ಸಹಾಯಕ ಪ್ರಾಧ್ಯಾಪಕರ ಹುದ್ದೆ ಪರೀಕ್ಷೆಗೆ ಹೈಕೋರ್ಟ್ ತಡೆ ನೀಡಿಲ್ಲ, ಆ ಕುರಿತ ವಂದತಿ ನಂಬಬೇಡಿ
ಬೆಂಗಳೂರು ಮಾ.11 ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಪದವಿ ಕಾಲೇಜುಗಳಲ್ಲಿ ಖಾಲಿಯಿರುವ ಒಟ್ಟು 1241 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ ಸಂಬಂಧ ನಾಳೆಯಿಂದ ಆರಂಭವಾಗಲಿರುವ ಪರೀಕ್ಷೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿಲ್ಲ.
ಆ ಕುರಿತು ಕೆಲವು ಮಾಧ್ಯಮಗಳನ್ನು ಹರಿದಾಡುತ್ತಿರುವ ಸುದ್ದಿ ಕೇವಲ ವದಂತಿ ಅಷ್ಟೇ. ಕೋರ್ಟ್ ತಡೆ ನೀಡಿರುವುದು ಕೇವಲ 19 ಹುದ್ದೆಗಳಿಗೆ ಮಾತ್ರ, ಇಡೀ ಪರೀಕ್ಷೆಗೆ ಅಲ್ಲ.
ಪರೀಕ್ಷೆಗೆ ಹಸಿರು ನಿಶಾನೆ ತೋರಿರುವ ಹೈಕೋರ್ಟ್, ರಾಜ್ಯದ ವಿವಿಧ ಪದವಿ ಕಾಲೇಜುಗಳ ಪ್ರಾಣಿಶಾಸ್ತ್ರ ಹಾಗೂ ಸಸ್ಯಶಾಸ್ತ್ರ ವಿಷಯಗಳಿಗೆ ಪರಿವರ್ತಿಸಿರುವ 19 ಮನೋವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಮಾತ್ರ ಭರ್ತಿ ಮಾಡದಂತೆ ತಡೆಯಾಜ್ಞೆ ನೀಡಿದೆ.
ಡಾ.ಮೀನಾಕ್ಷಿ ಸೇರಿದಂತೆ ವಿವಿಧ ವಿಶ್ವ ವಿದ್ಯಾಲಯಗಳ ಹಾಗೂ ಸರ್ಕಾರಿ ಪ್ರಥಮ ದರ್ಜೆ ಪದವಿ ಕಾಲೇಜುಗಳ ಉಪನ್ಯಾಸಕರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ.ನರೇಂದರ್ ನೇತೃತ್ವದ ವಿಭಾಗೀಯಪೀಠ ಶುಕ್ರವಾರ ಈ ಆದೇಶ ಮಾಡಿದೆ.
ಪ್ರಕರಣದ ಅಂಶಗಳು ಮತ್ತು ಕೆಎಟಿ ಹೊರಡಿಸಿರುವ ಆದೇಶವನ್ನು ಪರಿಶೀಲನೆ ನಡೆಸಿದಾಗ ಪ್ರಾಣಿಶಾಸ್ತ್ರ ಮತ್ತು ಸಸ್ಯಶಾಸ್ತ್ರ ವಿಷಯಗಳಿಗೆ ಪರಿವರ್ತಿಸಿದ ಮನೋವಿಜ್ಞಾನ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಭರ್ತಿ ಮಾಡುವುದರಿಂದ ಸರ್ಕಾರವನ್ನು ತಡೆಹಿಡಿದರೆ ಯಾವುದೇ ಅನ್ಯಾಯ ಆಗುವುದಿಲ್ಲ ಎಂದು ಹೈಕೋರ್ಟ್ ಆದೇಶದಲ್ಲಿ ಹೇಳಿದೆ
ಆದರೆ, ಪರೀಕ್ಷೆ ಪ್ರಕ್ರಿಯೆಯಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸುವುದಿಲ್ಲ. ಪ್ರಾಣಿಶಾಸ್ತ್ರ ಮತ್ತು ಸಸ್ಯಶಾಸ್ತ್ರ ವಿಷಯಗಳಿಗೆ ಪರಿವರ್ತಿಸಿದ ಮನೋವಿಜ್ಞಾನ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಭರ್ತಿ ಮಾಡುವುದಕ್ಕೆ ತಡೆಯಾಜ್ಞೆ ನೀಡಲಾಗಿದೆ ಎಂದು ಹೈಕೋರ್ಟ್ ಆದೇಶದಲ್ಲಿ ಸ್ಪಷ್ಟಪಡಿಸಿ ವಿಚಾರಣೆಯನ್ನು ಏ.4ಕ್ಕೆ ಮುಂದೂಡಿದೆ.
