ಓಲಾ ಉಬರ್ ಆಟೋ ಬಿಕ್ಕಟ್ಟು: ಪರಿಹಾರ ಕಂಡುಕೊಳ್ಳಲು ಸರ್ಕಾರಕ್ಕೆ ಸಲಹೆ ನೀಡಿದ ಹೈಕೋರ್ಟ್
ಬೆಂಗಳೂರು, ಅ.13. ಸದ್ಯದ ಓಲಾ, ಉಬರ್ ಆಟೋರಿಕ್ಷಾಗಳಿಗೆ ಸಂಬಂಧಿಸಿದಂತೆ ಉಂಟಾಗಿರುವ ಬಿಕ್ಕಟ್ಟನ್ನು ಜನರಿಗೆ ತೊಂದರೆ ಆಗದಂತೆ ಪರಿಹರಿಸುವಂತೆ ಹೈಕೋರ್ಟ್ ಸರ್ಕಾರಕ್ಕೆ ಆದೇಶಿಸಿದೆ.
ಹಾಗಾಗಿ ಸರ್ಕಾರ ನಾಳೆ (ಶುಕ್ರವಾರ) ಪರಿಹಾರದ ಬಗ್ಗೆ ನ್ಯಾಯಾಲಯಕ್ಕೆ ತಿಳಿಸುವುದಾಗಿ ಹೇಳಿರುವ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಮುಂದೂಡಲಾಗಿದೆ.
ಆಪ್ ಆಧಾರಿತ ಆಟೋರಿಕ್ಷಾಗೆ ಸೇವೆಗೆ ನ್ಯಾಯಯುತ ದರ ವಿಧಿಸುವುದಕ್ಕೆ ಸಂಬಂಧಿಸಿದಂತೆ ಸೇವೆ ನೀಡುತ್ತಿರುವ ಓಲಾ ಮತ್ತು ಉಬ್ ಕಂಪನಿಗಳೊಂದಿಗೆ ಸಭೆ ನಡೆಸಿ ಜನರಿಗೆ ಅನುಕೂಲವಾಗುವಂತಹ ಸಹಮತದ ತೀರ್ಮಾನ ಕೈಗೊಳ್ಳಬೇಕೆಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಗುರುವಾರ ನಿರ್ದೇಶಿಸಿದೆ.
ಆ್ಯಪ್ ಆಧಾರಿತ ಓಲಾ ಮತ್ತು ಉಬರ್ ಆಟೋರಿಕ್ಷಾ ಸೇವೆ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಸರ್ಕಾರ ಇತ್ತೀಚೆಗೆ ಹೊರಡಿಸಿರುವ ಆದೇಶ ರದ್ದುಪಡಿಸುವಂತೆ ಕೋರಿ ಎಎನ್ಐ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಮತ್ತು ಉಬರ್ ಇಂಡಿಯಾ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂಜಿಎಸ್ ಕಮಲ್ ಅವರ ಪೀಠ ಈ ಸೂಚನೆ ನೀಡಿದೆ.
ಕೆಲ ಕಾಲ ವಾದ ಆಲಿಸಿದ ಬಳಿಕ ನ್ಯಾಯಪೀಠ, ಪ್ರಕರಣ ಸಂಬಂಧ ಅರ್ಜಿದಾರ ಕಂಪನಿಗಳೊಂದಿಗೆ ಮತ್ತೊಮ್ಮೆ ತುರ್ತಾಗಿ ಸಭೆ ಚರ್ಚಿಸಿದ ನಂತರ ನ್ಯಾಯಾಲಯಕ್ಕೆ ಮಾಹಿತಿ ನೀಡಲಾಗುವುದು ಎಂದು ಸರ್ಕಾರ ಹೇಳುತ್ತಿದೆ. ಆದ್ದರಿಂದ ಪ್ರಕರಣದಲ್ಲಿ ಅಂತಿಮ ನಿರ್ಧಾರಕ್ಕೆ ಕೈಗೊಳ್ಳುವ ಮುನ್ನ ತಾತ್ಕಾಲಿಕ ಪರಿಹಾರ ಕ್ರಮ ಕಂಡುಕೊಳ್ಳುವುದು ಅನಿವಾರ್ಯ ಎಂದು ಹೇಳಿ ನ್ಯಾಯಪೀಠ ವಿಚಾರಣೆಯನ್ನು ಶುಕ್ರವಾರಕ್ಕೆ ಬೆಳಗ್ಗೆ 10.30ಕ್ಕೆ ಮುಂದೂಡಿತು.
