ಜನಿವಾರದಲ್ಲಿ ನೀನು ನೇಣು ಹಾಕಿಕೊಂಡ್ರೆ, ಏನ್ಮಾಡೋದು?: ವಿಜಯೇಂದ್ರ ಆಕ್ರೋಶ
ಬೆಂಗಳೂರು, ಏಪ್ರಿಲ್ 18: ಬೀದರ್ನ ಸಾಯಿ ಸ್ಪೂರ್ತಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗೆ ಜನಿವಾರ ಧರಿಸಿದ ಕಾರಣಕ್ಕೆ ಬೆಳಿಗ್ಗೆ ಪರೀಕ್ಷೆ ಬರೆಯಲು ಅವಕಾಶ ನೀಡದ ಸಿಬ್ಬಂದಿ, ಮಧ್ಯಾಹ್ನ ಅದೇ ವಿದ್ಯಾರ್ಥಿಗೆ ಜನಿವಾರ ಧರಿಸಿಯೇ ಪರೀಕ್ಷೆಗೆ ಕೂರಲು ಬಿಟ್ಟಿದ್ದಾರೆ. ಇದೆಂಥ ನ್ಯಾಯ ಸರ್? ಎಂದು ವಿದ್ಯಾರ್ಥಿ ಕೇಳಿದ್ದಕ್ಕೆ, ಜನಿದಾರ ಬಳಸಿ ಪರೀಕ್ಷಾ ಕೇಂದ್ರದಲ್ಲಿ ನೀನು ನೇಣು ಹಾಕಿಕೊಂಡು ಬಿಟ್ಟರೆ? ಎಂದು ಉಡಾಫೆಯಿಂದ ಉತ್ತರಿಸಿದ್ದಾರೆನ್ನಲಾಗಿದೆ.
ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಟ್ವೀಟ್ ಮಾಡಿದ್ದು, ಬೀದರ್ ನಲ್ಲಿ ಜನಿವಾರ ಧರಿಸಿದ್ದ ವಿದ್ಯಾರ್ಥಿಗೆ ಸಿಇಟಿ ಪರೀಕ್ಷೆಗೆ ಅವಕಾಶ ಕೊಡದೇ, ಶಿವಮೊಗ್ಗದಲ್ಲಿ ವಿದ್ಯಾರ್ಥಿಯೊಬ್ಬನ ಜನಿವಾರ ಕಿತ್ತೆಸೆಯಲು ದರ್ಪ ಮೆರೆದು ವಿದ್ಯಾರ್ಥಿಯ ಭವಿಷ್ಯಕ್ಕೆ ಕಲ್ಲು ಹಾಕಿದ ಅಧಿಕಾರಿ,ಸಿಬ್ಬಂದಿಗಳ ವರ್ತನೆ ಅತ್ಯಂತ ಹೇಯ. ಈ ರೀತಿಯ ಬೌದ್ಧಿಕ ವಿಕೃತಿ ಹಾಗೂ ಮನುಷ್ಯತ್ವ ಇಲ್ಲದ ನಡೆ ಇನ್ನೊಂದಿರಲಾರದು, ಇದು ಕಾಂಗ್ರೆಸ್ ಸರ್ಕಾರದ ಹೀನ ಮನಸ್ಥಿತಿಯ ಮುಖವಾಡವನ್ನು ಪ್ರದರ್ಶಿಸಿದೆ.

ಬಾಲ್ಯದಿಂದಲೂ ಕನಸು ಕಟ್ಟಿಕೊಂಡು ಭವಿಷ್ಯದ ತಿರುವಿನಲ್ಲಿ ಆಘಾತ ಎದುರಿಸಿ ವಿದ್ಯಾರ್ಥಿಯೊಬ್ಬನ ಇಂಜಿನಿಯರಿಂಗ್ ಪದವಿಯ ಕನಸಿನ ಮೇಲೆ ಅಟ್ಟಹಾಸಗೈದ ಸಿಇಟಿ ಪರೀಕ್ಷಾ ಸಿಬ್ಬಂದಿಯ ವರ್ತನೆ ಅತ್ಯಂತ ಖಂಡನೀಯ. ಪರೀಕ್ಷೆ ಹಾಗೂ ಸಂದರ್ಶನ ಎದುರಿಸುವ ವೇಳೆ ಕೆಲ ವಸ್ತುಗಳನ್ನು ಕೊಂಡೊಯ್ಯುವುದು ನಿಷಿದ್ಧ, ಆದರೆ ಜನಿವಾರ ತೊಡುವುದು ಒಂದು ಕುಟುಂಬ ಹಾಗೂ ಭಾರತೀಯ ಸಮುದಾಯದ ಆಚಾರ ವಿಚಾರಕ್ಕೆ ಸಂಬಂಧಿಸಿದ್ದು, ವಿದ್ಯಾರ್ಥಿ ಬರೆಯುವ ಪರೀಕ್ಷೆಯ ಮೇಲೆ ಜನಿವಾರ ಏನು ಪ್ರಭಾವ ಅಥವಾ ಪರಿಣಾಮ ಬೀರುತ್ತದೆ? ಎಂಬುದಕ್ಕೆ ಸಂಬಂಧಿಸಿದ ಸಚಿವರು ಹಾಗೂ ಸರ್ಕಾರ ಉತ್ತರಿಸಬೇಕು.
