ಹರ್ಷ ಮೊಯ್ಲಿಗೆ ಟಿಕೆಟ್ ಇಲ್ಲ : ಜಿ.ಪರಮೇಶ್ವರ
ಬೆಂಗಳೂರು, ಮಾರ್ಚ್ 26 : ಮಾಜಿ ಕೇಂದ್ರ ಸಚಿವ ಎಂ.ವೀರಪ್ಪ ಮೊಯ್ಲಿ ಪುತ್ರ ಹರ್ಷ ಮೊಯ್ಲಿಗೆ 2018ರ ವಿಧಾನಸಭೆ ಚುನಾವಣೆ ಟಿಕೆಟ್ ನೀಡುವುದಿಲ್ಲ. ಕಾಂಗ್ರೆಸ್ ಪಕ್ಷ ಅಧಿಕೃತವಾಗಿ ಈ ಬಗ್ಗೆ ಘೋಷಣೆ ಮಾಡಿದೆ.
ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ಸೋಮವಾರ ಈ ಕುರಿತು ಮಾಹಿತಿ ನೀಡಿದರು. ಸೋಮವಾರ ಕೆಪಿಸಿಸಿ ಚುನಾವಣಾ ಸಮಿತಿ ಸಭೆ ನಡೆಯಿತು. ಸಭೆಯ ಬಳಿಕ ಜಿ.ಪರಮೇಶ್ವರ ಅವರು ಮಾಧ್ಯಮಗಳ ಜೊತೆ ಮಾತನಾಡಿದರು.

'ಹರ್ಷ ಮೊಯ್ಲಿ ಅವರು ಟಿಕೆಟ್ ಪಡೆಯಲು ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ವಾಪಸ್ ಪಡೆಯಲು ಸೂಚಿಸಲಾಗುತ್ತದೆ. ಈ ಬಾರಿಯ ಚುನಾವಣೆಯಲ್ಲಿ ಅವರಿಗೆ ಟಿಕೆಟ್ ನೀಡುವುದಿಲ್ಲ' ಎಂದು ಪರಮೇಶ್ವರ ಹೇಳಿದರು.
'ಎಂ.ವೀರಪ್ಪ ಮೊಯ್ಲಿ ಅವರು ಚುನಾವಣಾ ಸಮಿತಿಗೆ ಹರ್ಷ ಮೊಯ್ಲಿ ಅವರ ಅರ್ಜಿಯನ್ನು ಪರಿಗಣನೆ ಮಾಡದಂತೆ ಮನವಿ ಮಾಡಿದ್ದಾರೆ. ಆದ್ದರಿಂದ, ಅವರ ಅರ್ಜಿಯನ್ನು ಟಿಕೆಟ್ಗಾಗಿ ಪರಿಗಣನೆ ಮಾಡುವುದಿಲ್ಲ' ಎಂದು ಪರಮೇಶ್ವರ ಸ್ಪಷ್ಟಪಡಿಸಿದರು.
ಕೆಲವು ದಿನಗಳ ಹಿಂದೆ ಹರ್ಷ ಮೊಯ್ಲಿ ಅವರು ತಮ್ಮ ಟ್ವಿಟರ್ ಖಾತೆಯಿಂದ, 'ಹಣದ ರಾಜಕೀಯಕ್ಕೆ ಕಾಂಗ್ರೆಸ್ ಅಂತ್ಯ ಹಾಡಬೇಕಿದೆ. ರಸ್ತೆ ಗುತ್ತಿಗೆದಾರರು ಮತ್ತು ಅವರೊಂದಿಗೆ ಸಂಬಂಧ ಹೊಂದಿರುವ ರಾಜ್ಯದ ಲೋಕೋಪಯೋಗಿ ಸಚಿವ ಮುಂಬರುವ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ನಿರ್ಧರಿಸಲಾಗದು' ಎಂದು ಟ್ವಿಟ್ ಮಾಡಲಾಗಿತ್ತು.
ಈ ಟ್ವೀಟ್ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ ನಡೆದಿತ್ತು. ಪ್ರತಿಪಕ್ಷ ಬಿಜೆಪಿ ಈ ಟ್ವೀಟ್ ಮುಂದಿಟ್ಟುಕೊಂಡು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿತ್ತು. ಇದರಿಂದ ಕಾಂಗ್ರೆಸ್ ಪಕ್ಷಕ್ಕೆ ಮುಜುಗರ ಉಂಟಾಗಿತ್ತು.
ಹರ್ಷ ಮೊಯ್ಲಿ ಅವರು ದಕ್ಷಿಣ ಕನ್ನಡದ ಕಾರ್ಕಳ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಈ ಕ್ಷೇತ್ರಕ್ಕೆ ಉದಯ ಕುಮಾರ್ ಶೆಟ್ಟಿ ಅವರು ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಉದಯ ಕುಮಾರ್ ಶೆಟ್ಟಿ ಲೋಕೋಪಯೋಗಿ ಸಚಿವ ಎಚ್.ಸಿ.ಮಹದೇವಪ್ಪ ಅವರ ಆಪ್ತರು.












Click it and Unblock the Notifications