ಸಹಮತ ಸಾಧಿಸುವರೆಗೂ ಕಂಪನಿಗಳು ಸಹ ಸರ್ಜ್ ಚಾರ್ಜ್ ಮಾಡಬಾರದು. ಅರ್ಜಿದಾರ ಕಂಪನಿಗಳ ವಿರುದ್ಧ ಬಲವಂತದ ಕ್ರಮ ಜರುಗಿಸುವುದಿಲ್ಲ ಎಂಬ ಭರವಸೆಯನ್ನು ರಾಜ್ಯ ಅಡ್ವೋಕೇಟ್ ಅವರು ಮೌಖಿಕವಾಗಿ ನೀಡಬೇಕು ಎಂದು ನ್ಯಾಯಪೀಠ ತಿಳಿಸಿತು.
ಕೋರ್ಟ್ ಮೌಖಿಕ ಅಭಿಮತ:
ಅರ್ಜಿದಾರರ ಕಂಪನಿಗಳು ಪರವಾನಗಿ ಪಡೆಯದೆ ಆಟೋರಿಕ್ಷಾ ಸೇವೆ ಒದಗಿಸುತ್ತಿವೆ. ಆದರೆ, ಪರವಾನಗಿ ಪಡೆಯದೆ ಸೇವೆ ಸುವುದಕ್ಕೆ ಅವಕಾಶ ಇಲ್ಲ. ಹೆಚ್ಚಿನ ಪ್ರಯಾಣ ದರ ಪಡೆಯಲಾಗುತ್ತಿದೆ ಎಂಬುದಾಗಿ ಸರ್ಕಾರ ಹೇಳುತ್ತಿದೆ. ಮತ್ತೊಂದಡೆ ಆಟೋರಿಕ್ಷಾ ಸೇವೆ ಸ್ಥಗಿತಗೊಳಿಸುವುದಕ್ಕೆ ಸರ್ಕಾರ ಸಕಾರಣ ನೀಡಿಲ್ಲ. ತಮ್ಮ ಮನವಿ ಆಲಿಸದೆ ದಿಢೀರ್ ಆಗಿ ಸರ್ಕಾರ ಆದೇಶ ಹೊರಡಿಸಿದೆ. ದರ ನಿಗದಿ ಮಾಡುವುದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ನಿಯಮ ರೂಪಿಸಿಲ್ಲ ಎಂಬುದಾಗಿ ಅರ್ಜಿದಾರರು ಕಂಪನಿಗಳು ಹೇಳುತ್ತಿವೆ. ಹೀಗಿರುವಾಗ ಸೇವೆ ಸ್ಥಗಿತ ಮಾಡುವುದರಿಂದ ಅಂತಿಮವಾಗಿ ಸಾರ್ವಜನಿಕರಿಗೆ ಅನಾನುಕೂಲವಾಗುತ್ತದೆ. ಅವರು ತೊಂದರೆಗೆ ಒಳಗಾಗಬಾರದು ಎಂದು ಮೌಖಿಕವಾಗಿ ಅಭಿಪ್ರಾಯಪಟ್ಟಿತು.
ನೋಟಿಸ್ ನೀಡದೆ ಕ್ರಮ:
ಅರ್ಜಿದಾರರ ಸಂಸ್ಥೆಗಳ ಪರ ವಕೀಲರು, ಆ್ಯಪ್ ಆಧಾರಿತ ಆಟೋರಿಕ್ಷಾ ಸೇವೆ ನೀಡುವುದಕ್ಕೆ ಪರವನಾಗಿ ಅಗತ್ಯವಿಲ್ಲ ಎಂದು ಪ್ರತಿಪಾದಿಸುವ ಪ್ರಕರಣವು ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಾಕಿಯಿದೆ. ಇನ್ನೂ ಓಲಾ ಮತ್ತು ಉಬರ್ ಆ?ಯಪ್ ಮೂಲಕ ಆಟೋರಿಕ್ಷಾ ಸೇವೆ ಸ್ಥಗಿತಗೊಳಿಸಿರುವುದಕ್ಕೆ ರಾಜ್ಯ ಸರ್ಕಾರವು ಸಮಂಜಸ ಕಾರಣ ನೀಡಿಲ್ಲ. 'ಕರ್ನಾಟಕ ರಾಜ್ಯ ಬೇಡಿಕೆ ಆಧಾರಿತ ಸಾರಿಗೆ ತಂತ್ರಜ್ಞಾನ ಅಗ್ರಿಗೇಟರ್ಸ್ ನಿಯಮಗಳು-2016'ರ ನಿಯಮ 2(7) ಅಡಿಯಲ್ಲಿ ಮೋಟಾರು ಕ್ಯಾಬ್ (ಟ್ಯಾಕ್ಸಿ) ವ್ಯಾಖ್ಯಾನದಡಿಗೆ ಆಟೋರಿಕ್ಷಾ ಸಹ ಬರುತ್ತದೆ?. ಹಾಗಾಗಿ, ಸೇವೆ ಸ್ಥಗಿತಗೊಳಿಸುವ ಬಗ್ಗೆ ವಿವರಣೆ ಕೇಳಿ ಅ.6ರಂದು ನೀಡಿರುವ ನೋಟಿಸ್ ಮತ್ತು ಸೇವೆ ಸ್ಥಗಿತಗೊಳಿಸಲು ಅ.11ರಂದು ಹೊರಡಿಸಿರುವ ಆದೇಶಕ್ಕೆ ಮಾನ್ಯತೆ ಇಲ್ಲ ಎಂದು ನ್ಯಾಯಪೀಠಕ್ಕೆ ವಿವರಿಸಿದರು.
