Government Employee: ಸರ್ಕಾರಿ ನೌಕರರ ವೇತನ ಹೆಚ್ಚಳವಿಲ್ಲ, ಕಾರಣವೇನು?
ಬೆಂಗಳೂರು, ಜುಲೈ 08: ಕರ್ನಾಟಕದ ಕಾಂಗ್ರೆಸ್ ಸರ್ಕಾರ ಕೆ. ಸುಧಾಕರ್ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ವರದಿ ಜಾರಿಗೊಳಿಸುತ್ತಿಲ್ಲ. ಇದರಿಂದಾಗಿ ಸರ್ಕಾರಿ ನೌಕರರ ವೇತನ ಏರಿಕೆಯಾಗುತ್ತಿಲ್ಲ. ಈಗ ನೌಕರರು ಅನಿರ್ಧಿಷ್ಟಾವಧಿ ಮುಷ್ಕರ ಘೋಷಣೆ ಮಾಡಿದ್ದಾರೆ.
ರಾಜ್ಯ ಸರ್ಕಾರಿ ನೌಕರರಿಗೆ ಪದೇ ಪದೇ ನಿರಾಸೆಯಾಗುತ್ತಿದೆ. 7ನೇ ವೇತನ ಆಯೋಗದ ವರದಿ ಅನುಷ್ಠಾನದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳುತ್ತಿಲ್ಲ. ಇದಕ್ಕೆ ಕಾರಣ ಬಹಿರಂಗವಾಗಿದೆ.

ಆರ್. ಅಶೋಕ ಪೋಸ್ಟ್: ಪ್ರತಿಪಕ್ಷ ನಾಯಕ ಆರ್. ಅಶೋಕ ಸೋಮವಾರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಒಂದನ್ನು ಹಾಕಿದ್ದಾರೆ. ಸರ್ಕಾರಿ ನೌಕರರ ವೇತನ ಏಕೆ ಹೆಚ್ಚಳವಿಲ್ಲ ಎಂದು ವಿವರಣೆ ನೀಡಿದ್ದಾರೆ.
ಆರ್. ಅಶೋಕ, ಸ್ವಯಂಘೋಷಿತ ಆರ್ಥಿಕ ತಜ್ಞ ಸಿಎಂ Siddaramaiah ನವರ ದುರಾಡಳಿತದಲ್ಲಿ
* ಗುತ್ತಿಗೆದಾರರ ಬಾಕಿ ಹಣ ಪಾವತಿಗೆ ದುಡ್ಡಿಲ್ಲ
* ಸರ್ಕಾರಿ ನೌಕರರ ವೇತನ ಹೆಚ್ಚಳವಿಲ್ಲ
* ಗೃಹಲಕ್ಷ್ಮೀ ಹಣ ಬರುತ್ತಿಲ್ಲ
* ರೈತರಿಗೆ ಪ್ರೋತ್ಸಾಹಧನವಿಲ್ಲ
Outgoing CM Siddaramaiah CM Of Karnataka ನವರ ಏಕೈಕ ಸಾಧನೆ ಅಂದರೆ ಅದು ಕರ್ನಾಟಕದ ಆರ್ಥಿಕ ಪರಿಸ್ಥಿತಿಯನ್ನ ಅಧೋಗತಿಗೆ ತಳ್ಳಿರುವುದು ಎಂದು ಗಂಭೀರವಾದ ಆರೋಪ ಮಾಡಿದ್ದಾರೆ.
ಪತ್ರಿಕೆಯ ಸುದ್ದಿಯೊಂದನ್ನು ಉಲ್ಲೇಖ ಮಾಡಿರುವ ಆರ್. ಅಶೋಕ ಈ ಪೋಸ್ಟ್ ಹಾಕಿದ್ದಾರೆ. ಸುದ್ದಿಯಲ್ಲಿ ಗ್ಯಾರಂಟಿ ಹೊರೆ ಆರ್ಥಿಕತೆಗೆ ಬರೆ ಎಂದು ತಿಳಿಸಲಾಗಿದೆ. ಗುತ್ತಿಗೆದಾರರ ಹಣ ಬಾಕಿ, ಸರ್ಕಾರಿ ನೌಕರರ ವೇತನ ಏರಿಕೆ ವಿಳಂಬ, ಬರುತ್ತಿಲ್ಲ ಗೃಹಲಕ್ಮೀ ಹಣ, ರೈತರಿಗಿಲ್ಲ ಪ್ರೋತ್ಸಾಹ ಧನ ಎಂದು ವಿವರಿಸಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಣಕಾಸು ಸಚಿವರೂ ಹೌದು. ಮಾರ್ಚ್ 16 ರಂದು ಕೆ. ಸುಧಾಕರ್ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗ ಅವರಿಗೆ ವರದಿಯನ್ನು ನೀಡಿದೆ. ವರದಿಯಲ್ಲಿ ಮೂಲ ವೇತನದ ಶೇಕಡ 27.5 ರಷ್ಟು ಹೆಚ್ಚಳ ಮಾಡಲು ಶಿಫಾರಸು ಮಾಡಿದೆ. ವರದಿಯನ್ನು ಪರಿಶೀಲಿಸಿ ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ.
