ಆಪರೇಷನ್ ಹಸ್ತ ಬಲು ಜೋರು; ಕೊನೆಗೂ ಮೌನ ಮುರಿದ ಬಿ ಎಸ್ ಯಡಿಯೂರಪ್ಪ ಹೇಳಿದ್ದೇನು?
ಬೆಂಗಳೂರು, ಸೆಪ್ಟೆಂಬರ್ 07: ಲೋಕಸಭಾ ಚುನಾವಣೆಗೆ ಕೆಲ ತಿಂಗಳು ಮಾತ್ರ ಬಾಕಿ ಉಳಿದಿದ್ದು, ಚುನಾವಣೆಯಲ್ಲಿ ಕನಿಷ್ಠ 20 ಸ್ಥಾನಗಳನ್ನ ಗೆಲ್ಲುವ ಟಾರ್ಗೆಟ್ ಹಾಕಿಕೊಂಡಿರುವ ಕಾಂಗ್ರೆಸ್ ಬಿಜೆಪಿ ಅಸಮಾಧಾನಿತ ಮಾಜಿ ಹಾಗೂ ಹಾಲಿ ಶಾಸಕರಿಗೆ ಗಾಳ ಹಾಕಿದೆ ಎನ್ನುವ ಚರ್ಚೆ ರಾಜ್ಯ ರಾಜಕಾರಣದಲ್ಲಿ ಜೋರಾಗಿದ್ದು, ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಅವರು ಕೊನೆಗೂ ಮೌನ ಮುರಿದಿದ್ದಾರೆ.
ಹೌದು, ಈ ಕುರಿತು ಗುರುವಾರ ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿ ಅವರು, ನಮ್ಮ ಯಾವ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಹೋಗುವುದಿಲ್ಲ. ನಾನು ಪಕ್ಷದ ಶಾಸಕರ ಜೊತೆಗೆ ಮಾತಾಡಿದ್ದೇನೆ.ನಾಳೆ ಎಲ್ಲಾ ನಾಯಕರು ಕಾಂಗ್ರೆಸ್ ಸರ್ಕಾರದ ವಿರುದ್ದ ನಡೆಯುವ ಪ್ರತಿಭಟನೆಗೆ ಬರುತ್ತಾರೆ ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.

ನಾಳೆ ಬೆಂಗಳೂರಲ್ಲಿ ಸರ್ಕಾರದ ಆಡಳಿತ ವೈಖರಿ ವಿರುದ್ಧ ಹೋರಾಟ ಮಾಡ್ತಿದ್ದೇವೆ. ಬರಗಾಲ ತಾಂಡವಾಡ್ತಿದೆ, ವಿದ್ಯುತ್ ಕಣ್ಣ ಮುಚ್ಚಾಲೆಯಾಡುತ್ತಿದೆ, ಅಭಿವೃದ್ಧಿ ಕುಂಠಿತವಾಗುತ್ತಿದೆ. ಅದಕ್ಮಾಗಿ ನಾಳೆ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಸರ್ಕಾರ ಸಂಪೂರ್ಣವಾಗಿ ಭ್ರಷ್ಟಾಚಾರ ದಲ್ಲಿ ತೊಡಗಿದೆ. ಬರಗಾಲದಿಂದ ರಾಜ್ಯದ ಜನರು ಕಂಗಾಲಾಗಿದ್ದಾರೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು.
ಕಾವೇರಿ ನೀರನ್ನು ತಮಿಳು ನಾಡಿಗೆ ಬಿಡುತ್ತಿದ್ದಾರೆ. ಕೆಆರ್ ಎಸ್ ಜಲಾಶಯ ಖಾಲಿ ಆಗ್ತಿದೆ, ನಮಗೆ ಕುಡಿಯೋಕೆ ನೀರು ಇಲ್ಲ. ವಿದ್ಯುತ್ ದರ ಜಾಸ್ತಿ ಆಗುತ್ತಿದೆ. ವರ್ಗಾವಣೆ ದಂಧೆಯಲ್ಲೇ ಸರ್ಕಾರ ನಿರತವಾಗಿದೆ. ಗುತ್ತಿಗೆದಾರರು ಕಮಿಷನ್ ಬಗ್ಗೆ ಮಾತಾಡಿದ್ದಾರೆ, ಶಾಸಕರಿಗೆ ಅನುದಾನ ಕೊಡುತ್ತಿಲ್ಲ. ಕಿಸಾನ್ ಸಮ್ಮಾನ್ ಯೋಜನೆ ನಿಲ್ಲಿಸಿದ್ದಾರೆ. ನಮ್ಮ ಕಾರ್ಯಕರ್ತರ ಮೇಲೆ ಕೇಸ್ ಹಾಕಿ ಅನಗತ್ಯ ವಾಗಿ ದ್ವೇಷ ಸಾರುತ್ತಿದ್ದಾರೆ.
ನಾಳೆ ಶಾಸಕರು, ಸಂಸದರು ಸೇರಿ 15 ಸಾವಿರ ಜನರು ಸೇರಿಸಿ ಹೋರಾಟ ಮಾಡುತ್ತೇವೆ. ಭ್ರಷ್ಟಾಚಾರ ದಲ್ಲಿ ತೊಡಗಿರುವ ಸರ್ಕಾರದ ವಿರುದ್ಧ ಅನಿವಾರ್ಯವಾಗಿ ನಾವು ಹೋರಾಟ ಮಾಡ್ತಿದ್ದೇವೆ
ಈ ಹೋರಾಟ ಯಾವ ಸ್ವರೂಪಕ್ಕೆ ಹೋಗುತ್ತೋ ಗೊತ್ತಿಲ್ಲ. ಈ ಹೋರಾಟದಿಂದ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ರೂ ಅದಕ್ಕೆ ಸರ್ಕಾರವೇ ಜವಾಬ್ದಾರಿ ಎಂದು ಬಿ ಎಸ್ ಯಡಿಯೂರಪ್ಪ ಎಚ್ಚರಿಕೆ ನೀಡಿದರು.

