Government Employees: ಸರ್ಕಾರಿ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸಿ.ಎಸ್.ಷಡಾಕ್ಷರಿ ಆಗ್ರಹ: ಇಲ್ಲಿದೆ ಮಾಹಿತಿ
ಬೆಂಗಳೂರು, ಫೆಬ್ರವರಿ 16: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಹಾಸಮ್ಮೇಳನದ ಪೂರ್ವಭಾವಿಯಾಗಿ ಕರೆದಿದ್ದು, ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಆಗ್ರಹಿಸಿದರು.
ಈ ಕುರಿತು ಸಿ.ಎಸ್.ಷಡಾಕ್ಷರಿ ಅವರು ಮಾತನಾಡಿ, ನೂತನ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ ಹಳೆ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸಬೇಕು. ಮೊದಲ ಹಂತವಾಗಿ ಎನ್.ಪಿ.ಎಸ್ ನೌಕರರ ವೇತನದಲ್ಲಿ ಕಡಿತ ಮಾಡಿಕೊಳ್ಳುತ್ತಿರುವ ವಂತಿಗೆಯನ್ನು ನಿಲ್ಲಿಸಲು ಕೂಡಲೇ ಸರ್ಕಾರಿ ಆದೇಶ ಹೊರಡಿಸಬೇಕು ಎಂದು ಹೇಳಿದರು.

ಫೆಬ್ರುವರಿ 27ರಂದು ನಡೆಯಲಿರುವ 'ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ' ಮತ್ತು ಕಾರ್ಯಾಗಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವ ಸಂಪುಟದ ಸಚಿವರುಗಳು, ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ನಗದುರಹಿತ ಆರೋಗ್ಯ ಚಿಕಿತ್ಸೆ ನೀಡುವ 'ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ'ಯನ್ನು ಶೀಘ್ರ ಅನುಷ್ಠಾನಗೊಳಿಸಬೇಕಿದೆ. ಸಂಜೀವಿನಿ ಯೋಜನೆ ಅಂತಿಮ ಘಟ್ಟಕ್ಕೆ ಬಂದಿದೆ. ಶೀಘ್ರದಲ್ಲೇ ಜಾರಿಗೆ ತಂದರೆ ಈ ಯೋಜನೆಯಿಂದ ಸಹಾಯ ಆಗಲಿದೆ. ಅಲ್ಲದೇ ನೂತನ ಪಿಂಚಣಿ ಯೋಜನೆ ರದ್ದು ಮಾಡಬೇಕು ಎಂಬುದು ನಮ್ಮ ಬೇಡಿಕೆ. ರಾಜ್ಯ ಸರ್ಕಾರ ಈಗಾಗಲೇ ಬದಲಾವಣೆಯನ್ನು ತಂದಿರುವ ರಾಜ್ಯಗಳಿಗೆ ಹೋಗಿ ಅಧ್ಯಯನ ಮಾಡುತ್ತೇವೆ ಎಂದಿತ್ತು. ಆದರೆ ಇದುವರೆಗೂ ಇದರ ಬಗ್ಗೆ ಮಾಡಲಿಲ್ಲ.
ಇನ್ನೂ ಈ ತಿಂಗಳು 27 ರಂದು ನಡೆಯುವ ಸಮ್ಮೇಳನದ ವೇಳೆ ಪ್ರಮುಖ ಮೂರು ಬೇಡಿಕೆಗಳನ್ನು ಸರ್ಕಾರದ ಮುಂದಿಡಲಿದ್ದೇವೆ. ಹಳೆಯ ಪಿಂಚಣಿ ಯೋಜನೆ ಮರುಜಾರಿ, 7ನೇ ವೇತನ ಆಯೋಗದ ವರದಿಯ ಅನುಷ್ಠಾನ, ಆರೋಗ್ಯ ಸಂಜೀವಿನಿ ಯೋಜನೆ ಜಾರಿ ಪ್ರಮುಖ ಹಕ್ಕೊತ್ತಾಯಗಳಾಗಿವೆ. 7ನೇ ವೇತನ ಆಯೋಗದಿಂದ ವರದಿ ಪಡೆದು, ಆಯೋಗದ ಶಿಫಾರಸುಗಳನ್ನು ಶೀಘ್ರವಾಗಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.
ಇನ್ನೂ ಈ ಸಮಿತಿಯ ವರದಿ ಬಜೆಟ್ನಲ್ಲಿ ಹೊರಬರಬೇಕೆನ್ನುವುದು ಇಲ್ಲ. ಕ್ಯಾಬಿನೆಟ್ನಲ್ಲಿ ಚರ್ಚೆ ಮಾಡಿ ಜಾರಿಗೆ ತರಬಹುದು. ಮಾರ್ಚ್ ವೇಳೆಗೆ ಈ ವರದಿಯ ಅನುಷ್ಠಾನ ಆಗಬೇಕು ಎನ್ನುವುದು ನಮ್ಮ ಒತ್ತಾಯ. ಲೋಕಸಭೆ ಚುನಾವಣೆಯೂ ಇರುವುದರಿಂದ ಶೀಘ್ರದಲ್ಲೇ ಜಾರಿಗೆ ಬರಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಆಗ್ರಹಿಸಿದರು.












Click it and Unblock the Notifications