CP Yogeshwara: ಸಿ ಪಿ ಯೋಗೇಶ್ವರ್ ಆಯ್ಕೆಯಿಂದ ಚನ್ನಪಟ್ಟಣ ಕಾಂಗ್ರೆಸ್ ಕಾರ್ಯಕರ್ತರ ಅಸಮಾಧಾನ?
ಬೆಂಗಳೂರು, ಅಕ್ಟೋಬರ್ 24: ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಿ ಪಿ ಯೋಗೇಶ್ವರ್ ಗೆ ಟಿಕೆಟ್ ನೀಡಿದ ವಿಚಾರವಾಗಿ ಅಸಮಾಧಾನವಿದೆ ಎನ್ನಲಾಗಿದ್ದು, ಈ ಕುರಿತು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರು ಪ್ರತಿಕ್ರಿಯಿಸಿದ್ದಾರೆ.
ಚನ್ನಪಟ್ಟಣ ಅಭ್ಯರ್ಥಿ ವಿಚಾರವಾಗಿ ಪಕ್ಷದ ಯಾವುದೇ ಕಾರ್ಯಕರ್ತರು ಹಾಗೂ ಮುಖಂಡರಲ್ಲಿ ಅಸಮಾಧಾನವಿಲ್ಲ. ಕೆಲವರು ಡಿ.ಕೆ. ಸುರೇಶ್ ಸ್ಪರ್ಧಿಸಬೇಕು ಎಂದು ಆಸೆಪಟ್ಟಿದ್ದರು. ಆದರೆ ಈಗ ಅಸಮಾಧಾನವಿಲ್ಲ. ಸುರೇಶ್ ಅವರೇ ಜವಾಬ್ದಾರಿ ವಹಿಸಿದ್ದು, ಅವರೇ ಅಭ್ಯರ್ಥಿಯನ್ನು ಮೊದಲು ಭೇಟಿ ಮಾಡಿದ್ದಾರೆ. ಪಕ್ಷದ ಹಿತದಿಂದ ನಾವು ಈ ತೀರ್ಮಾನ ಮಾಡಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ನಾನು ಹಾಗೂ ಮುಖ್ಯಮಂತ್ರಿ ಗಳು ಚನ್ನಪಟ್ಟಣ ಉಪಚುನಾವಣೆ ಅಭ್ಯರ್ಥಿ ನಾಮಪತ್ರ ಸಲ್ಲಿಕೆಯಲ್ಲಿ ಭಾಗವಹಿಸುತ್ತೇವೆ. ಶಿಗ್ಗಾವಿ ಕ್ಷೇತ್ರದ ಅಭ್ಯರ್ಥಿ ಇನ್ನು ಮಾಹಿತಿ ಬಂದಿಲ್ಲ. ಮಾಹಿತಿ ಬಂದ ತಕ್ಷಣ ನಾವು ಪ್ರಕಟಿಸುತ್ತೇವೆ. ಆಂತರಿಕ ಸಮೀಕ್ಷೆ ನಡೆಯುತ್ತಿದೆ. ಕೆಲವರ ಅಭಿಪ್ರಾಯ ಪಡೆಯಲಾಗುತ್ತಿದೆ. ರಾಜಕೀಯವಾಗಿ ನಮಗೆ ಲಾಭವಾಗುವ ಅಂಶಗಳನ್ನು ನೋಡುತ್ತಿದ್ದೇವೆ" ಎಂದು ತಿಳಿಸಿದರು.
ಎರಡು ಬಾರಿ ಸಿಎಂ ಆಗಿದ್ದಾಗ ಚನ್ನಪಟ್ಟಣ ಕ್ಷೇತ್ರದ ಅಭಿವೃದ್ದಿಗೆ ತಮ್ಮ ಕೊಡುಗೆ ಏನು ಎನ್ನುವ ಪಟ್ಟಿಯನ್ನು ಕುಮಾರಸ್ವಾಮಿ ಅವರು ಬಿಡುಗಡೆ ಮಾಡಲಿ. ಕ್ಷೇತ್ರದ ಅಭಿವೃದ್ದಿಗೆ ಅವರ ಸಾಕ್ಷಿ ಗುಡ್ಡೆಯನ್ನು ಜನರ ಮುಂದಿಡಲಿ. ಶುಭ ಘಳಿಗೆಯಲ್ಲಿ ಯೋಗೇಶ್ವರ್ ಪಕ್ಷ ಸೇರಿದ್ದಾರೆ. ಇವರ ಕೈ ಬಲಪಡಿಸುವುದರ ಮೂಲಕ ದೇಶಕ್ಕೆ ಬಲವಾದ ಸಂದೇಶ ನೀಡಬೇಕು. ಅತಿ ಹೆಚ್ಚು ಮತಗಳ ಅಂತರದಿಂದ ಇವರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡುತ್ತೇನೆ.
