ರಾಜ್ಯದಲ್ಲಿ ಓಮಿಕ್ರಾನ್ ಕೇಸ್: ಯಾರಿಗೂ ತೀವ್ರತೆ ಇಲ್ಲ, ಆತಂಕ ಬೇಡ
ಬೆಂಗಳೂರು, ಡಿಸೆಂಬರ್ 2: ದೇಶದಲ್ಲಿ ಮೊದಲ ಬಾರಿಗೆ ಕರ್ನಾಟಕದಲ್ಲಿ ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಿಂದ ಕೇಂದ್ರಕ್ಕೆ ಕಳುಹಿಸಿಕೊಟ್ಟ ಕೋವಿಡ್ನ ಎರಡು ಮಾದರಿಗಳಲ್ಲಿ ಓಮಿಕ್ರಾನ್ ವೈರಾಣು ಪತ್ತೆಯಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಜೊತೆಗೆ ಸೋಂಕಿತರ ಪೈಕಿ ಯಾರಿಗೂ ತೀವ್ರತೆ ಇಲ್ಲ, ಆತಂಕ ಬೇಡ ಎಂದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದಲ್ಲಿ ವೇಗದ ಸಮರ್ಥ ಪರೀಕ್ಷೆ ವ್ಯವಸ್ಥೆಯಿಂದಾಗಿ ಬೇಗನೆ ಕೋವಿಡ್ ಓಮಿಕ್ರಾನ್ ವೈರಾಣು ಪತ್ತೆಯಾಗಿದೆ. ನವೆಂಬರ್ 20 ರಂದು ದಕ್ಷಿಣ ಆಫ್ರಿಕಾದಿಂದ ಬಂದ ಪ್ರಯಾಣಿಕರೊಬ್ಬರ ಮಾದರಿಯನ್ನು ಕೇಂದ್ರಕ್ಕೆ ಕಳುಹಿಸಿಕೊಟ್ಟಿದ್ದು, ಇದರಲ್ಲಿ ವೈರಾಣು ಪತ್ತೆಯಾಗಿದೆ. ಅವರು ರಾಜ್ಯಕ್ಕೆ ಬಂದಾಗ ಹೋಟೆಲ್ ನಲ್ಲಿ ತಂಗಿದ್ದರು. ಅವರ ವರದಿ ಪಾಸಿಟಿವ್ ಬಂದಿದ್ದು, ಲಕ್ಷಣ ರಹಿತವಾಗಿತ್ತು. ಮತ್ತೆ ನವೆಂಬರ್ 23 ರಂದು ಖಾಸಗಿ ಲ್ಯಾಬ್ ನಲ್ಲಿ ಪರೀಕ್ಷೆ ಮಾಡಿಸಿದ್ದು, ನೆಗೆಟಿವ್ ವರದಿ ಬಂದಿದೆ ಎಂದು ತಿಳಿಸಿದ್ದರು. ಅವರ 24 ಪ್ರಾಥಮಿಕ ಹಾಗೂ 240 ದ್ವಿತೀಯ ಸಂಪರ್ಕದ ವ್ಯಕ್ತಿಗಳನ್ನು ಪತ್ತೆ ಮಾಡಿ ಪರೀಕ್ಷೆ ಮಾಡಲಾಗಿದೆ. ಆದರೆ ಯಾರೂ ಪಾಸಿಟಿವ್ ಆಗಿಲ್ಲ ಎಂದು ವಿವರಿಸಿದರು.
46 ವರ್ಷದ ವೈದ್ಯರೊಬ್ಬರಲ್ಲಿ ಈ ವೈರಾಣು ಕಂಡುಬಂದಿದೆ. ಅವರಿಗೆ ಪಾಸಿಟಿವ್ ಆಗಿದ್ದು, ಅದೇ ದಿನ ಸ್ವಯಂ ಐಸೋಲೇಟ್ ಆಗಿದ್ದಾರೆ. ಅವರಲ್ಲಿ ವೈರಾಣು ಲೋಡ್ ಅಧಿಕವಾಗಿದೆ. ಆದರೆ ಇವರಿಗೆ ಯಾವುದೇ ಪ್ರಯಾಣದ ಇತಿಹಾಸ ಇಲ್ಲ. ಅವರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರನ್ನು ಪರೀಕ್ಷಿಸಿದ್ದು, 5 ಮಂದಿಯ ವರದಿ ಪಾಸಿಟಿವ್ ಬಂದಿದೆ. ಒಟ್ಟು ಆರು ಮಂದಿಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಮೇಲೆ ನಿರಂತರ ನಿಗಾ ಇರಿಸಿದ್ದು, ಯಾರಿಗೂ ಹೆಚ್ಚು ಸಮಸ್ಯೆಯಾಗಿಲ್ಲ ಎಂದು ತಿಳಿಸಿದರು.

ಜನರು ತಪ್ಪದೇ ಕೋವಿಡ್ ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು. ಯಾರೂ ಆತಂಕಕ್ಕೆ ಒಳಗಾಗಬಾರದು. ಮುಖ್ಯಮಂತ್ರಿಗಳು ದೆಹಲಿಯಿಂದ ಬಂದ ಕೂಡಲೇ ಸಭೆ ನಡೆಸಿ ಚರ್ಚೆ ಮಾಡಲಿದ್ದಾರೆ. ವೈರಾಣು ನಿಯಂತ್ರಣಕ್ಕೆ ಎಲ್ಲ ಬಗೆಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಆದರೆ ಯಾರೂ ಊಹಾಪೋಹಗಳನ್ನು ಹರಡಬಾರದು ಎಂದು ಕೋರಿದರು.
