Breaking: ಆ.27ರ ಕೆಪಿಎಸ್ಸಿ ಪರೀಕ್ಷೆ, ಸಿಎಂ ಮಹತ್ವದ ಹೇಳಿಕೆ
ಬೆಂಗಳೂರು, ಆಗಸ್ಟ್ 24: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ಆಗಸ್ಟ್ 27ರ ಮಂಗಳವಾರ ನಡೆಸುವ ಪರೀಕ್ಷೆಗಳ ಬಗ್ಗೆ ಎದ್ದಿರುವ ಗೊಂದಲಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೆರೆ ಎಳೆದರು. ಗೆಜೆಟೆಡ್ ಪ್ರೊಬೇಷನರ್ಸ್ 384 ಹುದ್ದೆಗಳ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಆದ್ದರಿಂದ ಮಂಗಳವಾರ ಪರೀಕ್ಷೆಗಳು ನಡೆಯಲಿದೆ. ಸುಮಾರು 2,10,910 ಅಭ್ಯರ್ಥಿಗಳು ಪರೀಕ್ಷೆಯನ್ನು ಬರೆಯಬೇಕಿದೆ.
ಕೆಪಿಎಸ್ಸಿ ಪರೀಕ್ಷೆಯನ್ನು ಮುಂದೂಡಬೇಕು ಎಂದು ಆಗ್ರಹಿಸಿ ಶನಿವಾರ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಸಂಘ (ರಿ) ಫ್ರೀಡಂಪಾರ್ಕ್ನಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದೆ. ಆದರೆ ಈ ಕುರಿತು ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿಗಳು ಪರೀಕ್ಷೆಯನ್ನು ಮುಂದೂಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ, ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ. ವೈ. ವಿಜಯೇಂದ್ರ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಅನೇಕ ರಾಜಕೀಯ ನಾಯಕರು ಸಹ ಕೆಪಿಎಸ್ಸಿ ಪರೀಕ್ಷೆಯನ್ನು ಮುಂದೂಡುವಂತೆ ಸರ್ಕಾರವನ್ನು ಆಗ್ರಹಿಸಿದ್ದರು.
ಸಿದ್ದರಾಮಯ್ಯ ಹೇಳಿದ್ದೇನು?: ಶನಿವಾರ ಬೆಂಗಳೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, "ಕೆಲವರು ಪರೀಕ್ಷೆ ಮುಂದೂಡಬೇಕೆಂದು ಹೇಳುತ್ತಿದ್ದಾರೆ. ಆದರೆ ನಾವು ಈಗ ಪರೀಕ್ಷೆಯನ್ನು ಮುಂದೂಡುವುದಿಲ್ಲ" ಎಂದು ಹೇಳಿದರು.
ಆಗಸ್ಟ್ 27ರಂದು ನಡೆಯುವ ಪರೀಕ್ಷೆಗಳಿಗೆ ಹಾಲ್ ಟಿಕೆಟ್ ಡೌನ್ಲೋಡ್ ಮಾಡಿಕೊಳ್ಳಲು ಅಭ್ಯರ್ಥಿಗಳಿಗೆ ಸೂಚನೆ ನೀಡಲಾಗಿದೆ. ವೇಳಾಪಟ್ಟಿ ಪ್ರಕಾರ ಮಂಗಳವಾರ ಬೆಳಗ್ಗೆ 10 ರಿಂದ 12 ಗಂಟೆಯ ತನಕ ಪತ್ರಿಕೆ-1, ಮಧ್ಯಾಹ್ನ 2 ರಿಂದ 4 ಗಂಟೆಯ ತನಕ ಪತ್ರಿಕೆ-2ರ ಪರೀಕ್ಷೆಗಳು ನಡೆಯಲಿದೆ.