ಇನ್ನೂ ವಿಪಕ್ಷ ನಾಯಕರ ಆಯ್ಕೆ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ವಿಪಕ್ಷ ನಾಯಕ ಆಯ್ಕೆ ಇವತ್ತು ನಾಳೆ ಮಾಡ್ತಾರೆ. ವಿರೋಧ ಪಕ್ಷದ ನಾಯಕ ಇಲ್ಲ ಅಂತಾ, ವಿಪಕ್ಷ ವಾಗಿ ಕೆಲಸ ಗಳು ನಿಂತಿಲ್ಲ. ನಾನು ನಿಮಗೆ ಇವತ್ತು ಒಂದು ಮಾತು ಹೇಳುತ್ತೇನೆ. ಇವತ್ತಿಂದ ಯಡಿಯೂರಪ್ಪ ಮನೆಯಲ್ಲಿ ಕುಳಿತು ಕೊಳ್ಳುವುದಿಲ್ಲ. ನನ್ನ ಪ್ರವಾಸ ಇನ್ನೂ ಮೂರು ನಾಲ್ಕು ದಿನಗಳಲ್ಲಿ ಪ್ರಾರಂಭ ಆಗುತ್ತದೆ. ರಾಜ್ಯ ಪ್ರವಾಸ ಮಾಡಿ ಬರುವ ಲೋಕಸಭಾ ಚುನಾವಣೆ ಯಲ್ಲಿ 25 ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ವಿಶ್ವಾಸವನ್ನ ವ್ಯಕ್ತಪಡಿಸಿದರು.
ಯಡಿಯೂರಪ್ಪ ಜೈಲಿಗೆ ಕಳುಹಿಸಿದ್ದು ಬಿಜೆಪಿಯವರೇ ಎಂಬ ರೇಣುಕಾಚಾರ್ಯ ಹೇಳಿಕೆ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಅದರ ಯಾವುದರ ಬಗ್ಗೆ ಮಾತನಾಡಲು ಹೋಗಲ್ಲ. ಆದರೆ, ರೇಣುಕಾಚಾರ್ಯರನ್ನು ಕರೆದು ಮಾತಾಡಿದ್ದೇನೆ. ಯಾರು ಯಾವುದಕ್ಕೂ ಕಾರಣರಲ್ಲ, ನಾವೆಲ್ಲರೂ ಒಟ್ಟಾಗಿ ಪಕ್ಷ ಕಟ್ಟಿ ಬೆಳೆಸಬೇಕಿದೆ. ಅದರ ಬಗ್ಗೆ ಗಮನ ಕೊಡಬೇಕು, ಆ ದಿಕ್ಕಿನಲ್ಲಿ ನಾವು ಕೆಲಸ ಮಾಡಬೇಕಿದೆ ಎಂದು ಹೇಳಿದರು.
ಕಾವೇರಿ ನದಿ ನೀರು ಹಂಚಿಕೆ ಕುರಿತು ಕೇಂದ್ರದ ಮೇಲೆ ಒತ್ತಡ ತರಬೇಕೆಂಬ ಕಾಂಗ್ರೆಸ್ ನಾಯಕರ ಹೇಳಿಕೆ ವಿಚಾರವಾಗಿ ಮಾತನಾಡಿ, ಕಾವೇರಿ ಇರಬಹುದು ಯಾವುದೇ ಇರಬಹುದು. ಯಾವುದರ ಬಗ್ಗೆಯಾದರೂ ಸರಿ ನಾವು ಕೇಂದ್ರದ ಮೇಲೆ ಒತ್ತಡ ತರುತ್ತೇವೆ. ಆದರೆ ಈ ಸರ್ಕಾರ ಬೇಜವಾಬ್ದಾರಿಯುತವಾಗಿ ನಡೆದುಕೊಂಡಿದೆ, ಅಭಿವೃದ್ಧಿ ಆಗ್ತಿಲ್ಲ, ಅದಕ್ಕಾಗಿ ನಾವು ಹೋರಾಟ ಮಾಡುತ್ತೇವೆ ಎಂದು ಹೇಳಿದರು.












Click it and Unblock the Notifications