ಶಿಕ್ಷಣವೆಂದರೆ ಸಂಸ್ಕಾರ, ಅದು ಇಲ್ಲದವರು ಶಿಕ್ಷಣ ಖಾತೆಯನ್ನು ನಿರ್ವಹಿಸಿದರೆ ಏನು ಪರಿಣಾಮ ಬೀರಬಹುದು ಎನ್ನುವುದಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಸಂಬಂಧವಾಗಿ ವಿದ್ಯಾರ್ಥಿಯ ಭವಿಷ್ಯಕ್ಕೆ ಕಲ್ಲು ಹಾಕಿ ಹಿಂದೂ ಸಂಪ್ರದಾಯದ ಆಚಾರ ವಿಚಾರವನ್ನು ಅಪಮಾನಿಸಿರುವ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲು ಮುಂದಾಗಲಿ. ಸನಾತನ ಹಿಂದೂ ಧರ್ಮದ ಆಚಾರ ವಿಚಾರಗಳಿಗೆ ಮಾರ್ಗದರ್ಶನ ತೋರುವ ಸಭ್ಯ ಬ್ರಾಹ್ಮಣ ಸಮುದಾಯವನ್ನು ಅಪಮಾನಿಸಿರುವ ಕಾಂಗ್ರೆಸ್ ಸರ್ಕಾರ ಈ ಕೂಡಲೇ ಬೇಷರತ್ ಕ್ಷಮೆಯಾಚಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷರ ಬಿ ವೈ ವಿಜಯೇಂದ್ರ ಅವರು ಒತ್ತಾಯಿಸಿದ್ದಾರೆ.
ಇನ್ನು 3 ವರ್ಷಗಳ ಕಾಲ ಹೋರಾಟದ ಪರ್ವ ಎಂಬುದನ್ನು ಜಿಲ್ಲಾಧ್ಯಕ್ಷರು ಮತ್ತು ಪದಾಧಿಕಾರಿಗಳು ನೆನಪಿನಲ್ಲಿ ಇಟ್ಟುಕೊಳ್ಳಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಪೂರ್ವಕ ಮನವಿ ಮಾಡಿದ್ದಾರೆ. ಎಲ್ಲಿ ನಮ್ಮ ಕಾರ್ಯಕರ್ತರಿಗೆ ನೋವು, ಅವಮಾನ ಆಗುತ್ತದೋ, ಹಿಂದೂ ಕಾರ್ಯಕರ್ತರಿಗೆ ಅಪಮಾನ ಆದಾಗ ನೀವೆಲ್ಲರೂ ಒಗ್ಗಟ್ಟಿನಿಂದ, ಒಂದಾಗಿ ಹೋಗಿ ಅವರಿಗೆ ರಕ್ಷಣೆ ಕೊಡಬೇಕು ಎಂದು ಸೂಚಿಸಿದರು.
ಕಾಂಗ್ರೆಸ್ಸಿನಲ್ಲಿ ರಾಜಕಾರಣ ಮಾಡಲು ಯಾವ ಗಂಡಸಿದ್ದಾನೆಂದು ನಾನು ಕೂಡ ನೋಡುತ್ತೇನೆ ಎಂದು ಸವಾಲು ಹಾಕಿದರು. ಯಾರೂ ಹೆದರುವ ಅಗತ್ಯವಿಲ್ಲ. ಹೊಂದಾಣಿಕೆಯ ರಾಜಕಾರಣ ಮಾಡಲು ನಮ್ಮ ಕಾರ್ಯಕರ್ತರು ಪುಕ್ಕಟೆಯಾಗಿ ಬಂದಿಲ್ಲ ಎಂದು ತಿಳಿಸಿದರು. ಚುನಾವಣೆ ಬಂದಾಗ ರಾಜಕಾರಣ ಮಾಡುವುದನ್ನು ಬಿಟ್ಟು ವರ್ಷಪೂರ್ತಿ ರಾಜಕಾರಣ ಮಾಡುವುದನ್ನು ಅಭ್ಯಾಸ ಮಾಡಿ; ಗುಲ್ಬರ್ಗ ಜಿಲ್ಲೆಯ ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲಿ ನಾವು ಯಾಕೆ ಗೆಲ್ಲಲು ಸಾಧ್ಯವಿಲ್ಲ ಎಂಬ ಸವಾಲನ್ನು ರಾಜ್ಯದ ಅಧ್ಯಕ್ಷನಾಗಿ ಸ್ವೀಕರಿಸುತ್ತೇನೆ ಎಂದು ತಿಳಿಸಿದರು.
ಯಾವನೇ ಬರಲಿ. ಅವನ ಶಕ್ತಿಯನ್ನು ಮೆಟ್ಟಿ ನಿಲ್ಲುವ ಶಕ್ತಿ ಬಿಜೆಪಿಯ ಪ್ರತಿಯೊಬ್ಬ ಕಾರ್ಯಕರ್ತನಿಗೆ ಇದೆ. ಮುಖಂಡರೆಲ್ಲರೂ ದಯವಿಟ್ಟು ಒಗ್ಗಟ್ಟಾಗಿರಿ ಎಂದು ಎಚ್ಚರಿಸಿದರು. ಕಾರ್ಯಕರ್ತರ ಪ್ರೀತಿ, ವಿಶ್ವಾಸಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಇಂಥ ಉರಿ ಬಿಸಿಲಲ್ಲೂ ಕೂಡ ಸಾವಿರಾರು ಕಾರ್ಯಕರ್ತರು, ತಾಯಂದಿರು ದೊಡ್ಡ ಸಂಖ್ಯೆಯಲ್ಲಿ ಬಂದು ಜನಾಕ್ರೋಶ ಯಾತ್ರೆಯನ್ನು ಯಶಸ್ವಿಯಾಗಿ ಮಾಡಿದ್ದೀರಿ. ತಮ್ಮ ಪ್ರೀತಿ, ವಿಶ್ವಾಸಕ್ಕೆ ಋಣಿಯಾಗಿದ್ದೇನೆ ಎಂದು ಬಿ.ವೈ.ವಿಜಯೇಂದ್ರ ಅವರು ಹೇಳಿದರು.












Click it and Unblock the Notifications