ಕೋವಿಡ್ -19 ಪತ್ತೆಯಾದರೆ ಆಸ್ಪತ್ರೆ ಬಂದ್ ಮಾಡುವಂತಿಲ್ಲ
ಬೆಂಗಳೂರು, ಮೇ 12 : ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಕೋವಿಡ್ - 19 ಸೋಂಕು ಕಾಣಿಸಿಕೊಂಡರೆ ಆಸ್ಪತ್ರೆಗೆ ಬೀಗ ಹಾಕುವುದು ಬೇಡ ಎಂದು ಆರೋಗ್ಯ ಇಲಾಖೆ ಹೇಳಿದೆ. ಬೆಂಗಳೂರು ನಗರದಲ್ಲಿ ಹಲವು ಆಸ್ಪತ್ರೆಗಳಿಗೆ ಬೀಗ ಹಾಕಲಾಗಿತ್ತು.
ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಈ ಕುರಿತು ಮಾಹಿತಿ ನೀಡಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗೆ ಕೊರೊನಾ ಸೋಂಕು ಕಾಣಿಸಿಕೊಂಡರೆ ರೋಗಿಯನ್ನು ಐಸೋಲೇಷನ್ ವಾರ್ಡ್ಗೆ ಸ್ಥಳಾಂತರ ಮಾಡಬಹುದು ಎಂದು ಹೇಳಿದ್ದಾರೆ.
ಆಸ್ಪತ್ರೆಯಲ್ಲಿ ಕೊರೊನಾ ಪ್ರಕರಣ ಬೆಳಕಿಗೆ ಬಂದರೆ ತಕ್ಷಣ ಜಿಲ್ಲಾ ಆರೋಗ್ಯಾಧಿಕಾರಿಗೆ ಮಾಹಿತಿ ನೀಡಬೇಕು. ರೋಗಿಯನ್ನು ಐಸೋಲೇಷನ್ ವಾರ್ಡ್ಗೆ ಸ್ಥಳಾಂತರ ಮಾಡಬೇಕು. ಆ ರೋಗಿಗೆ ಪಿಪಿಇ ಕಿಟ್ ಧರಿಸಿ ಚಿಕಿತ್ಸೆಯನ್ನು ನಿಗದಿಡಿಸಿದ ಸಿಬ್ಬಂದಿ ನೀಡಬೇಕು ಎಂದು ಸೂಚನೆ ನೀಡಲಾಗಿದೆ.

ಕೊರೊನಾ ಸೋಂಕು ಪತ್ತೆಯಾದ ಬಳಿಕ ಆಸ್ಪತ್ರೆಯನ್ನು ಸ್ಯಾನಿಟೈಸ್ ಮಾಡಬೇಕು. ಆಂಬ್ಯುಲೆನ್ಸ್ ಸೇರಿದಂತೆ ವಿವಿಧ ವಿಭಾಗಳನ್ನು ಸ್ವಚ್ಛಗೊಳಿಸಬೇಕು. ಸೋಂಕು ಪತ್ತೆಯಾದ ರೋಗಿಗೆ ಅಗತ್ಯವಿದ್ದರೆ ಮಾತ್ರ ಕೋವಿಡ್ -19 ಆಸ್ಪತ್ರೆಗೆ ಚಿಕಿತ್ಸೆಗಾಗಿ ಸ್ಥಳಾಂತರ ಮಾಡಬೇಕು.
ಸ್ಯಾನಿಟೈಸ್ ಮಾಡಿದ ಮರುದಿನವೇ ಆಸ್ಪತ್ರೆಯಲ್ಲಿ ಚಟುವಟಿಕೆಗಳನ್ನು ಆರಂಭಿಸಬಹುದು. ಸೋಂಕು ತಗುಲಿದ ರೋಗಿಗೆ ಚಿಕಿತ್ಸೆ ನೀಡಿದ ಸಿಬ್ಬಂದಿಗೆ ತಕ್ಷಣ ಕೊರೊನಾ ಪರೀಕ್ಷೆ ನಡೆಸಬೇಕು. ವರದಿ ಪಾಸಿಟೀವ್ ಬಂದರೆ ಅವರಿಗೆ ಚಿಕಿತ್ಸೆ ವ್ಯವಸ್ಥೆ ಮಾಡಬೇಕು ಎಂದು ತಿಳಿಸಲಾಗಿದೆ.
ಪ್ರಸ್ತುತ ಯಾವುದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗೆ ಕೊರೊನಾ ಸೋಂಕು ತಗುಲಿರುವುದು ಖಚಿತವಾದರೆ ಆಸ್ಪತ್ರೆಗೆ ಬೀಗ ಹಾಕಲಾಗುತ್ತದೆ. ಬಳಿಕ ಸ್ವಚ್ಛತೆಯ ಕಾರ್ಯ ಆರಂಭ ಮಾಡಲಾಗುತ್ತದೆ.












Click it and Unblock the Notifications