Government Employee: OPS ಸಮಿತಿ ಪುನರ್ ರಚನೆ, ಸದಸ್ಯರ ಪಟ್ಟಿ
ಬೆಂಗಳೂರು, ಆಗಸ್ಟ್ 18: ಕರ್ನಾಟಕದ ಸರ್ಕಾರಿ ನೌಕರರ ಪ್ರಮುಖ ಬೇಡಿಕೆ ಹಳೆ ಪಿಂಚಣಿ ಪದ್ಧತಿಯನ್ನು ಪುನರ್ ಸ್ಥಾಪನೆ ಮಾಡುವುದು ಆಗಿದೆ. ಈ ವಿಚಾರದಲ್ಲಿ ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆಯೊಂದನ್ನು ಇಟ್ಟಿದೆ. ಈ ವಿಚಾರದಲ್ಲಿ ಈ ಹಿಂದೆ ರಚನೆ ಮಾಡಿದ್ದ ಸಮಿತಿಯನ್ನು ಪುನರ್ ರಚನೆ ಮಾಡಿದೆ. ಈ ಮೂಲಕ ಸರ್ಕಾರಿ ನೌಕರರ ಬೇಡಿಕೆಗೆ ಮನ್ನಣೆ ನೀಡಿದೆ.
ಈ ಕುರಿತು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಅರುಳ್ ಕುಮಾರ್ ಕೆಎಎಸ್, ಸರ್ಕಾರದ ಉಪ ಕಾರ್ಯದರ್ಶಿ ಆರ್ಥಿಕ ಇಲಾಖೆ (ಆಡಳಿತ ಮತ್ತು ಸಮನ್ವಯ) ಆದೇಶವೊಂದನ್ನು ಹೊರಡಿಸಿದ್ದಾರೆ.

ಈ ಆದೇಶವು ರಾಜ್ಯದಲ್ಲಿ ಜಾರಿಯಲ್ಲಿರುವ ರಾಷ್ಟ್ರೀಯ ಪಿಂಚಣಿ ಯೋಜನೆಯ ಬದಲಾಗಿ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಮಾಡುವ ಸಾಧ್ಯತೆಗಳ ಕುರಿತು ಪರಿಶೀಲಿಸಲು ಸಮಿತಿ ರಚಿಸುವ ಬಗ್ಗೆ ಎಂಬ ವಿಷಯ ಒಳಗೊಂಡಿದೆ. ಸರ್ಕಾರಿ ಆದೇಶ ದಿನಾಂಕ 31/03/2006, ಸರ್ಕಾರಿ ಆದೇಶ ದಿನಾಂಕ 11/12/2018, ಸರ್ಕಾರಿ ಆದೇಶ ದಿನಾಂಕ 01/03/2023 ಉಲ್ಲೇಖಿಸಿದ್ದಾರೆ.
ಕರ್ನಾಟಕ ರಾಜ್ಯದಲ್ಲಿ ದಿನಾಂಕ 01/04/2006ರಂದು ಮತ್ತು ತದನಂತರ ಸರ್ಕಾರಿ ಸೇವೆಗೆ ಸೇರಿರುವ ಎಲ್ಲಾ ನೌಕರರಿಗೆ ಕಡ್ಡಾಯವಾಗಿ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ಜಾರಿಗೆ ತರಲಾಗಿರುತ್ತದೆ. ರಾಷ್ಟ್ರೀಯ ಪಿಂಚಣಿ ಯೋಜನೆಗೆ ಸೂಕ್ತ ಬದಲಾವಣೆ/ ಮಾರ್ಪಾಡು ಮಾಡಲು ಪರಿಶೀಲಿಸಲು ಅಧಿಕಾರಿಗಳನ್ನೊಳಗೊಂಡ ಸಮಿತಿಯನ್ನು ರಚಿಸಿ ಆದೇಶಿಸಲಾಗಿದೆ.
ರಾಷ್ಟ್ರೀಯ ಪಿಂಚಣಿ ಯೋಜನೆಗೆ ಸಂಬಂಧಿಸಿದಂತೆ ಈಗಾಗಲೇ ಹಳೆಯ ಪಿಂಚಣಿ ಯೋಜನೆ (Defined Pension Scheme) ಯನ್ನು ಮರು ಜಾರಿ ಮಾಡಿರುವ ರಾಜ್ಯಗಳಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಿರುವ ಕುರಿತು ಕೈಗೊಂಡಿರುವ ಕ್ರಮದ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಆದೇಶಿಸಲಾಗಿದೆ.
