ಜಾತಿ ನಿಂದನೆ ಆರೋಪ: ಮುನಿರತ್ನ ವಿರುದ್ಧ ಸಿಡಿದ ಒಕ್ಕಲಿಗ ನಾಯಕರು
ಜಾತಿ ನಿಂದನೆ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ಮುನಿರತ್ನ ಅವರ ವಿರುದ್ಧ ಒಕ್ಕಲಿಗ ರಾಜಕಾರಣಿಗಳು ಸಿಡಿದೆದ್ದಿದ್ದಾರೆ. ಕಾಂಗ್ರೆಸ್ ಪಕ್ಷದ ಒಕ್ಕಲಿಗ ಸಮುದಾಯದ ಶಾಸಕರು ಹಾಗೂ ಸಚಿವರು ನೇರವಾಗಿ ಇಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮುನಿರತ್ನ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್, ಶಾಸಕರಾದ ಎಚ್.ಸಿ.ಬಾಲಕೃಷ್ಣ, ಶರತ್ ಬಚ್ಚೇಗೌಡ ಸೇರಿದಂತೆ ಒಕ್ಕಲಿಗ ಸಮುದಾಯ ನಾಯಕರ ನಿಯೋಗವು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದೆ. ಒಕ್ಕಲಿಗ ಸಮುದಾಯವನ್ನು ಅವಾಚ್ಯವಾಗಿ ನಿಂದಿಸಿರುವ ಶಾಸಕ ಮುನಿರತ್ನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಿಎಂಗೆ ಮನವಿ ಮಾಡಿದ್ದಾರೆ.

ಒಂದು ಜಾತಿಯ ಬಗ್ಗೆ ಮುನಿರತ್ನ ಅವರು ಕೀಳಾಗಿ ಮಾತನಾಡಿದ್ದು, ಇದರಿಂದ ಒಕ್ಕಲಿಗ ಸಮುದಾಯಕ್ಕೆ ಭಾರಿ ನೋವುಂಟಾಗಿದೆ. ಈ ಬಗ್ಗೆ ತನಿಖೆ ನಡೆಸಿ, ಕೂಡಲೇ ಮುನಿರತ್ನ ವಿರುದ್ಧ ಸೂಕ್ತ ಜರುಗಿಸಬೇಕು ಎಂದು ಕೇಳಿಕೊಂಡಿದ್ದಾರೆ.
ಏನಿದು ಪ್ರಕರಣ?: ಗುತ್ತಿಗೆದಾರ ಚೆಲುವರಾಜು ಎಂಬುವರಿಗೆ ಕೊಲೆ ಬೆದರಿಕೆ ಹಾಗೂ ಜಾತಿ ನಿಂದನೆ ಆರೋಪದಲ್ಲಿ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಬಳಿಕ ಅವರನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಲಾಗಿದ್ದು, ಎರಡು ದಿನಗಳವರೆಗೆ ಕಸ್ಟಡಿಗೂ ಒಪ್ಪಿಸಲಾಗಿದೆ.
