ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಲು ಒಕ್ಕಲಿಗ ಸಮುದಾಯದಿಂದ ಬೇಡಿಕೆ!
ಬೆಂಗಳೂರು, ನವೆಂಬರ್ 17 : ಕರ್ನಾಟಕ ಸರ್ಕಾರ ಮರಾಠ ಮತ್ತು ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಲು ಒಪ್ಪಿಗೆ ನೀಡಿದೆ. ಈಗ ಒಕ್ಕಲಿಗ ಸಮುದಾಯದವರು ಅಭಿವೃದ್ಧಿ ನಿಗಮ ಸ್ಥಾಪನೆ ಮಾಡುವಂತೆ ಸರ್ಕಾರದ ಮುಂದೆ ಬೇಡಿಕೆ ಇಟ್ಟಿದ್ದಾರೆ.
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಮತ್ತು ಯಲಹಂಕ ಶಾಸಕ ಎಸ್. ಆರ್. ವಿಶ್ವನಾಥ್ ಈ ಕುರಿತು ಮಾತನಾಡಿದ್ದಾರೆ. "ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆ ನಿರ್ಧಾರಕ್ಕೆ ಸ್ವಾಗತವಿದೆ" ಎಂದು ಹೇಳಿದ್ದಾರೆ.
"ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ರೀತಿ ಒಕ್ಕಲಿಗರ ಅಭಿವೃದ್ಧಿ ನಿಗಮವನ್ನೂ ರಚಿಸಲಿ. ಈ ಕುರಿತು ಒಕ್ಕಲಿಗ ಸಮುದಾಯದ ನಾಯಕರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಒತ್ತಾಯ ಮಾಡುತ್ತೇವೆ" ಎಂದು ಎಸ್. ಆರ್. ವಿಶ್ವನಾಥ್ ಆಗ್ರಹಿಸಿದ್ದಾರೆ.

"ವೀರಶೈವ ಲಿಂಗಾಯತ ಸಮುದಾಯ ದೊಡ್ಡದು. ಅದೇ ರೀತಿಯಲ್ಲಿ ಒಕ್ಕಲಿಗ ಸಮುದಾಯವೂ ಸಹ ದೊಡ್ಡದು. ಸಮುದಾಯದಲ್ಲೂ ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದವರು ಇದ್ದಾರೆ. ಆದ್ದರಿಂದ, ಅಭಿವೃದ್ಧಿ ನಿಗಮ ರಚನೆಗೆ ಒತ್ತಾಯ ಮಾಡುತ್ತೇವೆ" ಎಂದು ತಿಳಿಸಿದ್ದಾರೆ.
ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮೊದಲು ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಲು ಒಪ್ಪಿಗೆ ನೀಡಿದ್ದರು. ಈ ಕುರಿತು ಪರ-ವಿರೋಧ ಚರ್ಚೆಗಳು ಆರಂಭವಾಗಿದ್ದವು.
ಆಗ ವೀರಶೈವ ಲಿಂಗಾಯಿತರ ಸಮಗ್ರ ಅಭಿವೃದ್ಧಿಗಾಗಿ ಕರ್ನಾಟಕ ರಾಜ್ಯ ವೀರಶೈವ ಲಿಂಗಾಯಿತ ಅಭಿವೃದ್ಧಿ ಮಂಡಳಿ/ ನಿಗಮವನ್ನು ಕೂಡಲೇ ಸ್ಥಾಪಿಸಬೇಕೆಂದು ಮುಖ್ಯಮಂತ್ರಿಗಳಿಗೆ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಮನವಿ ಸಲ್ಲಿಸಿದ್ದರು.
ಮಂಗಳವಾರ ಮುಖ್ಯಮಂತ್ರಿಗಳು 'ಕರ್ನಾಟಕ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ' ಸ್ಥಾಪನೆ ಮಾಡಲು ಒಪ್ಪಿಗೆ ನೀಡಿದರು. ಈಗ ಒಕ್ಕಲಿಗ ಸಮುದಾಯ ಸಹ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಲು ಆಗ್ರಹಿಸುತ್ತಿದೆ.
ತುಮಕೂರು ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಅವರು "ವೀರಶೈವ ಲಿಂಗಾಯತ ಪ್ರಾಧಿಕಾರ ರಚನೆ ಮಾಡಿರುವುದು ನನಗೆ ಅಚ್ಚರಿ ತಂದಿದೆ. ಜಾತಿಗೊಂದು ಪ್ರಾಧಿಕಾರ ರಚನೆ ಮಾಡುತ್ತಾ ಹೋದರೆ ಅದಕ್ಕೆ ಮಿತಿಯೇ ಇರುವುದಿಲ್ಲ" ಎಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದರು.












Click it and Unblock the Notifications