ಪ್ರಸ್ತುತ ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಮಗ್ರವಾಗಿ ಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ಸೂಕ್ತ ವರದಿಯನ್ನು ಸಲ್ಲಿಸಲು ಅನುವಾಗುವಂತೆ ಸಮಿತಿಯನ್ನು ಪುನರ್ ರಚಿಸುವುದು ಅಗತ್ಯವೆಂದು ಸರ್ಕಾರವು ಮನಗಂಡಿರುತ್ತದೆ. ಅದರಂತೆ ಈ ಕೆಳಕಂಡ ಆದೇಶಿಸಿದೆ ಎಂದು ಹೇಳಿದೆ.
ಪರಿಷ್ಕೃತ ಆದೇಶವೇನು?; ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ರಾಷ್ಟ್ರೀಯ ಪಿಂಚಣಿ ಯೋಜನೆಗೆ ಸಂಬಂಧಿಸಿದಂತೆ ಈಗಾಗಲೇ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ದಿನಾಂಕ 11/12/2018ರ ಮತ್ತು ದಿನಾಂಕ 1/3/2023ರ ಸರ್ಕಾರಿ ಆದೇಶಗಳನ್ವಯ ರಚಿಸಲಾಗಿರುವ ಸಮಿತಿಯನ್ನು ಈ ಕೆಳಕಂಡಂತೆ ಪುನರ್ ರಚಿಸಿದೆ.
* ಅಂಜುಂ ಪರ್ವೇಜ್, ಭಾ.ಆ.ಸೇ., ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ. ಅಧ್ಯಕ್ಷರು.
* ರಿತೇಶ್ ಕುಮಾರ್ ಸಿಂಗ್, ಭಾ.ಆ.ಸೇ., ಸರ್ಕಾರದ ಪ್ರಧಾನ ಕಾರ್ಯದರ್ಶಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ. ಸದಸ್ಯರು.
* ಅಮಲಾನ್ ಆದಿತ್ಯ ಬಿಸ್ವಾಸ್, ಭಾ.ಆ.ಸೇ., ಪ್ರಾದೇಶಿಕ ಆಯುಕ್ತರು, ಬೆಂಗಳೂರು ವಿಭಾಗ. ಸದಸ್ಯರು.
* ಡಾ. ವಿಶಾಲ್ ಆರ್., ಭಾ.ಆ.ಸೇ., ಸರ್ಕಾರದ ಕಾರ್ಯದರ್ಶಿ (ವಿತ್ತೀಯ ಸುಧಾರಣೆ), ಆರ್ಥಿಕ ಇಲಾಖೆ. ಸದಸ್ಯರು.
* ಡಾ. ಎಂ.ಟಿ. ರೇಜು, ಭಾ.ಆ.ಸೇ., ಸರ್ಕಾರದ ಕಾರ್ಯದರ್ಶಿ (ವೆಚ್ಚ), ಆರ್ಥಿಕ ಇಲಾಖೆ. ಸದಸ್ಯ ಕಾರ್ಯದರ್ಶಿ.
ಸಮಿತಿಯು ಈಗಾಗಲೇ ಹಿಂದಿನ ಡಿಫೈನ್ಡ್ ಪಿಂಚಣಿ ಯೋಜನೆಯನ್ನು ಮರು ಜಾರಿ ಮಾಡಿರುವ ರಾಜ್ಯಗಳಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಿರುವ ಕುರಿತು ಕೈಗೊಂಡಿರುವ ಕ್ರಮದ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಸೂಚಿಸಿದೆ.
ಮುಂದುವರೆದು, ಸಮಿತಿಯು ತನ್ನದೇ ಆದ ಕಾರ್ಯವಿಧಾನಗಳನ್ನು ರೂಪಿಸಿಕೊಳ್ಳುವಲ್ಲಿ ಸಕ್ಷಮವಾಗಿರುತ್ತದೆ. ಸಮಿತಿಯ ಪರಿಶೀಲನೆಗೊಳಪಟ್ಟ ಅಂಶಗಳಿಗೆ ಅಗತ್ಯವೆನಿಸಿದ ಮಾಹಿತಿಗಳನ್ನು ಒದಗಿಸಲು ಸರ್ಕಾರದ ಎಲ್ಲಾ ಇಲಾಖೆಗಳು ನಿಗದಿತ ಕಾಲಮಿತಿಯೊಳಗೆ ಸೂಕ್ತ ನೆರವು ನೀಡುವಂತೆ ಸೂಚಿಸಿದೆ ಎಂದು ಆದೇಶ ತಿಳಿಸಿದೆ.












Click it and Unblock the Notifications