ಸೋಮವಾರ ಸಿದ್ದರಾಮಯ್ಯ, ಪರಮೇಶ್ವರ್ ಮಹತ್ವದ ಸಭೆ
ಬೆಂಗಳೂರು, ಸೆ.15 : ನಿಗಮ-ಮಂಡಳಿಗಳ ನೇಮಕ ಮತ್ತು ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸೋಮವಾರ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸಭೆ ಸೇರಿ ಚರ್ಚೆ ನಡೆಸಲಿದ್ದಾರೆ. ಹೈಕಮಾಂಡ್ ಒಪ್ಪಿಗೆ ನೀಡಿದರೆ ಸಂಪುಟ ಪುನಾರಚನೆ ಮಾಡುತ್ತೇನೆ, ಇಲ್ಲವಾದಲ್ಲಿ ನಾಲ್ವರು ಸಚಿವರನ್ನು ಸೇರಿಸಿಕೊಳ್ಳುತ್ತೇನೆ ಎಂದು ಸಿದ್ದರಾಮಯ್ಯ ಅವರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ.
ಸೆಪ್ಟೆಂಬರ್ ಅಂತ್ಯದೊಳಗೆ ನಿಗಮ-ಮಂಡಳಿಗಳ ಅಧ್ಯಕ್ಷ, ಉಪಾಧ್ಯಕ್ಷರನ್ನು ನೇಮಕ ಮಾಡಬೇಕು ಎಂದು ನಿರ್ಧರಿಸಿರುವುದರಿಂದ ಇಂದು ನಡೆಯುವ ಸಭೆ ಮಹತ್ವ ಪಡೆದಿದೆ. ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ಪದಾಧಿಕಾರಿಗಳ ಸಭೆ ನಡೆಸಿ ನೇಮಕದ ಬಗ್ಗೆ ಅಭಿಪ್ರಾಯ ಸಂಗ್ರಹಣೆ ಮಾಡಿದ್ದಾರೆ. ಸಿಎಂ ಭೇಟಿಯ ವೇಳೆ ಅಕಾಂಕ್ಷಿಗಳ ಪಟ್ಟಿಯನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ. [ಸಂಪುಟ ಪುನಾರಚನೆ ಮುಖ್ಯಮಂತ್ರಿಗೆ ಬಿಟ್ಟಿದ್ದು]

ಸಿಎಂ, ಪರಮೇಶ್ವರ್ ಭೇಟಿಯ ವೇಳೆ ಸಚಿವ ಸಂಪುಟ ವಿಸ್ತರಣೆ ಕುರಿತು ಮಾತುಕತೆ ನಡೆಯುವ ಸಾಧ್ಯತೆ ಇದೆ. ಪಕ್ಷದ ಹೈಕಮಾಂಡ್ ಸೂಚನೆ ನೀಡಿದರೆ ಮಾತ್ರ ಸಂಪುಟ ಪುನಾರಚನೆ ಮಾಡುತ್ತೇನೆ, ಇಲ್ಲದಿದ್ದರೆ, ಖಾಲಿ ಇರುವ ನಾಲ್ಕು ಸ್ಥಾನಗಳನ್ನು ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಂಪುಟ ಪುನಾರಚನೆ ಕುರಿತು ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ಅವರು ಹೇಳಿದ್ದಾರೆ. [ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ನಿರಾಸೆ ಮೂಡಿಸಿದ ಸಿಎಂ]
ಸೆ.20ರಂದು ಪಕ್ಷ ಸಂಘಟನೆ ಬಗ್ಗೆ ಚರ್ಚಿಸಲು ಕೆಪಿಸಿಸಿ ಪದಾಧಿಕಾರಿಗಳ ಸಭೆ ಕರೆಯಲಾಗಿದ್ದು, ಆ ವೇಳೆಗಾಗಲೇ ನಿಗಮ-ಮಂಡಳಿ ನೇಮಕ, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸ್ಪಷ್ಟ ನಿರ್ಧಾರಗಳನ್ನು ಕೈಗೊಳ್ಳಲು ಸಿಎಂ ಹಾಗೂ ಪರಮೇಶ್ವರ್ ನಿರ್ಧರಿಸಿದ್ದಾರೆ. ಈ ಮಾಸಾಂತ್ಯಕ್ಕೆ ನೇಮಕ ಪಕ್ರಿಯೆ ಪೂರ್ಣಗೊಳಿಸಲು ನಾಯಕರು ತೀರ್ಮಾನ ಕೈಗೊಂಡಿದ್ದಾರೆ.
ನಿಗಮ-ಮಂಡಳಿಗಳಲ್ಲಿ ಶೇ.70ರಷ್ಟು ಸ್ಥಾನಗಳನ್ನು ಕಾರ್ಯಕರ್ತರಿಗೆ ಹಾಗೂ ಶೇ.30ರಷ್ಟನ್ನು ಶಾಸಕರಿಗೆ ನೀಡಲು ನಿರ್ಧರಿಸಲಾಗಿದೆ. ಇದರಲ್ಲಿ ಶೇ.50ರಷ್ಟು ಮಹಿಳೆಯರಿಗೆ ಸ್ಥಾನ ಸಿಗುವ ಸಾಧ್ಯತೆ ಇದೆ. ನಿಗಮ ಮಂಡಳಿಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆ ಪಡೆಯಲು ಲಾಬಿ ನಡೆಯುತ್ತಿದ್ದು, ಆಯ್ಕೆ ಮಾಡುವುದು ಸವಾಲಿನ ಕೆಲಸವಾಗಿದೆ.












Click it and Unblock the Notifications