ಪಂಚಮಸಾಲಿ ಮೀಸಲಾತಿ ಹೋರಾಟ: ಸಿಎಂಗೆ ಮಧ್ಯಂತರ ವರದಿ ಸಲ್ಲಿಕೆ, ಇಂದು ನಿರ್ಧಾರ ಸಾಧ್ಯತೆ
ಬೆಂಗಳೂರು, ಡಿ. 22: ಪಂಚಮಸಾಲಿ ಸಮುದಾಯದಿಂದ 2ಎ ಪ್ರವರ್ಗದಡಿ ಮೀಸಲಾತಿಗೆ ಒತ್ತಾಯಿಸಿ ಬೆಳಗಾವಿಯಲ್ಲಿ ಬೃಹತ್ ಪಾದಯಾತ್ರೆ ನಡೆಯುತ್ತಿದೆ. ಇದೇ ವೇಳೆ ಗುರುವಾರ ಕರ್ನಾಟಕ ರಾಜ್ಯ ಖಾಯಂ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮಧ್ಯಂತರ ವರದಿ ಸಲ್ಲಿಸಿದ್ದಾರೆ.
ಗುರುವಾರ ಮಧ್ಯಾಹ್ನ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಪಂಚಮಸಾಲಿ ಸಮುದಾಯದ ಹಿಂದುಳಿದಿರುವಿಕೆ ಕುರಿತು ಸಲ್ಲಿಸಲಾಗಿರುವ ಮಧ್ಯಂತರ ವರದಿ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ.
ಪಂಚಮಸಾಲಿ ಮೀಸಲಾತಿ ಹೋರಾಟ: ಬೆಳಗಾವಿಯ ಹಿರೇಬಾಗೇವಾಡಿಯಲ್ಲಿ ಪೊಲೀಸ್ ಬಂದೋಬಸ್ತ್
ಪಂಚಮಸಾಲಿ ಸಮುದಾಯ ಪ್ರಸ್ತುತ 3B ವರ್ಗದಲ್ಲಿ ಇದ್ದು, ಇಲ್ಲಿ ಅವರು ಶೇಕಡಾ 5 ರಷ್ಟು ಮೀಸಲಾತಿಯನ್ನು ಪಡೆಯುತ್ತಿದ್ದಾರೆ. ಆದರೆ 15% ಮೀಸಲಾತಿಯನ್ನು ಖಾತರಿಪಡಿಸುವ ಇತರ ಹಿಂದುಳಿದ ವರ್ಗಗಳ (OBC) 2ಎ ಪ್ರವರ್ಗದಡಿ ಮೀಸಲಾತಿಗೆ ಒತ್ತಾಯಿಸುತ್ತಿದ್ದಾರೆ.
ಡಿಸೆಂಬರ್ 19 ರಂದು ಅಧಿವೇಶನ ಪ್ರಾರಂಭವಾಗುವ ಮೊದಲು ಆಯೋಗ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದರು. ಆದರೆ, ಆಯೋಗ ಗುರುವಾರ (ಡಿಸೆಂಬರ್ 22) ಮಧ್ಯಂತರ ವರದಿಯನ್ನು ಸಲ್ಲಿಸಿದೆ.
ಒಬಿಸಿ ಆಯೋಗದ ವರದಿ ನಂತರ ಮೀಸಲಾತಿ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮರ್ಥಿಸಿಕೊಂಡಿದ್ದಾರೆ.
ವೀರಶೈವ ಲಿಂಗಾಯತರ ಪ್ರಬಲ ಉಪಪಂಗಡಗಳಲ್ಲಿ ಒಂದಾದ ಪಂಚಮಸಾಲಿ ಸಮಾಜದವರು ಮೀಸಲಾತಿಗಾಗಿ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲು ಬೆಳಗಾವಿಯ ಸುವರ್ಣ ಸೌಧದಕ್ಕೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದ್ದರು. ಸುವರ್ಣಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಬೆದರಿಕೆ ಹಾಕಿರುವ ಸಮುದಾಯದವರು ಇಂದೇ ಮೀಸಲಾತಿ ಪ್ರಕಟಿಸುವಂತೆ ಸಿಎಂಗೆ ಗಡುವು ನೀಡಿದ್ದಾರೆ.
ಗುರುವಾರ ಬೆಳಗಾವಿಯಲ್ಲಿ ಬೃಹತ್ ಸಮಾವೇಶವನ್ನು ಹಮ್ಮಿಕೊಂಡಿದೆ. ರಾಜ್ಯ ಸರ್ಕಾರದ ಮೇಲೆ ಒತ್ತಡ ಹಾಕಲು ಶಕ್ತಿ ಪ್ರದರ್ಶನ ನಡೆಸುತ್ತಿದೆ.
