ಹಳೆ ಪಿಂಚಣಿ ಯೋಜನೆ ಜಾರಿ; ಸರ್ಕಾರಿ ನೌಕರರಲ್ಲಿ ಹೊಸ ಭರವಸೆ
ಬೆಂಗಳೂರು, ಡಿಸೆಂಬರ್ 18; ಹೊಸ ಪಿಂಚಣಿ ಯೋಜನೆ (NPS) ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆಯನ್ನು ಪುನರ್ ಜಾರಿಗೊಳಿಸಬೇಕು ಎಂದು ಕರ್ನಾಟಕ ಸರ್ಕಾರದ ಮುಂದೆ ಸರ್ಕಾರಿ ನೌಕರರು ಬೇಡಿಕೆ ಇಟ್ಟಿದ್ದಾರೆ.
ಕರ್ನಾಟಕ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿಯೂ ಕಾಂಗ್ರೆಸ್ ಪಕ್ಷ ಪ್ರಣಾಳಿಕೆಯಲ್ಲಿ ಹಳೆ ಪಿಂಚಣಿ ಯೋಜನೆ ಮರು ಜಾರಿ ಭರವಸೆ ನೀಡಿತ್ತು. ಸರ್ಕಾರಿ ನೌಕರರು ಯಾವಾಗ ಈ ಕುರಿತು ಸರ್ಕಾರ ಆದೇಶ ಮಾಡಲಿದೆ? ಎಂದು ಕಾದು ಕುಳಿತಿದ್ದಾರೆ.

ಸುಪ್ರೀಂಕೋರ್ಟ್ 2004ರ ಜನವರಿ 1ಕ್ಕಿಂತ ಮೊದಲು ನೇಮಕಗೊಂಡ ನೌಕರರನ್ನು ಹೊಸ ಪಿಂಚಣಿ ಯೋಜನೆಯಿಂದ ಕೈ ಬಿಡಬೇಕು ಎಂದು ಆದೇಶಿಸಿದೆ. ಆದ್ದರಿಂದ ಕೇಂದ್ರ ಸರ್ಕಾರ ಈ ಕುರಿತು ಮಾರ್ಗಸೂಚಿ ಹೊರಡಿಸಿದೆ.
11,700 ನೌಕರರು ಹಳೆ ಪಿಂಚಣಿ ಯೋಜನೆಗೆ; ಸುಪ್ರೀಂಕೋರ್ಟ್ ಆದೇಶ ಮತ್ತು ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ಕರ್ನಾಟಕ ಸರ್ಕಾರ 11,700 ನೌಕರರನ್ನು ಹಳೆ ಪಿಂಚಣಿ ಯೋಜನೆಗೆ ಸೇರಿಸಿ ಆದೇಶ ಹೊರಡಿಸಿದೆ. ಇದರಿಂದಾಗಿ ಹೊಸ ಪಿಂಚಣಿ ಯೋಜನೆ ಜಾರಿಗೆ ಆಗ್ರಹಿಸುತ್ತಿರುವ ನೌಕರರಿಗೆ ಹೊಸ ಭರವಸೆ ಮೂಡಿದೆ.
ಕರ್ನಾಟಕ ಸರ್ಕಾರದ ಆದೇಶವನ್ನು ಎನ್ಪಿಎಸ್ ನೌಕರರ ಸಂಘದ ಅಧ್ಯಕ್ಷ ಶಾಂತರಾಮ ತೇಜ ಸ್ವಾಗತಿಸಿದ್ದಾರೆ. "ನಿರಂತರ ಹೋರಾಟದ ಫಲವಾಗಿ ಎನ್ಪಿಎಸ್ ನೌಕರರು ತಮ್ಮ ಗುರಿ ತಲುಪುವ ಹಂತದಲ್ಲಿದ್ದಾರೆ. ಈ ನಿಟ್ಟಿನಲ್ಲಿ ಇನ್ನಷ್ಟು ಶ್ರಮವನ್ನು ಸಂಘ ಹಾಕಲಿದೆ" ಎಂದು ಹೇಳಿದ್ದಾರೆ.
ಮತ್ತೊಂದು ಕಡೆ ಹಣಕಾಸು ಸಚಿವರು ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಸೆಂಬರ್ 23ರಂದು ಅಧಿಕಾರಿಗಳು ಮತ್ತು ಎನ್ಪಿಎಸ್ ನೌಕರರ ಸಂಘದ ಸಭೆಯನ್ನು ಕರೆದಿದ್ದಾರೆ. ಸಭೆಯಲ್ಲಿ ಸಂಘದ ಬೇಡಿಕೆಗಳ ಕುರಿತು ಅಧಿಕಾರಿಗಳ ಜೊತೆ ನೇರವಾಗಿ ಮಾತುಕತೆ ನಡೆಸುವ ನಿರೀಕ್ಷೆ ಇದೆ.
ಕರ್ನಾಟಕದ ಸರ್ಕಾರಿ ನೌಕರರು ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ ಮರು ಜಾರಿಗೆ ಒತ್ತಾಯಿಸುತ್ತಿದ್ದಾರೆ. ಈ ಕುರಿತು ವಿಧಾನಸಭೆಯಲ್ಲಿ ಸಹ ಮುಖ್ಯಮಂತ್ರಿಗಳು ಉತ್ತರ ನೀಡಿದ್ದಾರೆ.
