ಉಪ್ಪು ತಿಂದವನು ನೀರು ಕುಡಿಯಲೇಬೇಕು, ಕ್ಷಮಿಸುವ ಪ್ರಶ್ನೆಯೇ ಇಲ್ಲ: ಪ್ರಜ್ವಲ್ ಕುರಿತು ಕುಮಾರಸ್ವಾಮಿ ಫಸ್ಟ್ ರಿಯಾಕ್ಷನ್
ಬೆಂಗಳೂರು, ಏಪ್ರಿಲ್ 28: ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿರುವ ಹಾಸನದಲ್ಲಿ ಹರಿದಾಡುತ್ತಿರುವ ಅಶ್ಲೀಲ ವಿಡಿಯೋ ವೈರಲ್ ಪ್ರಕರಣದ ಬಗ್ಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಸಂಸದ ಪ್ರಜ್ವಲ್ ರೇವಣ್ಣ ಮೇಲಿನ ಆರೋಪದ ಬಗ್ಗೆ ಮೌನ ಮುರಿದಿರುವ ಕುಮಾರಸ್ವಾಮಿ ಉಪ್ಪು ತಿಂದವನು ನೀರು ಕುಡಿಯಲೇಬೇಕು ಎಂದಿದ್ದಾರೆ
ಈ ಬಗ್ಗೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನಾಗಲಿ ದೇವೇಗೌಡರಾಗಲಿ ಎಂದೂ ಸಹ ಹೆಣ್ಣು ಮಕ್ಕಳ ವಿಚಾರದಲ್ಲಿ ಅತ್ಯಂತ ಗೌರವಯುತವಾಗಿ ನಡೆದುಕೊಂಡಿದ್ದೇವೆ. ಯಾರಾದರೂ ಕಷ್ಟ ಹೇಳಿಕೊಂಡು ಬಂದರೆ ಅವರ ಕಷ್ಟ ಪರಿಹರಿಸಿ ಕಳುಹಿಸಿದ್ದೇವೆ. ನಾವಂತೂ ಮಹಿಳೆಯರಿಗೆ ಅತ್ಯಂತ ಹೆಚ್ಚಿನ ಗೌರವ ನೀಡಿದ್ದೇವೆ ಎಂದರು.

ಹಾಸನದಲ್ಲಿ ಚುನಾವಣೆ ಸಂದರ್ಭದಲ್ಲಿ ನಡೆದ ಪ್ರಕರಣದ ಬಗ್ಗೆ ಎಸ್ಐಟಿ ತನಿಖೆಗೆ ಈಗಾಗಲೇ ರಾಜ್ಯ ಸರ್ಕಾರ ಆದೇಶ ಮಾಡಿದೆ. ತನಿಖೆ ನಡೆಯಲಿ. ಎಸ್ಐಟಿ ತನಿಖೆಯಿಂದ ವಾಸ್ತವಾಂಶ ಹೊರಗೆ ಬರಲಿ. ಈ ನೆಲದ ಕಾನೂನಿನಲ್ಲಿ ಯಾರೇ ತಪ್ಪು ಮಾಡಿದರು ಉಪ್ಪು ತಿಂದವರು ನೀರು ಕುಡಿಯಲೇ ಬೇಕು. ನಾವಂತೂ ಯಾವುದಕ್ಕೂ ತಪ್ಪು ಮಾಡಿದ ವಿಷಯದಲ್ಲಿ ಯಾರಿಗೂ ಕ್ಷಮಿಸುವ ಪ್ರಶ್ನೆಯಿಲ್ಲ. ತನಿಖೆಯ ವರದಿ ಸಂಪೂರ್ಣ ಹೊರಗೆ ಬರಲಿ. ಬಂದ ನಂತರ ಈ ಬಗ್ಗೆ ಮಾತನಾಡುತ್ತೇನೆ ಎಂದು ಹೇಳಿದರು.
ಇನ್ನು ವಿಡಿಯೋ ಪ್ರಕರಣ ರಾಜ್ಯದಲ್ಲಿ ಸಂಚಲನ ಮೂಡಿಸುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಹೋಗಿದ್ದಾರೆ ಎನ್ನುವ ಪ್ರಶ್ನೆಗೆ ಉತ್ತರಿಸಿದ ಕುಮಾರಸ್ವಾಮಿ, ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಹೋಗಿದ್ದಾರೆ ಎನ್ನುವುದು ನನಗೆ ಗೊತ್ತಿಲ್ಲ. ಅದು ನನಗೆ ಸಂಬಂಧ ಪಟ್ಟಿಲ್ಲ. ಸರ್ಕಾರ ಎಸ್ಐಟಿ ತನಿಖೆಗೆ ಆದೇಶ ಮಾಡಿದ್ದಾರೆ. ಅವರು ವಿದೇಶಕ್ಕೆ ಹೋಗಿದ್ದರೂ ಕರೆದುಕೊಂಡು ಬರುವ ಜವಾಬ್ದಾರಿ ಅವರದ್ದು. ಅವರು ಕರೆದುಕೊಂಡು ಬರುತ್ತಾರೆ. ವಿಚಾರಣೆ ನಡೆಸುತ್ತಾರೆ ಅದರ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ ಎಂದು ಸ್ಪಷ್ಟನೆ ನೀಡಿದ್ದಾರೆ.












Click it and Unblock the Notifications