ಮುಸ್ಲಿಂ ಸಮುದಾಯದಲ್ಲಿ ಪ್ರತಿಮೆಗಳ ಸಂಸ್ಕೃತಿಯಿಲ್ಲ: ಜೆಡಿಎಸ್ ನಾಯಕ ಇಬ್ರಾಹಿಂ
ಬೆಂಗಳೂರು, ನ.14: ಮುಸ್ಲಿಂ ಸಮುದಾಯದಲ್ಲಿ ಪ್ರತಿಮೆ ಸ್ಥಾಪಿಸುವ ಸಂಸ್ಕೃತಿ ಇಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿದ್ದಾರೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ 100 ಅಡಿ ಟಿಪ್ಪು ಸುಲ್ತಾನ್ ಪ್ರತಿಮೆ ಸ್ಥಾಪಿಸುವ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಅವರ ಪ್ರಸ್ತಾವನೆಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಪ್ರತಿಕ್ರಿಯಿಸಿದ್ದಾರೆ.
ಮೈಸೂರಿನಲ್ಲಿ 100 ಅಡಿ ಎತ್ತರದ ಟಿಪ್ಪು ಸುಲ್ತಾನ್ ಪ್ರತಿಮೆ ನಿರ್ಮಾಣ: ತನ್ವೀರ್ ಸೇಠ್
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಇಬ್ರಾಹಿಂ, "ಮುಸ್ಲಿಂ ಸಮುದಾಯದಲ್ಲಿ ಪ್ರತಿಮೆಗಳನ್ನು ಸ್ಥಾಪಿಸುವ ಸಂಪ್ರದಾಯವಿಲ್ಲ. ನೀವು ಭಾರತದಲ್ಲಿ ಮುಸ್ಲಿಂ ನಾಯಕರ ಪ್ರತಿಮೆ ಇರುವುದನ್ನು ನೋಡಿದ್ದೀರಾ?'' ಎಂದು ಪ್ರಶ್ನಿಸಿದ್ದಾರೆ.
"ನಾವು ಟಿಪ್ಪು ಸುಲ್ತಾನ್ ಹೆಸರನ್ನು ಬಳಸಿಕೊಳ್ಳಬಹುದು, ಆದರೆ ಅವರ ಪ್ರತಿಮೆಯಲ್ಲ" ಎಂದು ಸಿಎಂ ಇಬ್ರಾಹಿಂ ಅಭಿಪ್ರಾಯ ಪಟ್ಟಿದ್ದಾರೆ.
ಇನ್ನು, ಮುಂದಿನ ಚುನಾವಣೆಯಲ್ಲಿ 100 ವಿಧಾನಸಭೆ ಸ್ಥಾನಗಳಲ್ಲಿ ಸ್ಪರ್ಧಿಸುವ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷದ ನಿರ್ಧಾರದ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಅಸಾದುದ್ದೀನ್ ಓವೈಸಿ ನೇತೃತ್ವದ ಪಕ್ಷವು ರಾಜ್ಯದಲ್ಲಿ ಸ್ಪರ್ಧಿಸಲು ಸ್ವತಂತ್ರವಾಗಿದೆ. ಆದರೆ, ಆ ಪಕ್ಷ ಬಿಜೆಪಿಯೊಂದಿಗೆ ಉತ್ತಮ ಸಂಬಂಧ ಹೊಂದಿದೆ ಎಂದು ಆರೋಪಿಸಿದ್ದಾರೆ.
ಇದರ ಜೊತೆಗೆ 'ಹುಬ್ಬಳ್ಳಿಯಲ್ಲಿ ಟಿಪ್ಪು ಜಯಂತಿ ಆಚರಣೆಗೆ ಎಐಎಂಐಎಂಗೆ ಬಿಜೆಪಿ ಅನುಮತಿ ನೀಡಿದ್ದು ಹೇಗೆ? ಅವರು ಮುಸ್ಲಿಂ ಸಮುದಾಯದ ಮತಗಳನ್ನು ವಿಭಜಿಸಲು ಯತ್ನಿಸುತ್ತಿದ್ದಾರೆ' ಎಂದು ಇಬ್ರಾಹಿಂ ಕಿಡಿಕಾರಿದ್ದಾರೆ.
108 ಅಡಿ ಎತ್ತರದ ಕೆಂಪೇಗೌಡರ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ ಒಂದು ದಿನದ ನಂತರ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್, ಟಿಪ್ಪು ಪ್ರತಿಮೆ ನಿರ್ಮಾಣದ ಕುರಿತು ಮಾತನಾಡಿದ್ದರು.
ಟಿಪ್ಪು ಸುಲ್ತಾನ್ ಪ್ರತಿಮೆಯು ಈ ಪ್ರದೇಶದ 'ನಿಜವಾದ ಇತಿಹಾಸ'ವನ್ನು ಸಂಕೇತಿಸುತ್ತದೆ ಎಂದು ತನ್ವೀರ್ ಸೇಠ್ ಹೇಳಿದ್ದರು. ಇಸ್ಲಾಂ ಧರ್ಮದಲ್ಲಿ ವಿಗ್ರಹ ನಿಷೇಧವಿದ್ದರೂ ಪ್ರತಿಮೆ ಸ್ಥಾಪಿಸುವುದಾಗಿ ಕಾಂಗ್ರೆಸ್ ಶಾಸಕರು ಸಮರ್ಥಿಸಿಕೊಂಡಿದ್ದರು.
"ಸದ್ಯದ ಪರಿಸ್ಥಿತಿಯಲ್ಲಿ ಮುಸ್ಲಿಂ ಸಮುದಾಯದ ಅಸ್ಮಿತೆ ಉಳಿಸಿಕೊಳ್ಳಲು ಮೈಸೂರಿನಲ್ಲಿ ಟಿಪ್ಪು ಸುಲ್ತಾನರ 100 ಅಡಿ ಎತ್ತರದ ಪ್ರತಿಮೆ ನಿರ್ಮಿಸಲಾಗುವುದು. ಇಸ್ಲಾಂ ಧರ್ಮದಲ್ಲಿ ಪ್ರತಿಮೆ ನಿರ್ಮಾಣಕ್ಕೆ ಅವಕಾಶವಿಲ್ಲ. ಇದ್ದಿದ್ದರೇ ಮನೆಗೊಂದರಂತೆ ಟಿಪ್ಪು ಪ್ರತಿಮೆ ನಿರ್ಮಾಣವಾಗುತ್ತಿತ್ತು. ನಮ್ಮನ್ನು ಒಗ್ಗಟ್ಟಾಗಿಸುವ ಶಕ್ತಿ ಟಿಪ್ಪು ಹೆಸರಿಗಿದೆ. ಇಂದು ವಿವಿಧ ಪಕ್ಷಗಳಲ್ಲಿರುವ ಒಂದೇ ಸಮುದಾಯದ ಮುಖಂಡರು ಟಿಪ್ಪು ಹೆಸರಲ್ಲಿ ಒಂದಾಗಿರುವುದೇ ಇದಕ್ಕೆ ಸಾಕ್ಷಿ" ಎಂದು ಶಾಸಕ ತನ್ವೀರ್ ಸೇಠ್ ಕನ್ನಡ ರಾಜ್ಯೋತ್ಸವ ಮತ್ತು ಟಿಪ್ಪು ಉತ್ಸವದಲ್ಲಿ ಮಾತನಾಡಿದ್ದರು.