ಕುಮಾರಸ್ವಾಮಿ ಲೋಕಸಭಾ ಚುನಾವಣೆಗೆ ನಿಲ್ಲೋಲ್ವಂತೆ
ಕೋಲಾರ, ಅಕ್ಟೋಬರ್ 25: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮತದಾರರೇ ನೀವು ಇದನ್ನು ನಂಬಿದ್ರೆ ನಂಬಿ ಇಲ್ಲಾಂದ್ರೆ ಬಿಡಿ. ಆದರೆ ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಅವರು ಮುಂಬರುವ ಲೋಕಸಭಾ ಚುನಾವಣೆಗೆ ತಾವು ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ.
ಬೆಂ. ಗ್ರಾಮಾಂತರ ಲೋಕಸಭಾ ಕ್ಷೇತ್ರವನ್ನು ಫಲತಾಂಬೂಲದೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಧಾರೆಯೆರೆದುಕೊಟ್ಟ ಬಳಿಕ ಪ್ರತಿಪಕ್ಷದ ನಾಯಕರಾಗಿರುವ ಎಚ್ ಡಿ ಕುಮಾರಸ್ವಾಮಿ ಅವರು ಮುಂದಿನ ಚುನಾವಣೆ ಇನ್ನೂ ದೆಹಲಿಯಷ್ಟು ದೂರದಲ್ಲಿರುವಾಗ ಸ್ವಯಂಪ್ರೇರಿತರಾಗಿ ಊರಿಗೆ ಮುಂಚೆ ತಾನು ಚುನಾವಣೆಗೆ ಸ್ಪರ್ಧಿಸುತ್ತಿಲ್ಲ ಎಂದು ಘೋಷಿಸಿದ್ದಾರೆ.
'ರಾಷ್ಟ್ರೀಯ ರಾಜಕಾರಣದ ಮೇಲೆ ತನಗೆ ಆಸಕ್ತಿ ಇಲ್ಲ. ರಾಜ್ಯದಲ್ಲೇ ಇದ್ದು ಜನತೆಯ ಸೇವೆ ಮಾಡಬೇಕೆಂಬ ಹಂಬಲವಿದೆ. ಹಾಗಾಗಿ ಈ ನಿರ್ಧಾರ ತೆಗೆದುಕೊಂಡಿರುವೆ' ಎಂದು ಕಾರಣ ಸಹ ನೀಡಿದ್ದಾರೆ.

ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಜಿಲ್ಲೆಯ ಶ್ರೀನಿವಾಸಪುರ ತಾಲೂಕಿಗೆ ಗುರುವಾರ ಭೇಟಿ ನೀಡಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಳೆದ 4 ತಿಂಗಳ ಹಿಂದೆ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಗ್ಗೆ ನಾಡಿನ ಜನತೆ ಭ್ರಮನಿರಸನರಾಗಿದ್ದಾರೆ. ನಿರೀಕ್ಷೆ ಹುಸಿಗೊಳಿಸಲಾಗಿದೆ.
ಬಿಜೆಪಿಯವರು ಗಣಿ ಹಗರಣದಲ್ಲಿ ಭಾಗಯಾಗಿದ್ದಾಗ ವೀರಾವೇಶದಿಂದ ಹೋರಾಟ ನಡೆಸಿದ್ದ ಸಿದ್ದರಾಮಯ್ಯ ನೈತಿಕತೆಯಿದ್ದಲ್ಲಿ ಗಣಿ ಹಗರಣದಲ್ಲಿ ಸಿಲುಕಿರುವ ಸಚಿವ ಸಂತೋಷ್ ಲಾಡ್ ಅವರನ್ನು ಸಂಪುಟದಿಂದ ವಜಾ ಮಾಡಲಿ ಎಂದು ಗುಡುಗಿದ್ದಾರೆ.
ಭ್ರಷ್ಟಾಚಾರದ ಬಗ್ಗೆ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳೂ ಮಾತನಾಡುವ ಹಕ್ಕು ಕಳೆದುಕೊಂಡಿವೆ. ರಾಜ್ಯದ ಜನತೆ ಎಲ್ಲವನ್ನೂ ಶಾಂತಚಿತ್ತರಾಗಿ ಗಮನಿಸುತ್ತಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಈ ಎರಡೂ ಪಕ್ಷಗಳಿಗೂ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹಾಲಿ ರಾಮನಗರ ಶಾಸಕ ಕುಮಾರಸ್ವಾಮಿ ಅವರು ಎಚ್ಚರಿಸಿದರು.












Click it and Unblock the Notifications