ಹೈಕಮಾಂಡ್ ನಾಯಕರ ಭೇಟಿ ಮಾಡಿದ ಸಿಎಂ,ಡಿಸಿಎಂ: ಸಚಿವ ಸಂಪುಟ ವಿಸ್ತರಣೆ ಕುರಿತು ಎಂ ಬಿ ಪಾಟೀಲ್ ಹೇಳಿದ್ದೇನು?
ಬೆಂಗಳೂರು, ಜುಲೈ 01: ರಾಜ್ಯ ಕಾಂಗ್ರೆಸ್ ನಲ್ಲಿ ಸಚಿವ ಸ್ಥಾನದ ಅಸಮಾಧಾನಿತರ ಸಂಖ್ಯೆ ಹೆಚ್ಚಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನ ಭೇಟಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯವರು ದೆಹಲಿಗೆ ಭೇಟಿ ನೀಡಿದ ಬೆನ್ನಲ್ಲೇ ಸಚಿವ ಸಂಪುಟ ವಿಸ್ತರಣೆಯಾಗುತ್ತದೆ ಎನ್ನುವ ಚರ್ಚೆಗಳು ಕೈ ಪಾಳಯದಲ್ಲಿ ಶುರುವಾಗಿದೆ. ಅಲ್ಲದೇ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಹೈಕಮಾಂಡ್ ನಾಯಕರ ಮಟ್ಟದಲ್ಲಿ ಚರ್ಚೆಯಾಗಿದೆ ಎಂದು ಹೇಳಲಾಗಿದೆ.

ಈ ಕುರಿತು ಮಾಧ್ಯಮಗಳ ಜೊತೆಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಅವರು ಮಾತನಾಡಿ, ಸಚಿವ ಸಂಪುಟ ಚರ್ಚೆಯ ಬಗ್ಗೆ ಯಾವುದೇ ಚರ್ಚೆಗಳು ನಡೆದಿಲ್ಲ. ಅನಗತ್ಯವಾಗಿ ಗೊಂದಲಗಳನ್ನು ಮೂಡಿಸಲಾಗುತ್ತಿದೆ. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯವರು ದೆಹಲಿಗೆ ಭೇಟಿ ನೀಡಿದ ಬೆನ್ನಲ್ಲೇ ಸಚಿವ ಸಂಪುಟ ವಿಸ್ತರಣೆಯಾಗುತ್ತದೆ ಎಂಬ ವದಂತಿಗಳು ಆಧಾರ ರಹಿತ. ದೆಹಲಿಗೆ ಭೇಟಿ ನೀಡಿದ್ದ ಇಬ್ಬರು ನಾಯಕರು ಅಲ್ಲಿ ನಡೆಯುವ ಚರ್ಚೆ ಬಗ್ಗೆ ಮಾಹಿತಿ ನೀಡಿಲ್ಲ. ಎಲ್ಲವನ್ನೂ ಊಹೆ ಮಾಡಿಕೊಂಡೇ ಚರ್ಚೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.
ಮುಡಾ ಪ್ರಕರಣ ಹಾಗೂ ಮಹರ್ಷಿ ವಾಲೀಕಿ ನಿಗಮದ ಹಗರಣದ ಚರ್ಚೆ ಎಂಬ ವಿಷಯವನ್ನು ಪ್ರಸ್ತಾಪಿಸಲಾಗಿದೆ. ಆದರೆ ತಮಗೆ ಅಲ್ಲಿ ನಡೆದಿರುವ ಚರ್ಚೆ ಬಗ್ಗೆ ಮಾಹಿತಿ ಇಲ್ಲ. ಆದರೆ ಸಚಿವ ಸಂಪುಟ ವಿಸ್ತರಣೆ, ಪುನರ್ ರಚನೆಯ ಬಗ್ಗೆ ಪ್ರಸ್ತಾಪವಾಗಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಅವರು ಹೇಳಿದರು.
ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಯ ಬಗ್ಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಬೇಕು. ನಾವು ಇದರ ಬಗ್ಗೆ ಚರ್ಚೆ ಮಾಡುವುದಿಲ್ಲ ಎಂದರು. ರಾಜ್ಯಸರ್ಕಾರದ ಯಾವುದೇ ನಿಗಮಗಳಿದ್ದರೂ ಅಲ್ಲಿ ನಡೆಯುವ ಪ್ರತಿಯೊಂದು ಚಟುವಟಿಕೆಗಳಿಗೂ ವ್ಯವಸ್ಥಾಪಕ ನಿರ್ದೇಶಕರೇ ಹೊಣೆ. ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ಸಚಿವರಾಗಿದ್ದ ಬಿ.ನಾಗೇಂದ್ರ ಅವರ ಪಾತ್ರ ಇಲ್ಲ. ಸಚಿವರು ಮೌಖಿಕವಾಗಿ ಹೇಳುವುದಲ್ಲ. ಲಿಖಿತವಾಗಿ ಹೇಳಿದರೂ ಕೂಡ ವ್ಯವಸ್ಥಾಪಕ ನಿರ್ದೇಶಕರು ಅದನ್ನು ಪಾಲಿಸಬೇಕಿಲ್ಲ. ನಿಗಮಗಳಿಗೆ ಪ್ರತ್ಯೇಕ ಆಡಳಿತ ಮಂಡಳಿ ಇರುತ್ತದೆ.
ನಮ್ಮ ಸರ್ಕಾರದಲ್ಲಿ ವಾಲೀಕಿ ಅಭಿವೃದ್ಧಿ ನಿಗಮದ ಹಗರಣ ಮಾತ್ರ ನಡೆದಿದೆ. ಅದಕ್ಕೆ ವಿರುದ್ಧವಾಗಿ ಈಗಾಗಲೇ ತನಿಖೆ ಕೈಗೊಳ್ಳಲಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಪ್ರತಿದಿನ ಒಂದೊಂದು ಹಗರಣ ಕೇಳಿಬರುತ್ತಿತ್ತು, ಸಾವಿರಾರು ಅಕ್ರಮಗಳು ನಡೆದಿವೆ, ಸಾವಿರಾರು ಕೋಟಿ ರೂ.ಗಳ ದುರುಪಯೋಗವಾಗಿದೆ. ಮುಡಾ ಹಾಗೂ ಇತರ ವಿಚಾರಗಳನ್ನು ಮುಂದಿಟ್ಟುಕೊಂಡು ಬಿಜೆಪಿ-ಜೆಡಿಎಸ್ ಪಕ್ಷಗಳು ಪಾದಯಾತ್ರೆ ನಡೆಸುತ್ತಿರುವುದಕ್ಕೆ ಪ್ರತಿಯಾಗಿ ನಾವು ಏನನ್ನೂ ಮಾಡಬೇಕಿಲ್ಲ. ಜನರಿಗೆ ಸತ್ಯ ಗೊತ್ತಿದೆ. ನಾವು ನಮ ಪಕ್ಷದ ಸಂಘಟನೆ ವಿಚಾರವಾಗಿ ಸಭೆ ಸಮಾರಂಭಗಳನ್ನು ನಡೆಸಲಿದ್ದೇವೆ ಎಂದರು.
ಸಚಿವ ಜಮೀರ್ ಅಹಮದ್ ಖಾನ್ ಮುಂದೆ ತಾವು ಸಚಿವರಾಗಿ ಇರುವ ಅಥವಾ ಇಲ್ಲದಿರುವ ಕುರಿತು ಮಾತನಾಡಿ, ಯಾವುದೋ ಭಾವನಾತಕ ಸಂದರ್ಭದಲ್ಲಿ ಮಾತನಾಡಿದ್ದಾರೆ. ಅದೇ ರೀತಿ ಸಂಪುಟ ಸೇರುವವರಿಗೂ ಸಾಕಷ್ಟು ನಿರೀಕ್ಷೆಗಳಿರುತ್ತವೆ. ಆದರೆ ಅಂತಿಮವಾಗಿ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದ ಅವರು, ಮೈಸೂರು ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾತ್ರ ಏನೂ ಇಲ್ಲ. ಈಗಾಗಲೇ ಅವರು ಇದರ ಬಗ್ಗೆ ಸ್ಪಷ್ಟೀಕರಣ ಕೊಟ್ಟಿದ್ದಾರೆ ಎಂದು ಅವರು ಪ್ರತಿಪಾದಿಸಿದರು.ಮುಡಾದಲ್ಲಿ ಬದಲಿ ನಿವೇಶನ ಹಂಚಿಕೆಯ ನೀತಿ ಮಾಡಿದ್ದೇ ಬಿಜೆಪಿಯವರು. ಸೈಟುಗಳನ್ನು ಹಂಚಿದ್ದೂ ಅವರೇ. ಈಗ ಜನರ ದಿಕ್ಕು ತಪ್ಪಿಸಲು ಪಾದಯಾತ್ರೆಯ ನಾಟಕ ಆಡಲು ಹೊರಟಿದ್ದಾರೆ ಎಂದು ಹೇಳಿದರು.












Click it and Unblock the Notifications