ಕರ್ನಾಟಕ ಹವಾಮಾನ ವರದಿ: ರಾಜ್ಯಾದ್ಯಂತ ಮಳೆ ಕಡಿಮೆಯಾಗುವುದೇ?
ಬೆಂಗಳೂರು, ಸೆಪ್ಟೆಂಬರ್ 17: ಕಳೆದ 15 ದಿನಗಳಿಂದ ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಬಿಡದೆ ಸುರಿದಿದ್ದ ಮಳೆ ಗುರುವಾರದಿಂದ ಕೊಂಚ ಬಿಡುವು ಪಡೆದಿದೆ.
ಆಕಾಶ ಸಂಪೂರ್ಣವಾಗಿ ಶುಭ್ರವಾಗದಿದ್ದರೂ ಆಗಾಗ ಸೂರ್ಯ ಇಣುಕಿ ನೋಡುತ್ತಿದ್ದಾರೆ. ನಿನ್ನೆಯಿಂದಲೂ ಒಣಹವೆ ಶುರುವಾಗಿದೆ. ಬೆಂಗಳೂರಿನಲ್ಲಿ ಕೂಡ ಶುಭ್ರ ಆಕಾಶವಿದ್ದು, ಬಿಸಿಲಿದೆ. ಸಂಜೆಯ ವೇಳೆಗೆ ಸ್ವಲ್ಪ ಮೋಡಕವಿದ ವಾತಾವರಣ ನಿರ್ಮಾಣವಾಗುವ ಸಾಧ್ಯತೆ ಇದೆ.
ಕರ್ನಾಟಕ ಹವಾಮಾನ ವರದಿ, ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಒಣಹವೆ?
ಇನ್ನು ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೂಡ ಮಳೆ ಸ್ವಲ್ಪ ಬಿಡುವು ಪಡೆದಿದೆ. ಆದರೆ ಮಳೆಗಾಲ ಇನ್ನೂ ಮುಗಿದಿಲ್ಲ, ಸೆಪ್ಟೆಂಬರ್ 21ರವರೆಗೆ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ ಎನ್ನುವ ಮಾಹಿತಿಯನ್ನು ಹವಾಮಾನ ಇಲಾಖೆ ನೀಡಿದೆ.
ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ. ಬೀದರ್, ಕಲಬುರಗಿ, ಚಿತ್ರದುರ್ಗದಲ್ಲಿ ಒಣಹವೆ ಮುಂದುವರೆಯಲಿದೆ.
ಕರ್ನಾಟಕದಲ್ಲಿ ಎರಡು ಮಳೆ
ಕರ್ನಾಟಕದಲ್ಲಿ ಸೆ.18 ಮತ್ತು 19ರಂದು ಸಹ ಮಳೆ ಮುಂದುವರೆಯಲಿದೆ. ಶನಿವಾರ ಹಾಗೂ ಭಾನುವಾರ ರಾಜ್ಯದಲ್ಲಿ ವರುಣನ ಅಬ್ಬರ ಹೆಚ್ಚಾಗಲಿದೆ. ಕರಾವಳಿ, ಮಲೆನಾಡು, ಉತ್ತರ ಮತ್ತು ನೈರುತ್ಯ ಭಾಗಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕರಾವಳಿ ಮತ್ತು ಮಲೆನಾಡು ಮಾತ್ರವಲ್ಲದೇ, ಉತ್ತರ ಕರ್ನಾಟಕದ ಕೊಪ್ಪಳ, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಬೆಳಗಾವಿ, ಗದಗ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಬೆಂಗಳೂರು ವಾತಾವರಣ ಹೇಗಿದೆ?
ಬೆಂಗಳೂರಿನಲ್ಲಿ ಶುಭ್ರ ಆಕಾಶ ಗೋಚರಿಸುತ್ತಿದೆ, ಬಿಸಿಲಿದೆ, 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಎಚ್ಎಎಲ್ನಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕೆಐಎಎಲ್ನಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.ಎಲ್ಲೆಲ್ಲಿ ಮಳೆ?
ಬಸಗೋಡು, ಕೊಟ್ಟಿಗೆಹಾರ, ಕೊಲ್ಲೂರು, ಮಂಕಿ, ಅಂಕೋಲಾ, ಆಗುಂಬೆ, ಪುತ್ತೂರು, ಕೋಟ, ಬ್ರಹ್ಮಾವರ, ಬೇಲಿಕೇರಿ, ಕ್ಯಾಸಲ್ ರಾಕ್, ಮಂಚಿಕೆರೆ, ಗೋಕರ್ಣ, ಪೊನ್ನಂಪೇಟೆಯಲ್ಲಿ ಮಳೆಯಾಗಿದೆ. ಮುಂದಿನ 24 ಗಂಟೆಗಳಲ್ಲಿ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆ ಸಾಧಾರಣವಾಗಿ ಸುರಿಯಲಿದೆ ಎಂದು ಹೇಳಲಾಗಿದೆ.
ಯಾವ ರಾಜ್ಯಗಳಲ್ಲಿ ಮಳೆ
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದೆ. ಇಂದು ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಚಂಡಮಾರುತ ಸೃಷ್ಟಿಯಾಗಲಿದ್ದು, ಇದರ ಪ್ರಭಾವದಿಂದಾಗಿ ಶನಿವಾರ ಮತ್ತು ಭಾನುವಾರ(ಸೆ.18 ಮತ್ತು 19ರಂದು) ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗೆಯೇ ಉತ್ತರ ಪ್ರದೇಶ, ಮಧ್ಯಪ್ರದೇಶ, ಉತ್ತರಾಖಂಡ, ಗುಜರಾತ್ ಮತ್ತು ರಾಜಸ್ಥಾನದಲ್ಲಿ ಇಂದಿನಿಂದ ಮೂರು ದಿನ ಮಳೆಯ ಪ್ರಮಾಣ ಹೆಚ್ಚಾಗಲಿದೆ.
Recommended Video