ನಿಯಮ ಪಾಲಿಸುತ್ತಿಲ್ಲ:
ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ, ಆಟೋ ರಿಕ್ಷಾ ಸೇವೆಯು ಟ್ಯಾಕ್ಸಿ ಸೇವೆಯಡಿ ಬರುವುದಿಲ್ಲ. ಕರ್ನಾಟಕ ರಾಜ್ಯ ಬೇಡಿಕೆ ಆಧಾರಿತ ಸಾರಿಗೆ ತಂತ್ರಜ್ಞಾನ ಅಗ್ರಿಗೇಟರ್ಸ್ ನಿಯಮಗಳು-2016ರ ನಿಯಮ 4ರ ಅಡಿ ಉಬರ್ ಮತ್ತು ಓಲಾ ಪರವಾನಗಿ ಪಡೆದಿಲ್ಲ. ಉಳಿದ ಆಟೋರಿಕ್ಷಾ ಸೇವೆಗೆ ರಾಜ್ಯ ಸರ್ಕಾರವು ನಿರ್ದಿಷ್ಟ ದರ ನಿಗದಿಪಡಿಸಿದೆ. ಆದರೆ, ಅದನ್ನು ಅರ್ಜಿದಾರ ಕಂಪೆನಿಗಳು ಪಾಲಿಸುತ್ತಿಲ್ಲ ಎಂದು ವಾದಿಸಿದರು.
ಪ್ರಕರಣ:
ಕರ್ನಾಟಕ ರಾಜ್ಯ ಬೇಡಿಕೆ ಆಧಾರಿತ ಸಾರಿಗೆ ತಂತ್ರಜ್ಞಾನ ಅಗ್ರಿಗೇಟರ್ಸ್ ನಿಯಮಗಳ ಅಡಿ ಟ್ಯಾಕ್ಸಿ ಸೇವೆ ಒದಗಿಸಲು ಓಲಾ ಮತ್ತು ಉಬರ್ ಕಂಪೆನಿಗಳಿಗೆ ಪರವಾನಗಿ ನೀಡಲಾಗಿದೆ. ಆದರೆ, ಆಟೋರಿಕ್ಷಾ ಸೇವೆ ಒದಗಿಸಲು ಪರವಾನಗಿ ಪಡೆದುಕೊಂಡಿಲ್ಲ. ಪರವಾನಗಿ ಪಡೆಯದೆ ಆಟೋ ರಿಕ್ಷಾ ಸೇವೆ ಒದಗಿಸಲಾಗುತ್ತಿದೆ ಎಂದು ಆಕ್ಷೇಪಿಸಿದ್ದ ಸಾರಿಗೆ ಇಲಾಖೆ, ಆಟೋರಿಕ್ಷಾ ಸೇವೆ ಸ್ಥಗಿತಗೊಳಿಸುವ ವಿಚಾರವಾಗಿ ವಿವರಣೆ ಕೇಳಿ ಅ.6ರಂದು ನೋಟಿಸ್ ನೀಡಿತ್ತು. ಸೇವೆ ಸ್ಥಗಿತಗೊಳಿಸಲು ಅ.೧೧ರಂದು ಆದೇಶ ಮಾಡಿದೆ. ಅದನ್ನು ಪ್ರಶ್ನಿಸಿ ಅರ್ಜಿದಾರ ಕಂಪನಿಗಳು ಹೈಕೋರ್ಟ್ ಮೊರೆ ಹೋಗಿವೆ.