋಸ್ ಕೊವಿಡ್-19 ಲಸಿಕೆಯನ್ನು ಪಡೆದುಕೊಂಡಿರುವ ಬಗ್ಗೆ ಪ್ರಮಾಣಪತ್ರವನ್ನು ಹೊಂದಿರಬೇಕು ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.

ಪ್ರಯಾಣಿಕರಿಗೆ RT-PCR ಕಡ್ಡಾಯವಲ್ಲ ಎಂದು ಟ್ವೀಟ್:
"ಎಲ್ಲಾ ಸಾರಿಗೆ ವಿಧಾನಗಳ ಮೂಲಕ ಕೇರಳ ಮತ್ತು ಗೋವಾದಿಂದ ಕರ್ನಾಟಕಕ್ಕೆ ಬರುವ ಪ್ರಯಾಣಿಕರಿಗೆ ಇನ್ನು ಮುಂದೆ ಋಣಾತ್ಮಕ RTPCR ವರದಿ ಅಗತ್ಯವಿಲ್ಲ. ಕಳೆದ ವಾರ ಮಹಾರಾಷ್ಟ್ರದ ಪ್ರಯಾಣಿಕರಿಗೆ ಈ ವಿನಾಯಿತಿ ನೀಡಲಾಗಿದೆ. ಆದಾಗ್ಯೂ ಲಸಿಕೆ ಪ್ರಮಾಣಪತ್ರ ಕಡ್ಡಾಯವಾಗಿದೆ," ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಟ್ವೀಟ್ ಮಾಡಿದ್ದಾರೆ.
ಕರ್ನಾಟಕದಲ್ಲಿ ಕೊರೊನಾವೈರಸ್ ಸಂಖ್ಯೆ ಇಳಿಮುಖ:
ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ತಗ್ಗಿದೆ. ರಾಜ್ಯದಲ್ಲಿ ಸೋಂಕಿತ ಪ್ರಕರಣಗಳ ಪಾಸಿಟಿವಿಟಿ ದರ ಶೇ.1.90ರಷ್ಟಿದ್ದು, ಸಾವಿನ ಪ್ರಮಾಣ ಶೇ.1.26ರಷ್ಟಿದೆ. ಕಳೆದ 24 ಗಂಟೆಗಳಲ್ಲಿ 1894 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿದ್ದು, 24 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದೇ ಅವಧಿಯಲ್ಲಿ 5418 ಸೋಂಕಿತರು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಈವರೆಗೂ 3931536 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, 3931536 ಸೋಂಕಿತರು ಗುಣಮುಖರಾಗಿದ್ದಾರೆ. ಮಹಾಮಾರಿಯಿಂದ ಇದುವರೆಗೂ 39715 ಸೋಂಕಿತರು ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ ರಾಜ್ಯದಲ್ಲಿ 39715 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.












Click it and Unblock the Notifications