ಮುನಿರತ್ನ ಹಾಗೂ ಗುತ್ತಿಗೆದಾರ ಚೆಲುವರಾಜು ನಡುವೆ ನಡೆದಿದೆ ಎನ್ನಲಾದ ಸಂಭಾಷಣೆಯ ಆಡಿಯೋವೊಂದು ಎಲ್ಲೆಡೆ ಹರಿದಾಡಿತ್ತು. ಇದನ್ನು ಪತ್ರಿಕಾಗೋಷ್ಠಿಯಲ್ಲೂ ಗುತ್ತಿಗೆದಾರ ಬಿಡುಗಡೆ ಮಾಡಿದ್ದರು. ಇದರಲ್ಲಿ ಮುನಿರತ್ನ ಅವರು ಒಕ್ಕಲಿಗರು ಹಾಗೂ ದಲಿತ ಸಮುದಾಯಗಳ ಬಗ್ಗೆ ಕೆಟ್ಟ ಪದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಇದರ ಬೆನ್ನಲ್ಲೇ ಗುತ್ತಿಗೆದಾರ ಚಲುವರಾಜು, ಮುನಿರತ್ನ ಅವರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು. ಬಳಿಕ ಮುನಿರತ್ನ ಅವರ ಪತ್ತೆಗೆ ಪೊಲೀಸರು ಮುಂದಾದಾಗ ಅವರು ಕೋಲಾರ ಜಿಲ್ಲೆಯಲ್ಲಿ ಇರುವ ಮಾಹಿತಿ ಸಿಕ್ಕಿತ್ತು. ಕೊನೆಗೆ ಮುಳಬಾಗಿಲು ತಾಲ್ಲೂಕಿನ ನಂಗಲಿ ಗ್ರಾಮದ ಬಳಿ ಮುನಿರತ್ನ ಅವರನ್ನು ಪೊಲೀಸರು ಲಾಕ್ ಮಾಡಿದ್ದರು. ಕೋಲಾರದಿಂದ ಆಂಧ್ರದ ಚಿತ್ತೂರು ಕಡೆಗೆ ಹೋಗಲು ಶಾಸಕ ಮುನಿರತ್ನ ಮುಂದಾಗಿದ್ದರು. ಮುನಿರತ್ನ ಅವರ ಮೊಬೈಲ್ ಲೊಕೇಶನ್ ಟ್ರ್ಯಾಕ್ ಮಾಡಿ ಅವರಿದ್ದ ಸ್ಥಳವನ್ನು ಪೊಲೀಸರು ಪತ್ತೆ ಹಚ್ಚಿ ಬಂಧಿಸಿದ್ದರು.
ಇದಕ್ಕೂ ಮುನ್ನ ವಿಡಿಯೋ ಬಿಡುಗಡೆ ಮಾಡಿದ್ದ ಶಾಸಕ ಮುನಿರತ್ನ, ರಾಜಕೀಯ ಪಿತೂರಿಯಿಂದಾಗಿ ಈ ರೀತಿಯ ಆರೋಪಗಳನ್ನು ನನ್ನ ಮೇಲೆ ಮಾಡಿದ್ದಾರೆ. ನಾನೆಲ್ಲೂ ನಾಪತ್ತೆಯಾಗಿಲ್ಲ ಎಂದಿದ್ದರು. ಅಲ್ಲದೆ, ಆ ಆಡಿಯೋ ನನ್ನದೇ ಎಂದು ಸಾಬೀತಾದರೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದರು. ಇದಾದ ಕೆಲವೇ ಹೊತ್ತಿನಲ್ಲಿ ಪೊಲೀಸರು ಮುನಿರತ್ನ ಅವರನ್ನು ವಶಕ್ಕೆ ಪಡೆದಿದ್ದರು.
ಮುನಿರತ್ನ ಅವರು ನಿಂದಿಸಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆದ ಬೆನ್ನಲ್ಲೇ ರಾಜ್ಯಾದ್ಯಂತ ದಲಿತರು ಹಾಗೂ ಒಕ್ಕಲಿಗ ಸಮುದಾಯದವರು ಪ್ರತಿಭಟನೆ ನಡೆಸುತ್ತಿದ್ದಾರೆ. ನಿನ್ನೆ ಮಹಿಳಾ ಕಾಂಗ್ರೆಸ್ ವತಿಯಿಂದಲೂ ರಾಜ್ಯಾದ್ಯಂತ ಪ್ರತಿಭಟನೆ ನಡೆಯಿತು. ಮಹಿಳೆಯರ ಬಗ್ಗೆ ಕೆಟ್ಟದಾಗಿ ಮಾತನಾಡಿರುವ ಮುನಿರತ್ನ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದ್ದರು.












Click it and Unblock the Notifications