ಮುಂದಿನ ದಿನಗಳಲ್ಲಿ ಮಿಕ್ಕ ವಿಚಾರಗಳನ್ನು ನಾನು ಮಾತನಾಡುತ್ತೇನೆ. ಮುಂದಿನ ದಿನಗಳಲ್ಲಿ ಸಾಕಷ್ಟು ಸಿನಿಮಾಗಳನ್ನು ನಾವು ನೋಡಬೇಕಿದೆ. ಚುನಾವಣೆ ಗೆಲ್ಲುವುದೊಂದೇ ನಮ್ಮ ಗುರಿ. ಲೋಕಸಭಾ ಚುನಾವಣೆ ಯಲ್ಲಿ ಡಿ.ಕೆ.ಸುರೇಶ್ ಅವರಿಗೆ ಚನ್ನಪಟ್ಟಣದ ಜನತೆ 80 ಸಾವಿರಕ್ಕೂ ಹೆಚ್ಚು ಮತಗಳನ್ನು ನೀಡಿದ್ದರು. ಆದರೆ ಮಿಕ್ಕ ಕಡೆ ಕಡಿಮೆ ಮತಗಳು ಬಂದ ಕಾರಣಕ್ಕೆ ಗೆಲುವು ಸಾಧ್ಯವಾಗಲಿಲ್ಲ.
ಡಿ.ಕೆ.ಶಿವಕುಮಾರ್ ಹಾಗೂ ಸುರೇಶ್ ಅವರನ್ನು ನಂಬಿ ಬಿಜೆಪಿ ಮತ್ತು ದಳದಿಂದ ಅನೇಕ ಕಾರ್ಯಕರ್ತರು ಬಂದಿದ್ದಾರೆ. ನೀವು ನಮ್ಮ ಕೈ ಬಲಪಡಿಸಿದ್ದೀರಿ, ಯಾವುದೇ ಕಾರಣಕ್ಕೂ ನಿಮ್ಮ ಹಾಗೂ ಕಾಂಗ್ರೆಸ್ ಕಾರ್ಯಕರ್ತರನ್ನು ನಡು ನೀರಿನಲ್ಲಿ ಕೈ ಬಿಡುವ ಪ್ರಶ್ನೆಯಿಲ್ಲ. ಭವಿಷ್ಯದಲ್ಲಿಯೂ ನಿಮ್ಮ ಜೊತೆ ನಾವಿರುತ್ತೇವೆ. ಯೋಗೇಶ್ವರ್ ಅವರ ಜೊತೆಯೂ ಇರುತ್ತೇವೆ.
ಚನ್ನಪಟ್ಟಣಕ್ಕೆ ಹೊಸರೂಪವನ್ನು ನೀಡುವುದಕ್ಕೆ ನಾವು ಬದ್ಧವಾಗಿದ್ದೇವೆ. ಕರ್ನಾಟಕದ ಅಭಿವೃದ್ದಿಯೇ ನಮ್ಮ ಸಂಕಲ್ಪ. ಈ ಗುರಿಯನ್ನಿಟ್ಟುಕೊಂಡು ಕಾಂಗ್ರೆಸ್ ಸರ್ಕಾರ ಕೆಲಸ ಮಾಡುತ್ತಿದೆ. ಚನ್ನಪಟ್ಟಣದ ಅಭಿವೃದ್ದಿಗೆ ಮುಖ್ಯಮಂತ್ರಿಗಳ ಬಳಿ ಮಾತನಾಡಿ ಸುಮಾರು 500 ಕೋಟಿ ಅನುದಾನ ನೀಡಲಾಗಿದೆ.
ಜಾತ್ಯಾತೀತ ಎನ್ನುವ ಹೆಸರನ್ನು ಇಟ್ಟುಕೊಂಡಿರುವ ಜನತಾದಳ ಕೋಮುವಾದಿ ಬಿಜೆಪಿ ಜೊತೆ ಏಕೆ ಮೈತ್ರಿ ಮಾಡಿಕೊಂಡಿತು. ದಳದವರು ಅನುಕೂಲದ ರಾಜಕಾರಣಕ್ಕಾಗಿ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಕುಮಾರಸ್ವಾಮಿ ಅವರು ತಮ್ಮ ಭಾವನನ್ನೇ ಬಿಜೆಪಿಯಿಂದ ಕಣಕ್ಕೆ ಇಳಿಸಿದರು.
ಚನ್ನಪಟ್ಟಣದ ಋಣವನ್ನು ತೀರಿಸಬೇಕು. ಈ ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಜೊತೆ ಕೈ ಜೋಡಿಸಿ, ಜನಸೇವೆ ಮಾಡಬೇಕು ಎನ್ನುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಕಮಲ ಕೆರೆಯಲ್ಲಿದ್ದರೆ ಚಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ. ಈ ಕೈ ಚನ್ನಪಟ್ಟಣದಲ್ಲಿ ಇದ್ದರೇ ಅಭಿವೃದ್ದಿ ಸಾಧ್ಯ.












Click it and Unblock the Notifications