ಬೆಳಗಾವಿ ಅಧಿವೇಶನದಲ್ಲಿ ಸಿದ್ದರಾಮಯ್ಯ, ಸರ್ಕಾರದ ಆದೇಶ ದಿನಾಂಕ 1/3/2023ರಲ್ಲಿ ರಾಜ್ಯದಲ್ಲಿ ಜಾರಿ ಇರುವ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ರದ್ದುಪಡಿಸುವ ಸಂಬಂಧ ಈಗಾಗಲೇ ಹಳೆ ಪಿಂಚಣಿ ಯೋಜನೆಯನ್ನು ಮರು ಜಾರಿ ಮಾಡಿರುವ ರಾಜ್ಯಗಳಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಿರುವ ಕುರಿತು ಕೈಗೊಂಡಿರುವ ಕ್ರಮಗಳ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಆದೇಶಿಸಿದೆ ಎಂದು ಹೇಳಿದ್ದಾರೆ.
ಕರ್ನಾಟಕದಲ್ಲಿ ಹೊಸ ಪಿಂಚಣಿ ಯೋಜನೆಯಡಿ ಸುಮಾರು 2,65,715 ನೌಕರರು ಇದ್ದಾರೆ. ಅಲ್ಲದೇ ಎನ್ಪಿಎಸ್ ಅಡಿ ಬರುವ 1169 ನೌಕರರು ಮೃತಪಟ್ಟಿದ್ದಾರೆ. 1463 ನೌಕರರು ನಿವೃತ್ತಿ ಹೊಂದಿದ್ದಾರೆ. ಸರ್ಕಾರಿ ನೌಕರರು, ವಿವಿಧ ನೌಕರರ ಸಂಘಗಳ ಮೂಲಕ ಎನ್ಪಿಎಸ್ ರದ್ದುಗೊಳಿಸಬೇಕು ಎಂದು ಹೋರಾಟ ನಡೆಸುತ್ತಲೇ ಇದ್ದಾರೆ.
2023ರ ಮಾರ್ಚ್ನಲ್ಲಿ ಸರ್ಕಾರಿ ನೌಕರರು ಮುಷ್ಕರ ಆರಂಭಿಸಿದಾಗ 7ನೇ ವೇತನ ಆಯೋಗದ ವರದಿ ಜಾರಿ, ಎನ್ಪಿಎಸ್ ರದ್ದುಗೊಳಿಸಬೇಕು ಎಂಬ ಎರಡು ಪ್ರಮುಖ ಬೇಡಿಕೆಯನ್ನು ಸರ್ಕಾರದ ಮುಂದೆ ಇಟ್ಟಿದ್ದರು. ಕರ್ನಾಟಕದ ಕಾಂಗ್ರೆಸ್ ಸರ್ಕಾರ ಸಹ ಎನ್ಪಿಎಸ್ ರದ್ದುಗೊಳಿಸುವ ಬಗ್ಗೆ ಭರವೆಯನ್ನು ಕೊಟ್ಟಿದೆ.
ಕರ್ನಾಟಕ ಸರ್ಕಾರ ರಾಜ್ಯ 7ನೇ ವೇತನ ಆಯೋಗ ರಚನೆ ಮಾಡಿದೆ. ಸರ್ಕಾರಿ ನೌಕರರು, ನೌಕರರ ವಿವಿಧ ಸಂಘನೆಗಳು ಕೆ. ಸುಧಾಕರ್ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗಕ್ಕೆ ಹಳೆ ಪಿಂಚಣಿ ಯೋಜನೆ ಮರು ಜಾರಿಗೊಳಿಸಬೇಕು ಎನ್ಪಿಎಸ್ ರದ್ದುಗೊಳಿಸಲು ಶಿಫಾರಸು ಮಾಡಬೇಕು ಎಂದು ಮನವಿಯನ್ನು ಸಲ್ಲಿಸಿವೆ. ಆದರೆ ಆಯೋಗ ವರದಿ ಇನ್ನೂ ಸರ್ಕಾರಕ್ಕೆ ಸಲ್ಲಿಕೆಯಾಗಿಲ್ಲ.
ಕೆಲವು ದಿನಗಳ ಹಿಂದೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ನಿರ್ದೇಶನ ಹಾಗೂ ಮಾನದಂಡಗಳಿಗೆ ಒಳಪಡುವ ಕರ್ನಾಟಕ ಕೇಡರ್ನ 8 ಐಎಎಸ್, 7 ಐಪಿಎಸ್ ಹಾಗೂ ಒಬ್ಬರು ಐಎಫ್ಎಸ್ ಅಧಿಕಾರಿಗೆ ಹಳೆ ಪಿಂಚಣಿ ಯೋಜನೆ (ಒಪಿಎಸ್) ಸೌಲಭ್ಯ ನೀಡಿ ಆದೇಶ ಹೊರಡಿಸಿದೆ.












Click it and Unblock the Notifications