ಆಗಸ್ಟ್ 2ರ ಉತ್ತರ ಕರ್ನಾಟಕ ಬಂದ್ : ಯಾರು, ಏನು ಹೇಳಿದರು?
Recommended Video
ಬೆಂಗಳೂರು, ಜುಲೈ 30 : ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವಾಗಿ ಮಾಡಬೇಕು ಎಂಬ ಬೇಡಿಕೆಯೊಂದಿಗೆ ಉತ್ತರ ಕರ್ನಾಟಕ ಬಂದ್ಗೆ ಕರೆ ನೀಡಲಾಗಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂಬ ಕೂಗನ್ನು ಶಮನಗೊಳಿಸಲು ಸಭೆ ಕರೆದಿದ್ದಾರೆ.
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಅಧ್ಯಕ್ಷ ಸೋಮಶೇಖರ ಕೊತಂಬರಿ ಅವರು ಆಗಸ್ಟ್ 2ರಂದು ಉತ್ತರ ಕರ್ನಾಟಕದ 13 ಜಿಲ್ಲೆಗಳ ಬಂದ್ಗೆ ಕರೆ ನೀಡಿದ್ದಾರೆ. ಉತ್ತರ ಕರ್ನಾಟಕ ಬಂದ್ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ.
ಉತ್ತರ ಕರ್ನಾಟಕ ಬಂದ್ : ಹೋರಾಟ ಸಮಿತಿ ಸಭೆ ಕರೆದ ಸಿಎಂ
ಹಲವು ಸಂಘಟನೆಗಳು ಬಂದ್ ಪರ-ವಿರೋಧ ಮಾತುಗಳನ್ನು ಆಡುತ್ತಿವೆ. ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟಕ್ಕೆ ಬೆಂಬಲವಿಲ್ಲ ಎಂದು ಕರ್ನಾಟಕ ಬಿಜೆಪಿ ಸ್ಪಷ್ಟಪಡಿಸಿದೆ. 'ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಹೋರಾಟಕ್ಕೆ ನಮ್ಮ ಬೆಂಬಲವಿಲ್ಲ' ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ ಖಂಡ್ರೆ ಹೇಳಿದ್ದಾರೆ.
ಕರ್ನಾಟಕ ಅಖಂಡವಾಗಿರಬೇಕು ಎಂದು ಕಡೆಗೂ ದನಿಯೆತ್ತಿದ ಯಡಿಯೂರಪ್ಪ
'ಉತ್ತರ ಕರ್ನಾಟಕ ಬಂದ್ ಕರೆ ಬಗ್ಗೆ ಈಗಾಗಲೇ ಕುಮಾರಸ್ವಾಮಿ ಅವರ ಜೊತೆ ಚರ್ಚೆ ನಡೆಸಿರುವೆ. ಬಂದ್ ಕರೆ ನೀಡಿರುವ ಮಠಾಧೀಶರು, ಹೋರಾಟಗಾರರ ಜೊತೆ ಸಭೆ ನಡೆಸಲು ಮುಖ್ಯಮಂತ್ರಿಗಳು ಒಪ್ಪಿಗೆ ನೀಡಿದ್ದಾರೆ' ಎಂದು ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ. ಯಾವ ನಾಯಕರು ಏನು ಹೇಳಿದರೂ ಚಿತ್ರಗಳಲ್ಲಿ ನೋಡಿ....
ಬೇಡಿಕೆ ಮೂರ್ಖತನದ್ದು
'ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಬೇಡಿಕೆ ಮೂರ್ಖತನದ ಪರಮಾವಧಿ. ಕರ್ನಾಟಕ ಏಕೀಕರಣದ ಹಿನ್ನಲೆ, ಮಹನೀಯರ ಹೋರಾಟ, ಪರಿಶ್ರಮದ ಬಗ್ಗೆ ಏನೂ ಗೊತ್ತಿಲ್ಲದವರು ಪ್ರತ್ಯೇಕ ರಾಜ್ಯ ಬೇಕು ಎಂದು ಕೇಳುತ್ತಿದ್ದಾರೆ. ರಾಜ್ಯದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಒತ್ತು ನೀಡುತ್ತಲೇ ಬಂದಿದೆ. ಎಸ್.ಎಂ.ಕೃಷ್ಣ ಮುಖ್ಯಮಂತ್ರಿಯಾಗಿದ್ದಾಗ ನಂಜುಡಪ್ಪ ಆಯೋಗ ರಚನೆ ಮಾಡಿದ್ದರು. ಶಾಸಕ ಶ್ರೀರಾಮುಲುಗೆ ಕರ್ನಾಟಕದ ಏಕೀಕರಣದ ಇತಿಹಾಸವೇ ಗೊತ್ತಿಲ್ಲ' ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬಂದ್ ಕೈಬಿಡಲು ಮನವಿ ಮಾಡುವೆ
ವಿಧಾನಸಭೆ ಪ್ರತಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ಈ ಕುರಿತು ಪ್ರತಿಕ್ರಿಯೆ ನೀಡಿದ್ದು, 'ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಡುತ್ತಿರುವ ಮುಖಂಡರು ಆಗಸ್ಟ್ 2ರಂದು ಕರೆ ನೀಡಿರುವ ಬಂದ್ ಕೈ ಬಿಡಬೇಕು ಎಂದು ಮನವಿ ಮಾಡುತ್ತೇನೆ. ಯಾವುದೇ ಕಾರಣಕ್ಕೂ ಪ್ರತ್ಯೇಕ ರಾಜ್ಯವಾಗಬಾರದು. ಅಖಂಡ ಕರ್ನಾಟಕಕ್ಕೆ ಬಿಜೆಪಿ ಬದ್ಧವಾಗಿದೆ. ಯಾವುದೇ ಪಕ್ಷದ ಮುಖಂಡರು ಪರ-ವಿರೋಧದ ಹೇಳಿಕೆ ನೀಡಬಾರದು ಎಂದು ಹೇಳಿದರು.
