ಸಂಪುಟ ದರ್ಜೆ ಸ್ಥಾನಮಾನ ನೀಡಲು ನಿರ್ಬಂಧವಿಲ್ಲ; ಹೈಕೋರ್ಟ್
ಬೆಂಗಳೂರು, ಸೆಪ್ಟೆಂಬರ್ 08; ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ವಿಧಾನ ಪರಿಷತ್ ಸದಸ್ಯ ನಜೀರ್ ಅಹಮದ್, ಕೆ. ಗೋವಿಂದರಾಜ್, ಮುಖ್ಯಮಂತ್ರಿಗಳ ಮುಖ್ಯ ಸಲಹೆಗಾರರಾಗಿ ಸುನೀಲ್ ಕನಗೋಲು ಹಾಗೂ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ ಕೆ. ವಿ. ಪ್ರಭಾಕರ್ ನೇಮಕ ಮಾಡಿ ಸಂಪುಟ ದರ್ಜೆಯ ಸ್ಥಾನಮಾನ ನೀಡಿರುವ ಕ್ರಮ ಪ್ರಶ್ನಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.
ವಕೀಲ ಎಸ್. ಉಮಾಪತಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ನ್ಯಾಯಪೀಠ ಅರ್ಜಿ ವಜಾಗೊಳಿಸಿದೆ. ಅಲ್ಲದೆ, ಸಂಪುಟ ದರ್ಜೆ ಸ್ಥಾನಮಾನ ನೀಡಲು ಸಂವಿಧಾನದಲ್ಲಿ ಯಾವುದೇ ನಿರ್ಬಂಧ ಇಲ್ಲ ಎಂದು ಹೇಳಿದೆ.

ವಾದ-ಪ್ರತಿವಾದ ಆಲಿಸಿದ ಬಳಿಕ ನ್ಯಾಯಾಲಯ, ಸಚಿವರನ್ನು ಹೊರತು ಪಡಿಸಿ ಇತರರಿಗೆ ಕ್ಯಾಬಿನೆಟ್ ದರ್ಜೆ ಸ್ಥಾನಮಾನ ನೀಡಬಾರದೆಂದು ಸಂವಿಧಾನದಲ್ಲಿ ಎಲ್ಲೂ ಹೇಳಿಲ್ಲ. ಅಲ್ಲದೆ, ಅರ್ಜಿಯಲ್ಲಿ ಪ್ರತಿವಾದಿಗಳಾಗಿರುವವರಿಗೆ ಯಾವುದೇ ಇಲಾಖೆ ನೀಡಿ ಸರ್ಕಾರದ ಜವಾಬ್ದಾರಿಗಳನ್ನು ನೀಡಿಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು.
ಅರ್ಜಿದಾರರ ಆಕ್ಷೇಪವೇಕೆ?; ನಜೀರ್ ಅಹ್ಮದ್, ಕೆ. ಗೋವಿಂದರಾಜ್, ಸುನೀಲ್ ಕನಗೋಲು ಹಾಗೂ ಕೆ. ವಿ. ಪ್ರಭಾಕರ್ ಅವರಿಗೆ ಈ ಹುದ್ದೆಗಳನ್ನು ಸೃಜಿಸಿ ಸಂಪುಟ ದರ್ಜೆ ಸ್ಥಾನಮಾನ ನೀಡಲಾಗಿದೆ. ಇವರಿಗೆ ನೀಡಲಾಗುವ ಸಂಬಳ, ಸಾರಿಗೆ, ವಸತಿ ಭತ್ಯೆ ಇತ್ಯಾದಿ ಖರ್ಚುಗಳು ರಾಜ್ಯದ ಬೊಕ್ಕಸದಿಂದ ವಿನಾ ಕಾರಣ ಭರಿಸುವಂತಾಗಿದೆ.
ಇವೆಲ್ಲ ರಾಜಕೀಯ ನೇಮಕಾತಿ ಹಾಗೂ ಏಕಪಕ್ಷೀಯ ನಿರ್ಧಾರಗಳು. ಮುಖ್ಯಮಂತ್ರಿಗಳ ಕಚೇರಿ ಎಂಬುದು ಸಾರ್ವಜನಿಕ ಕಚೇರಿ. ಆದರೆ, ಇಲ್ಲೀಗ ಮುಖ್ಯಮಂತ್ರಿಗಳ ಬಂಧುಗಳು, ಅವರ ರಾಜಕೀಯ ಬೆಂಬಲಿಗರಿಗೆ ಆಸ್ಪದ ನೀಡಲಾಗಿದೆ. ಕಾನೂನಿನಲ್ಲಿ ಇಂತಹ ಹುದ್ದೆಗಳನ್ನು ರೂಪಿಸಲು ಅವಕಾಶವಿಲ್ಲ ಎಂದು ಅರ್ಜಿದಾರರು ಆಕ್ಷೇಪ ಎತ್ತಿದ್ದರು.
ಇದು ಕಾನೂನಿನ ಗಂಭೀರ ಉಲ್ಲಂಘನೆಯಾಗಿದೆ. ಉತ್ತಮ ಆಡಳಿತ ನೀಡುವ ಮೂಲಭೂತ ಆಶಯಗಳಿಗೆ ವಿರುದ್ಧವಾಗಿದೆ. ಅರ್ಜಿಯಲ್ಲಿನ ಪ್ರತಿವಾದಿಗಳಾಗಿರುವ ಖಾಸಗಿ ವ್ಯಕ್ತಿಗಳಿಗೆ ಸಾರ್ವಜನಿಕ ಕಚೇರಿಯಲ್ಲಿ ಮುಂದುವರೆಯಲು ಅವಕಾಶ ನೀಡಿದಲ್ಲಿ ದುರುಪಯೋಗವಾಗಲಿದೆ. ಹೀಗಾಗಿ ತಕ್ಷಣದಿಂದ ಅವರ ಕಾರ್ಯವನ್ನು ಸ್ಥಗಿತಗೊಳಿಸಲು ಮಧ್ಯಂತರ ಆದೇಶ ನೀಡಬೇಕು ಎಂದು ಅರ್ಜಿಯಲ್ಲಿ ಕೋರಿದ್ದರು.












Click it and Unblock the Notifications