ಪ್ರಕರಣದ ಹಿನ್ನೆಲೆ:
ರಾಜ್ಯದ ವಿವಿಧ ಪದವಿ ಕಾಲೇಜುಗಳಲ್ಲಿ ಒಟ್ಟು 29 ಮನೋವಿಜ್ಞಾನ ಪ್ರಾಧ್ಯಾಪಕರ ಹುದ್ದೆಗಳಿವೆ. ವಿದ್ಯಾರ್ಥಿಗಳ ಕೊರತೆಯಿಂದ ಆ ಹುದ್ದೆಗಳು ಖಾಲಿ ಉಳಿದಿವೆ. ಆದ್ದರಿಂದ, ಈ ಹುದ್ದೆಗಳಲ್ಲಿ 10 ಹುದ್ದೆಗಳನ್ನು ಪ್ರಾಣಿಶಾಸ್ತ್ರ ಹಾಗೂ 9 ಹುದ್ದೆಗಳನ್ನು ಸಸ್ಯಶಾಸ್ತ್ರ ವಿಭಾಗಕ್ಕೆ ಪರಿವರ್ತಿಸಿ ಸ್ಥಳಾಂತರಿಸಲು ಕಾಲೇಜು ಶಿಕ್ಷಣ ಇಲಾಖೆ 2021ರ ಜೂ.29ರಂದು ಆದೇಶಿಸಿತ್ತು. ಈ ಆದೇಶ ಪ್ರಶ್ನಿಸಿ ಅರ್ಜಿದಾರರು, ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿಗೆ (ಕೆಎಟಿ) ತಕರಾರು ಅರ್ಜಿ ಸಲ್ಲಿಸಿದ್ದರು. ಆದರೆ, ಈ ಅರ್ಜಿಯನ್ನು ಕೆಎಟಿ ವಜಾಗೊಳಿಸಿತ್ತು. ಹಾಗಾಗಿ, ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲಾಗಿದೆ.
ಪರೀಕ್ಷೆ ರದ್ದಾಗಿಲ್ಲ: ಸ್ಪಷ್ಟನೆ
ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿಗೆ ವೇಳಾಪಟ್ಟಿಯಂತೆ ಪರೀಕ್ಷೆ ನಡೆಯಲಿದ್ದು, ಪರೀಕ್ಷೆ ರದ್ದಾಗಿದೆ ಎಂಬ ವದಂತಿಯನ್ನು ನಂಬಬಾರದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸ್ಪಷ್ಟನೆ ನೀಡಿದೆ.
ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯ ಭಾಗವಾಗಿ ಮಾರ್ಚ್ 12ರಿಂದ 16ರವರೆಗೆ ನಿಗದಿಯಾಗಿರುವ ಸ್ಪರ್ಧಾತ್ಮಕ ಪರೀಕ್ಷೆಯು ಅಬಾಧಿತವಾಗಿ ಮತ್ತು ಕಟ್ಟುನಿಟ್ಟಾಗಿ ನಡೆಯಲಿದೆ.
ಈ ಸಂಬಂಧವಾಗಿ ಕೋರ್ಟ್ ತಡೆಯಾಜ್ಞೆ ನೀಡಿದೆ ಎನ್ನುವ ಆಧಾರರಹಿತ ವದಂತಿಯನ್ನು ಅಭ್ಯರ್ಥಿಗಳು ನಂಬಿ, ಮೋಸ ಹೋಗಬಾರದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಇ.ಡಿ ರಮ್ಯ ಅವರು ತಿಳಿಸಿದ್ದಾರೆ.
ಪರೀಕ್ಷೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ ಎಂದು ಶುಕ್ರವಾರ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಇದನ್ನು ನಂಬಿ ಪರೀಕ್ಷೆಗೆ ಗೈರುಹಾಜರಾಗಬಾರದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪರೀಕ್ಷೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ ಎಂದು ಶುಕ್ರವಾರ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದ ಸಂಗತಿಗೆ
ಸಂಬಂಧಿಸಿದಂತೆ ಅವರು ಈ ಸ್ಪಷ್ಟೀಕರಣ ನೀಡಿದ್ದಾರೆ.
Recommended Video