ದಕ್ಷಿಣ ಆಫ್ರಿಕಾದಿಂದ ನವೆಂಬರ್ ಮೊದಲ ವಾರದಲ್ಲಿ ಬೆಂಗಳೂರಿಗೆ ಬಂದಿರುವ 66 ವರ್ಷದ ಓರ್ವ ವೃದ್ಧ ಹಾಗೂ 46 ವರ್ಷದ ವ್ಯಕ್ತಿಗೆ ಸೋಂಕು ಕಂಡು ಬಂದಿತ್ತು. ಓಮಿಕ್ರಾನ್ ಪ್ರಕರಣ ಪತ್ತೆ ಹಚ್ಚಲು ಜಿನೋಮ್ ಪರೀಕ್ಷೆ ಸೇರಿದಂತೆ ಹೆಚ್ಚಿನ ತಪಾಸಣೆಗೆ ಸ್ಯಾಂಪಲ್ ಗಳನ್ನು ಕಳಿಸಲಾಗಿತ್ತು. ಇಂದು(ಡಿ.2) ಓಮಿಕ್ರಾನ್ ಸೋಂಕು ತಗುಲಿರುವುದು ಪತ್ತೆಯಾಗಿದೆ.
ಬಿಬಿಎಂಪಿ ಆಯುಕ್ತರ ಸ್ಪಷ್ಟನೆ: ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ, "ರಾಜ್ಯದಲ್ಲಿ ಐದು ಜನರಿಗೆ ಓಮಿಕ್ರಾನ್ ವೈರಸ್ ತಗುಲಿರುವುದು ದೃಢಪಟ್ಟಿದೆ. 46 ವರ್ಷದ ಸೋಂಕಿತ ವ್ಯಕ್ತಿ ನವೆಂಬರ್ 20ರಂದು ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಬಂದಿರುತ್ತಾರೆ. ಮೂರು ದಿನ ಮಾತ್ರ ಹೋಟೆಲ್ನಲ್ಲಿ ಕ್ವಾರಂಟೈನ್ ಆಗಿದ್ದರು. ಮೂರು ದಿನಗಳ ನಂತರ ಪರೀಕ್ಷೆ ಮಾಡಲಾಗಿದೆ. ನೆಗೆಟಿವ್ ಬಂದಿದೆ. ಈ ವ್ಯಕ್ತಿಯಲ್ಲಿ ರೋಗ ಲಕ್ಷಣಗಳು ಕಂಡು ಬಂದಿರಲಿಲ್ಲ. ಪರೀಕ್ಷೆ ಬಳಿಕ ಇವರು ನೇರವಾಗಿ ಬೊಮ್ಮಸಂದ್ರಕ್ಕೆ ತೆರಳಿದ್ದಾರೆ. ನಂತರ ಅವರು ಮೀಟಿಂಗ್ನಲ್ಲಿ ಭಾಗಿಯಾಗಿದ್ದಾರೆ. ಇವರ ಕಂಪನಿ ಬೋರ್ಡ್ ಮೀಟಿಂಗ್ನಲ್ಲಿ ಆರು ಜನ ಭಾಗಿಯಾಗಿದ್ದರು. ಹೋಮ್ ಕ್ವಾರಂಟೈನ್ ಆಗದೇ ಮೀಟಿಂಗ್ನಲ್ಲಿ ಅವರು ಭಾಗಿಯಾಗಿದ್ದಾರೆ. ಹೀಗಾಗಿ ಪ್ರಥಮ ಸಂಪರ್ಕದಲ್ಲಿದ್ದವರಲ್ಲಿ ಸೋಂಕು ಹರಡಿರುವ ಸಾಧ್ಯತೆ ಇದೆ. ಈ ಬಗ್ಗೆ ಪರಶೀಲನೆ ನಡೆಸಲಾಗಿದ್ದು ಮಾದರಿಗಳನ್ನು ಪರೀಕ್ಷೆಗೆ ನೀಡಲಾಗಿದೆ" ಎಂದರು.
66 ವರ್ಷದ ಸೋಂಕಿತ ಎರಡನೇ ವ್ಯಕ್ತಿಗೆ ಯಾವುದೇ ಟ್ರಾವೆಲ್ ಹಿಸ್ಟ್ರಿ ಇಲ್ಲ. ಇದರ ಬಗ್ಗೆ ಪರಿಶೀಲನೆ ಮಾಡಲಾಗುತ್ತಿದೆ. ನವೆಂಬರ್ 22 ರಂದು ಎರಡನೇ ವ್ಯಕ್ತಿಗೆ ಪರೀಕ್ಷೆ ಮಾಡಲಾಗಿದೆ. ಈ ವೇಳೆ ಪಾಸಿಟಿವ್ ಬಂದಿದೆ. ನವೆಂಬರ್ 24ರಂದು ಓಮಿಕ್ರಾನ್ ಸೋಂಕು ದೃಢಪಟ್ಟಿದೆ. 13 ಪ್ರಥಮ 2೦5 ದ್ವೀತಿಯ ಸಂಪರ್ಕದಲ್ಲಿದ್ದರು. ಇವರಲ್ಲಿ ಮೂವರಿಗೆ ಪಾಸಿಟಿವ್ ಬಂದಿದೆ. ಒಟ್ಟು ಐದು ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು ಗುಪ್ತಾ ಹೇಳಿದರು.












Click it and Unblock the Notifications