ಪ್ರತ್ಯೇಕ ರಾಜ್ಯದ ಬೇಡಿಕೆ ಅಪ್ರಸ್ತುತ
ಗಣಿ, ಭೂ ವಿಜ್ಞಾನ ಮತ್ತು ಮುಜರಾಯಿ ಸಚಿವ ರಾಜಶೇಖರ ಪಾಟೀಲ ಅವರು ಈ ಕುರಿತು ಪ್ರತಿಕ್ರಿಯೆ ನೀಡಿದ್ದು, 'ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಬೇಡಿಕೆ ಅಪ್ರಸ್ತುತ. ಈ ಭಾಗದಲ್ಲಿ ಸಂಪನ್ಮೂಲಗಳ ಕೊರತೆ ಇಲ್ಲ. ಅಭಿವೃದ್ಧಿಗೆ ಒತ್ತು ನೀಡಬೇಕಿದೆ. ಹೈದರಾಬಾದ್-ಕರ್ನಾಟಕದಲ್ಲಿ ಯಾವುದೇ ಕೊರತೆ ಇಲ್ಲ. 371(ಜೆ) ಅಡಿಯಲ್ಲಿ ಸೌಲಭ್ಯ ಕಲ್ಪಿಸುವ ಮೂಲಕ ಜಿಲ್ಲೆಗಳಿಗೆ ಆದ್ಯತೆ ನೀಡಲಾಗುತ್ತಿದೆ' ಎಂದು ಹೇಳಿದ್ದಾರೆ.
ಸಭೆ ಕರೆಯಲು ನಿರ್ಧರಿಸಿದ್ದಾರೆ
'ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂಬ ಕೂಗನ್ನು ಶಮನಗೊಳಿಸಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮುಂದಡಿ ಇಟ್ಟಿದ್ದಾರೆ. ಈ ಕುರಿತಂತೆ ಅಪಸ್ವರದ ಧ್ವನಿ ಎತ್ತಿರುವ ಮಠಾಧೀಶರು, ಹೋರಾಟಗಾರರ ಸಭೆಕರೆಯಲು ನಿರ್ಧರಿಸಿದ್ದಾರೆ. ಈ ಬಗ್ಗೆ ಕುಮಾರಸ್ವಾಮಿ ಅವರ ಜೊತೆ ಈಗಾಗಲೇ ಚರ್ಚೆ ಮಾಡಿದ್ದೇನೆ. ಒಂದು ದಿನವಿಡಿ ಉತ್ತರ ಕರ್ನಾಟಕಕ್ಕೆ ಆಗಿರುವ ಅನ್ಯಾಯದ ಬಗ್ಗೆ ಚರ್ಚೆ ನಡೆಸಲು ಸಿದ್ಧನಾಗಿರುವೆ ಎಂದು ಹೇಳಿದ್ದಾರೆ' ಎಂದು ಜೆಡಿಎಸ್ ಹಿರಿಯ ನಾಯಕ, ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದ್ದಾರೆ.
ಪ್ರತ್ಯೇಕ ರಾಜ್ಯಕ್ಕೆ ಬೇಡಿಕೆ ಇಲ್ಲ
'ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟಕ್ಕೆ ನಮ್ಮ ಬೆಂಬಲವಿಲ್ಲ. ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ. ಶ್ರೀರಾಮುಲು ಅವರಿಗೆ ಉತ್ತರ ಕರ್ನಾಟಕದ ಬಗ್ಗೆ ಸರಿಯಾದ ಮಾಹಿತಿ ಇಲ್ಲ. ಈ ಭಾಗದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಾಗಿದೆ' ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರು ಬೀದರ್ನಲ್ಲಿ ಹೇಳಿದ್ದಾರೆ.