ಒಕ್ಕಲಿಗ ಅಭಿವೃದ್ಧಿ ನಿಗಮಕ್ಕೆ ನಿರ್ದೇಶಕರ ನೇಮಕ
ಕರ್ನಾಟಕ ಒಕ್ಕಲಿಗರ ಅಭಿವೃದ್ಧಿ ನಿಗಮ ನಿಯಮಿತಕ್ಕೆ ಅಧಿಕಾರೇತನ ನಿರ್ದೇಶಕರನ್ನು ನೇಮಕ ಮಾಡಲಾಗಿದೆ.
ಬೆಂಗಳೂರು, ಜನವರಿ 31; ಕರ್ನಾಟಕ ಸರ್ಕಾರ ಕರ್ನಾಟಕ ಒಕ್ಕಲಿಗರ ಅಭಿವೃದ್ಧಿ ನಿಗಮ ನಿಯಮಿತಕ್ಕೆ ಎ. ಸಿ. ನಾಗರಾಜುರನ್ನು ನಿರ್ದೇಶಕರಾಗಿ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿದೆ.
ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿ-1, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಷಾಹೀನ್ ಪರ್ವೀನ್ ಕೆ. ಆದೇಶ ಹೊರಡಿಸಿದ್ದಾರೆ. ಎ. ಸಿ. ನಾಗರಾಜು ಚಿಕ್ಕಬಳ್ಳಾಪುರ ಜಿಲ್ಲೆಯವರು.
ಎ. ಸಿ. ನಾಗರಾಜುರನ್ನು ಅಧಿಕಾರೇತರ ನಿರ್ದೇಶಕರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದ ತನಕ ನೇಮಕ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಆದೇಶ ಹೀಗಿದೆ; ಎ. ಸಿ. ನಾಗರಾಜು (ರಾಜಣ್ಣ) ಬಿನ್ ಚಿಕ್ಕವೆಂಕಟರಾಯಪ್ಪ, ಅವಲಗುರ್ಕಿ ಗ್ರಾಮ ಮತ್ತು ಅಂಚೆ, ಚಿಕ್ಕಬಳ್ಳಾಪುರ ತಾಲೂಕು ಮತ್ತು ಜಿಲ್ಲೆ ಇವರನ್ನು ಕರ್ನಾಟಕ ಒಕ್ಕಲಿಗರ ಅಭಿವೃದ್ಧಿ ನಿಗಮ ನಿಯಮಿತದ ಅಧಿಕಾರೇತರ ನಿರ್ದೇಶಕರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತ ಹಾಗೂ ಮುಂದಿನ ಆದೇಶದವರೆಗೆ ನೇಮಿಸಿ ಆದೇಶಿಸಿದೆ. (ಮಾನ್ಯ ಮುಖ್ಯಮಂತ್ರಿಯವರಿಂದ ಅನುಮೋದಿಸಲ್ಪಟ್ಟಿದೆ) ಎಂದು ತಿಳಿಸಲಾಗಿದೆ.
ಕರ್ನಾಟಕ ಸರ್ಕಾರ ಒಕ್ಕಲಿಗ ಸಮುದಾಯದ ಅಭಿವೃದ್ಧಿಗಾಗಿ ಕರ್ನಾಟಕ ಒಕ್ಕಲಿಗರ ಅಭಿವೃದ್ಧಿ ನಿಗಮ ನಿಯಮಿತ ರಚನೆ ಮಾಡಿ ಆದೇಶ ಹೊರಡಿಸಿತ್ತು.
ಸರ್ಕಾರದ ಆದೇಶ ಸಂಖ್ಯೆ : ಸ ಕ ಇ 225 ಬಿಸಿಎ 2000, ದಿನಾಂಕ 30/03/2002ರ ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯ ಪ್ರವರ್ಗ 3ಎ ನಲ್ಲಿ ಕ್ರ. ಸಂ: 1ರ (ಅ) ಯಿಂದ (ಟಿ) ವರೆಗೆ ನಮೂದಾಗಿರುವ ಸಮುದಾಯಗಳ ಅಭಿವೃದ್ಧಿಗೆ ಈ ನಿಯಮಿತ ಕಾರ್ಯ ನಿರ್ವಹಣೆ ಮಾಡಲಿದೆ.
ಒಕ್ಕಲಿಗ, ವಕ್ಕಲಿಗ, ಸರ್ಪ ಒಕ್ಕಲಿಗ, ಹಳ್ಳಿಕಾರ್ ಒಕ್ಕಲಿಗ, ನಾಮಧಾರಿ ಒಕ್ಕಲಿಗ, ಗಂಗಡ್ಕಾರ್ ಒಕ್ಕಲಿಗ, ದಾಸ್ ಒಕ್ಕಲಿಗ, ರೆಡ್ಡಿ ಒಕ್ಕಲಿಗ, ಮರಸು ಒಕ್ಕಲಿಗ, ಗೌಡ (GOUDA)/ ಗೌಡ (GOWDA), ಹಳ್ಳಿಕಾರ್ ಕುಂಚಿಟಿಗ, ಗೌಡ, ಕಾಪು, ಹೆಗ್ಗಡೆ, ಕಮ್ಮ, ರೆಡ್ಡಿ, ಗೌಂಡರ್, ನಾಮಧಾರಿ ಗೌಡ, ಉಪ್ಪಿನ ಕೊಳಗ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗಾಗಿ ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ದಿ ನಿಗಮ ನಿಯಮಿತ ಸ್ಥಾಪನೆ ಮಾಡಲಾಗಿದೆ.












Click it and Unblock the Notifications