ಜೆಡಿಎಸ್ ನಿಯಂತ್ರಣದಲ್ಲಿಡುವ ಜವಾಬ್ದಾರಿ ಸಿದ್ದರಾಮಯ್ಯ ಹೆಗಲಿಗೆ!
Recommended Video

ಬೆಂಗಳೂರು, ಜುಲೈ 09 : ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಮುಗಿದು ಕಾಂಗ್ರೆಸ್-ಜೆಡಿಎಸ್ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಕಾಂಗ್ರೆಸ್ ಪಕ್ಷ ಇಂದು 2018ರ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳ ಜೊತೆ ಸಭೆ ನಡೆಸಿತು. 'ಜೆಡಿಎಸ್ ಪಕ್ಷವನ್ನು ನಿಯಂತ್ರಣದಲ್ಲಿಡಿ' ಎಂಬ ಕೂಗು ಸಭೆಯಲ್ಲಿ ಕೇಳಿಬಂದಿದ್ದು ಅಚ್ಚರಿಗೆ ಕಾರಣವಾಗಿದೆ.
ಸೋಮವಾರ ವಿಕಾಸಸೌಧದಲ್ಲಿ ಕಾಂಗ್ರೆಸ್ ಪಕ್ಷದ ಸೋತ ಅಭ್ಯರ್ಥಿಗಳ ಸಭೆ ನಡೆಯಿತು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಕೆಪಿಸಿಸಿ ನಿಯೋಜಿತ ಅಧ್ಯಕ್ಷ ದಿನೇಶ್ ಗುಂಡೂರಾವ್ ಸಭೆಯಲ್ಲಿ ಪಾಲ್ಗೊಂಡಿದ್ದರು.
ಜೆಡಿಎಸ್ ಪಕ್ಷವನ್ನು ಸಂಪೂರ್ಣವಾಗಿ ನಂಬುವುದು ಬೇಡ. ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಕಾಂಗ್ರೆಸ್ ಅಭ್ಯರ್ಥಿಗಳನ್ನು ಸೋಲಿಸಲು ಒಟ್ಟಾಗಿ ಗುಟ್ಟಾಗಿ ಕೆಲಸ ಮಾಡಿವೆ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಗಿದೆ.
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದಿರಬಹುದು. ಆದರೆ, ಕಾಂಗ್ರೆಸ್ ಪಕ್ಷಕ್ಕಾಗಿ ಜೆಡಿಎಸ್ ಪಕ್ಷವನ್ನು ನಿಯಂತ್ರಣದಲ್ಲಿಡಬೇಕು ಎಂಬ ಕೂಗು ಸಭೆಯಲ್ಲಿ ಕೇಳಿಬಂತು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೆಡಿಎಸ್ ನಿಯಂತ್ರಣದಲ್ಲಿಡಲು ಸರಿಯಾದ ವ್ಯಕ್ತಿ ಎಂದು ಸಭೆ ಬೆಂಬಲ ನೀಡಿತು ಎಂದು ತಿಳಿದುಬಂದಿದೆ.

ಲೋಕಸಭೆ ಚುನಾವಣೆಗೆ ಸಿದ್ಧರಾಗಿ
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡ ಅಭ್ಯರ್ಥಿಗಳು ಹತಾಶರಾಗಬೇಕಿಲ್ಲ. ಎಲ್ಲರೂ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಗೆಲುವಿಗಾಗಿ ಶ್ರಮಿಸಿ ಎಂದು ಸಭೆಯಲ್ಲಿ ಸಿದ್ದರಾಮಯ್ಯ ಅವರು ಕರೆ ನೀಡಿದರು.
ಚುನಾವಣೆಯಲ್ಲಿ ಸೋತ ಕೆಲವು ಅಭ್ಯರ್ಥಿಗಳು 2013ರಲ್ಲಿ ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಮಾಡಿದ ಜನಪರ ಕಾರ್ಯಗಳನ್ನು ಜನರಿಗೆ ತಲುಪಿಸುವ ಕಾರ್ಯ ನಡೆಯಲಿಲ್ಲ. ಆದ್ದರಿಂದ, ಚುನಾವಣೆಯಲ್ಲಿ ಸೋಲಾಯಿತು ಎಂದು ಹೇಳಿದರು.

ಪಕ್ಷವನ್ನು ಉಳಿಸಿ
ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಿತು. ಕಾಂಗ್ರೆಸ್ ಪಕ್ಷದ ಉಳಿವಿಗಾಗಿ ಜೆಡಿಎಸ್ ಅನ್ನು ನಿಯಂತ್ರಿಸಬೇಕು ಅಭಿಪ್ರಾಯಪಟ್ಟರು.
ನಮ್ಮ ಪಕ್ಷ ಉಳಿಯಬೇಕು ಎಂದರೆ ಜೆಡಿಎಸ್ ನಿಯಂತ್ರಣದಲ್ಲಿಡಿ. ನಮ್ಮ ರಕ್ಷಣೆಗೆ ಅಲ್ಲದೇ ಹೋದರೂ ಪಕ್ಷದ ರಕ್ಷಣೆಗೆ ಮುಖಂಡರು ಎಚ್ಚರಗೊಳ್ಳಿ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ. ಸಿದ್ದರಾಮಯ್ಯ ಅವರಿಂದ ಮಾತ್ರ ಜೆಡಿಎಸ್ ಅನ್ನು ನಿಯಂತ್ರಿಸಲು ಸಾಧ್ಯ ಎಂದು ಸಭೆಯಲ್ಲಿ ಚರ್ಚೆ ನಡೆದಿದೆ.

ಲಿಂಗಾಯಿತರು ಕಾರಣ
ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿಗೆ ಪ್ರತ್ಯೇಕ ಲಿಂಗಾಯತ ಧರ್ಮದ ಹೋರಾಟ ಕಾರಣವಾಯಿತು ಎಂಬ ಅಭಿಪ್ರಾಯ ಸಭೆಯಲ್ಲಿ ಕೇಳಿಬಂತು. ಕಳೆದ ಬಾರಿ ನಮಗೆ ಮತ ಹಾಕಿದ್ದ ಎಲ್ಲಾ ಲಿಂಗಾಯತರು ಈ ಬಾರಿ ಬಿಜೆಪಿ ಬೆಂಬಲಿಸಿದ್ದಾರೆ. ಪ್ರತ್ಯೇಕ ಧರ್ಮದ ಶಿಫಾರಸು ಮಾಡಬಾರದಿತ್ತು ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು.

ಅಚ್ಚರಿ ಮೂಡಿಸಿದ ಗೈರು ಹಾಜರಿ
2018ರ ವಿಧಾನಸಭೆ ಚುನಾವಣೆಯಲ್ಲಿ ಸೋತ ಹಲವು ಅಭ್ಯರ್ಥಿಗಳು ಇಂದಿನ ಸಭೆಗೆ ಹಾಜರಾಗಿದ್ದರು. ಆದರೆ, ನಾಗಲಮಂಗಲದಲ್ಲಿ ಸೋತ ಚೆಲುವರಾಯಸ್ವಾಮಿ, ಸಿದ್ದರಾಮಯ್ಯ ಅವರ ಆಪ್ತರಾದ ಎಚ್.ಸಿ.ಮಹದೇವಪ್ಪ ಅವರು ಸಭೆಗೆ ಗೈರು ಹಾಜರಾಗಿದ್ದರು. ಈ ನಾಯಕರ ಗೈರು ಹಾಜರಿ ಅಚ್ಚರಿಗೆ ಕಾರಣವಾಗಿದೆ.












Click it and Unblock the Notifications