ಇತ್ತ, ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗುರುವಾರ ಸಿಎಂ ಬಸವರಾಜ ಬೊಮ್ಮಾಯಿಗೆ ಎಚ್ಚರಿಕೆ ನೀಡಿದ್ದು, ತಮ್ಮ ಬೇಡಿಕೆಯನ್ನು ಈಡೇರಿಸದಿದ್ದರೆ ಸಮುದಾಯವು ಪಕ್ಷಕ್ಕೆ ಮತ ಹಾಕುವುದಿಲ್ಲ ಎಂದಿದ್ದಾರೆ.
"ಡಿಸೆಂಬರ್ 22 ರೊಳಗೆ ನಿರ್ಧಾರ ತೆಗೆದುಕೊಳ್ಳುವುದಾಗಿ ಸಿಎಂ ಭರವಸೆ ನೀಡಿದ್ದರು, ಆದರೆ ಅವರು ಇನ್ನೂ ತೆಗೆದುಕೊಂಡಿಲ್ಲ. ಹೇಗಾದರೂ ಮಾಡಿ ಸಮುದಾಯದವರು ಪಕ್ಷಕ್ಕೆ ಮತ ಹಾಕುತ್ತಾರೆ ಎಂಬ ನಂಬಿಕೆ ಸಿಎಂಗೆ ಇದ್ದರೆ ಅದು ತಪ್ಪು, ಬಿಜೆಪಿ ವಿರುದ್ಧ ಸಮುದಾಯದವರು ಮತ ಹಾಕಿದರೆ ಅಭ್ಯರ್ಥಿಗಳು ಠೇವಣಿ ಕಳೆದುಕೊಳ್ಳಬೇಕಾಗುತ್ತದೆ" ಎಂದು ಯತ್ನಾಳ್ ಎಚ್ಚರಿಸಿದ್ದಾರೆ.
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಹೆಸರಿಸದೆ ವಾಗ್ದಾಳಿ ನಡೆಸಿದ ಅವರು, ಪಂಚಮಸಾಲಿ ಮೀಸಲಾತಿ ಕುರಿತು ನಿರ್ಧಾರ ತೆಗೆದುಕೊಳ್ಳುವುದನ್ನು ಯಾರು ತಡೆಯುತ್ತಿದ್ದಾರೆ ಎಂಬುದನ್ನು ಸಿಎಂ ಬಹಿರಂಗಪಡಿಸಬೇಕು ಎಂದಿದ್ದಾರೆ.
ಈ ಹಿಂದೆ ಕೂಡಲಸಂಗಮ ಮಠದ ಬಸವ ಜಯ ಮೃತ್ಯುಂಜಯ ಶ್ರೀಗಳು ಯಡಿಯೂರಪ್ಪ ಸಮುದಾಯಕ್ಕೆ 2ಎ ಮೀಸಲಾತಿಗೆ ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಿದ್ದರು.
ಸದ್ಯ 2ಎ ವರ್ಗದಲ್ಲಿ 102 ಜಾತಿಗಳಿದ್ದು, ಪಂಚಮಸಾಲಿಗಳನ್ನು ವರ್ಗೀಕರಣಕ್ಕೆ ಸೇರಿಸಿದರೆ ಮೀಸಲಾತಿ ಸಿಗುವ ಅವಕಾಶ ಮತ್ತಷ್ಟು ಕಡಿಮೆಯಾಗಲಿದೆ.
ಸಮಾವೇಶಕ್ಕೆ ಹೆಚ್ಚಿನ ಪೊಲೀಸ್ ಭದ್ರತೆ ನೀಡಲಾಗಿದ್ದು, ಸುವರ್ಣಸೌಧದ ಬಳಿ ಪ್ರತಿಭಟನಾಕಾರರು ಬರದಂತೆ ಕ್ರಮ ಕೈಗೊಳ್ಳಲಾಗಿದೆ. ಹಿರೇಬಾಗೇವಾಡಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಇನ್ನು, 2ಎ ವರ್ಗದಲ್ಲಿ ಮೀಸಲಾತಿಗೆ ಆಗ್ರಹಿಸುತ್ತಿರುವ ಪಂಚಮಸಾಲಿ ಲಿಂಗಾಯತರ ವಿರುದ್ಧ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಒಕ್ಕೂಟದ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಡಿ.26 ರಂದು ಬೆಳಗಾವಿಯ ಸುವರ್ಣಸೌಧದ ಎದುರು ಧರಣಿ ನಡೆಸುವುದಾಗಿ ಘೋಷಿಸಿದ್ದಾರೆ.