ಮೊದಲು ಈ ಪರೀಕ್ಷೆಯನ್ನು ಆಗಸ್ಟ್ 25ರ ಭಾನುವಾರ ನಡೆಸಲು ವೇಳಾಪಟ್ಟಿ ಪ್ರಕಟಿಸಲಾಗಿತ್ತು. ಆದರೆ ಅಂದು ಐಬಿಪಿಎಸ್ ಪರೀಕ್ಷೆ ಇರುವ ಕಾರಣ ಪರೀಕ್ಷೆಗಳನ್ನು ಮುಂದೂಡಬೇಕು ಎಂದು ಅಭ್ಯರ್ಥಿಗಳು ಸರ್ಕಾರದ ಗಮನ ಸೆಳೆದಿದ್ದರು. ಅಂತಿಮವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆಯಂತೆ ಆಗಸ್ಟ್ 27ಕ್ಕೆ ಪರೀಕ್ಷೆ ನಿಗದಿ ಮಾಡಲಾಗಿತ್ತು.
ಕೆಪಿಎಸ್ಸಿ ಪರೀಕ್ಷೆಗಾಗಿ ಎಲ್ಲಾ ಅಗತ್ಯ ತಯಾರಿಯನ್ನು ಮಾಡಿಕೊಂಡಿದೆ. ಪರೀಕ್ಷೆಗಳು ನಡೆಯುವ 214 ಸರ್ಕಾರಿ, 189 ಅನುದಾನಿತ ಮತ್ತು 161 ಶಾಸಗಿ ಶಾಲಾ-ಕಾಲೇಜುಗಳು ಸೇರಿದಂತೆ, ಒಟ್ಟಾರೆ 564 ಪರೀಕ್ಷಾ ಉಪ ಕೇಂದ್ರಗಳಿಗೆ, ಒಂದು ದಿನದ (ಆ.27) ವಿಶೇಷ/ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿದೆ.
ಅಲ್ಲದೇ ಸದ್ಯ ಸರ್ಕಾರಿ ನೌಕರಿ ಮಾಡುತ್ತಿರುವ ಹಲವು ಅಭ್ಯರ್ಥಿಗಳು 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್ 'ಎ' ಮತ್ತು ಗ್ರೂಪ್ 'ಬಿ' ವೃಂದದ ಹುದ್ದೆಗಳ ನೇಮಕಾತಿಯ ಪೂರ್ವಭಾವಿ ಪರೀಕ್ಷೆಯನ್ನು ಬರೆಯಲಿದ್ದಾರೆ. ಅವರಿಗೆ ಅನುಕೂಲವಾಗುವಂತೆ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲಾಗಿದೆ.
ಕರ್ನಾಟಕ ಸರ್ಕಾರ ಕೆಎಎಸ್ ಹುದ್ದೆಗಳ ನೇಮಕಾತಿ ಮಾಡದೇ ಹಲವು ವರ್ಷಗಳು ಕಳೆದಿವೆ. ಆದ್ದರಿಂದ 2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ ವಯಸ್ಸಿನ ನಿರ್ಬಂಧವಿಲ್ಲದೆ ಒಂದು ಬಾರಿಗೆ ಸೀಮಿತಗೊಳಿಸಿ 2023-24ರ ನೇಮಕಾತಿಗೂ ಅರ್ಜಿ ಸಲ್ಲಿಸಲು ವಿಶೇಷ ಅವಕಾಶವನ್ನು ನೀಡಲಾಗಿತ್ತು.
ಈ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಿದ ಮೇಲೆ ಪೂರ್ವಭಾವಿ ಪರೀಕ್ಷೆಗೆ ತಯಾರಾಗಲು ಕೇವಲ 1 ತಿಂಗಳ ಅವಕಾಶ ಸಿಕ್ಕಿದೆ. ಆದ್ದರಿಂದ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡಬೇಕು, ಅಭ್ಯರ್ಥಿಗಳು ಪರೀಕ್ಷೆಗೆ ತಯಾರಾಗಲು ಹೆಚ್ಚಿನ ಅವಕಾಶ ನೀಡಬೇಕು ಎಂದು ಮನವಿ ಮಾಡಲಾಗಿತ್ತು.












Click it and Unblock the Notifications