'ಸರ್ಕಾರಕ್ಕೆ ತೊಂದರೆ ಇಲ್ಲ, ಶಾಸಕರಿಗೆ ಕುಂದು ಕೊರತೆಗಳಿವೆ' : ಡಿಕೆಶಿ
ಬೆಂಗಳೂರು, ಜುಲೈ 03 : 'ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರಕ್ಕೆ ಯಾವ ತೊಂದರೆಯೂ ಇಲ್ಲ. ಆದರೆ, ಕೆಲವು ಶಾಸಕರಿಗೆ ಕುಂದು ಕೊರತೆಗಳಿವೆ' ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು.
ಬುಧವಾರ ವಿಕಾಸಸೌಧಲ್ಲಿ ಡಿ.ಕೆ.ಶಿವಕುಮಾರ್ ಅವರು ಪತ್ರಿಕಾಗೋಷ್ಠಿ ನಡೆಸಿದರು. 'ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರಕ್ಕೆ ಯಾವ ಅಪಾಯವೂ ಇಲ್ಲ. ಆದರೆ, ಶಾಸಕರಿಗೆ ಕೆಲ ಕುಂದು ಕೊರತೆಗಳಿವೆ' ಎಂದರು.
'ಜುಲೈ 9 ಹಾಗೂ 10ರಂದು ಜಿಲ್ಲಾವಾರು ಶಾಸಕರ ಸಭೆಯನ್ನು ನಡೆಸಿ ಕುಮಾರಸ್ವಾಮಿ ಅವರು ಕುಂದು ಕೊರತೆ ಪರಿಹರಿಸಲಿದ್ದಾರೆ' ಎಂದು ಹೇಳಿದ ಡಿ.ಕೆ.ಶಿವಕುಮಾರ್ ಅವರು ಸರ್ಕಾರ ಸುಭದ್ರವಾಗಿದೆ ಎಂಬ ಸಂದೇಶ ಕೊಟ್ಟರು.

'ತಮಗೆ ಗೊತ್ತಿದ್ದಂತೆ ಸಮ್ಮಿಶ್ರ ಸರ್ಕಾರಕ್ಕೆ ಯಾವ ತೊಂದರೆಯೂ ಇಲ್ಲ. ಮುಖ್ಯಮಂತ್ರಿಗಳು ಅಮೆರಿಕ ಪ್ರವಾಸದಿಂದ ವಾಪಸ್ ಬಂದ ಬಳಿಕ ಶಾಸಕರ ಕುಂದು ಕೊರತೆ ಏನು ಎಂಬುದನ್ನು ತಿಳಿದುಕೊಳ್ಳಲಿದ್ದಾರೆ. ಅದಕ್ಕೆ ಪರಿಹಾರ ಸೂಚಿಸಲಿದ್ದಾರೆ' ಎಂದು ಡಿ.ಕೆ.ಶಿವಕುಮಾರ್ ಹೇಳಿದರು.
ಸೋಮವಾರ ವಿಜಯನಗರ ಶಾಸಕ ಆನಂದ್ ಸಿಂಗ್, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇನ್ನಷ್ಟು ಶಾಸಕರು ರಾಜೀನಾಮೆ ನೀಡಲಿದ್ದು, ಕರ್ನಾಟಕ ಕಾಂಗ್ರೆಸ್-ಜೆಡಿಎಸ್ ಸರ್ಕಾರ ಪತನವಾಗಲಿದೆ ಎಂಬ ಸುದ್ದಿಗಳು ಹಬ್ಬಿದ್ದವು.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಅಮೆರಿಕ ಪ್ರವಾಸದಲ್ಲಿದ್ದಾರೆ. ಜುಲೈ 6ರಂದು ಅವರು ರಾಜ್ಯಕ್ಕೆ ವಾಪಸ್ ಅಗಲಿದ್ದಾರೆ. ಆನಂದ್ ಸಿಂಗ್ ಮತ್ತು ರಮೇಶ್ ಜಾರಕಿಹೊಳಿ ಅವರು ನೀಡಿರುವ ರಾಜೀನಾಮೆ ಇನ್ನೂ ಅಂಗೀಕಾರವಾಗಿಲ್ಲ.











Click it and Unblock the Notifications