ವರದಿಯಲ್ಲಿ ಕನಿಷ್ಠ ಮೂಲ ವೇತನವನ್ನು ರೂ.17,000 ದಿಂದ ರೂ.27,000ಕ್ಕೆ ಹೆಚ್ಚಿಸುವಂತೆ ಶಿಫಾರಸು ಮಾಡಲಾಗಿದೆ. ಇದರೊಂದಿಗೆ ಇನ್ನೂ ಅನೇಕ ಶಿಫಾರಸುಗಳಿದ್ದು ವರದಿಯನ್ನು ಆರ್ಥಿಕ ಇಲಾಖೆಗೆ ನೀಡಲಾಗಿದೆ. ಆರ್ಥಿಕ ಇಲಾಖೆಯು ವರದಿಯನ್ನು ಕೂಲಂಕುಷವಾಗಿ ಅಧ್ಯಯನ ಮಾಡಿದ ನಂತರ ನೀಡುವ ಸಲಹೆಗಳ ಆಧಾರದಲ್ಲಿ ಸರ್ಕಾರ ಮುಂದಿನ ತೀರ್ಮಾನ ಕೈಗೊಳ್ಳಲಿದೆ.
ವೇತನ ಆಯೋಗದ ವರದಿ ಜಾರಿಗಾಗಿ ಸರ್ಕಾರಕ್ಕೆ 18 ಸಾವಿರ ಕೋಟಿ ಹೆಚ್ಚುವರಿ ಹೊರೆಯಾಗಲಿದೆ ಎಂದು ಅಂದಾಜಿಸಲಾಗಿದೆ. ಈಗಾಗಲೇ 5 ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಪ್ರಯತ್ನ ನಡೆಸಿರುವ ಸರ್ಕಾರ 7ವೇ ವೇತನ ಆಯೋಗದ ವರದಿ ಜಾರಿಯನ್ನು ತಾತ್ಕಾಲಿಕವಾಗಿ ಮುಂದೂಡಿಕೆ ಮಾಡಿದೆ. ಇದರಿಂದಾಗಿ ಸರ್ಕಾರಿ ನೌಕರರ ವೇತನ ಸಹ ಏರಿಕೆಯಾಗುತ್ತಿಲ್ಲ.
ವೇತನ ಪರಿಷ್ಕರಣೆಗೆ ಕಾದು ಕಾದು ಸರ್ಕಾರಿ ನೌಕರರು ಈಗ ಅಸಮಾಧಾನಗೊಂಡಿದ್ದಾರೆ. ಜುಲೈ ಅಂತ್ಯ ಅಥವ ಆಗಸ್ಟ್ ಮೊದಲ ವಾರದಲ್ಲಿ ಅನಿರ್ಧಿಷ್ಟಾವಧಿ ಮುಷ್ಕರ ನಡೆಸುವುದಾಗಿ ಘೋಷಣೆ ಮಾಡಿದ್ದಾರೆ. ಈ ಕುರಿತು ಭಾನುವಾರ ಚಿಕ್ಕಮಗಳೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ.
ಸಭೆಯಲ್ಲಿ ಮಾತನಾಡಿದ ಸಂಘದ ರಾಜ್ಯಾಧ್ಯಕ್ಷ ಸಿ. ಎಸ್. ಷಡಾಕ್ಷರಿ, "7ನೇ ವೇತನ ಆಯೋಗದ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗಿದ್ದರೂ ಸಹ ಅದರ ಶಿಫಾರಸು ಜಾರಿಗೊಳಿಸಿಲ್ಲ. ನೌಕರರು ಕರ್ತವ್ಯಕ್ಕೆ ಗೈರಾಗುವ ಮೂಲಕ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲಾಗುತ್ತದೆ" ಎಂದು ಹೇಳಿದ್ದಾರೆ.












Click it and Unblock the Notifications