ಕಾಂಗ್ರೆಸ್ ಟಿಕೆಟ್ಗೆ ಕೊನೆಗೂ ಅರ್ಜಿ ಸಲ್ಲಿಸಿದ ಸಿದ್ದರಾಮಯ್ಯ!
ಬೆಂಗಳೂರು, ನವೆಂಬರ್ 21: ಮುಂದಿನ ವರ್ಷ ವಿಧಾನಸಭೆ ಚುನಾವಣೆಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಾಂಗ್ರೆಸ್ನಿಂದ ಟಿಕೆಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಯಾವ ಕ್ಷೇತ್ರ ನಮೂದಿಸದೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾದ ಇಂದು ಅರ್ಜಿಸಲ್ಲಿಸಲಾಗಿದೆ.
2023ರ ವಿಧಾನಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಸ್ಪರ್ಧೆ ತೀವ್ರ ಕುತೂಹಲ ಮೂಡಿಸಿದೆ. ಈಗಾಗಲೆ ಚುನಾವಣೆ ಪ್ರಚಾರ ಆರಂಭಿಸಿದ್ದರೂ ಸಿದ್ದರಾಮಯ್ಯ ಸ್ಪರ್ಧೆ ಎಲ್ಲಿಂದ ಎನ್ನುವುದು ಮಾತ್ರ ಇನ್ನೂ ಖಚಿತವಾಗಿಲ್ಲ. ಆದರೆ ಚುನಾವಣೆಯಲ್ಲಿ ಸ್ಪರ್ಧಿಸಬೇಕೆಂಬ ಆಕಾಂಕ್ಷಿಗಳು ಮುಂಚಿತವಾಗಿ ಅರ್ಜಿ ಸಲ್ಲಿಸುವಂತೆ ಹೈಕಮಾಂಡ್ ಸೂಚನೆ ನೀಡಿರುವ ಹಿನ್ನೆಲೆ ಕೆಪಿಸಿಸಿ ಕಚೇರಿಯಲ್ಲಿ ಆಕಾಂಕ್ಷಿಗಳಿಂದ ಅರ್ಜಿ ಸ್ವೀಕರಿಸಲಾಗುತ್ತಿದೆ.
ಅಭ್ಯರ್ಥಿಗಳನ್ನು ಘೋಷಣೆ ಮಾಡುವ ಹಕ್ಕು ಸಿದ್ದರಾಮಯ್ಯಗೆ ಇಲ್ಲ: ಡಿ.ಕೆ.ಶಿವಕುಮಾರ್
ನವೆಂಬರ್ 5 ರಿಂದ 15 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ನಂತರ ಅರ್ಜಿ ಸಲ್ಲಿಸಲು ನವೆಂಬರ್ 21ಕ್ಕೆ ಅವಕಾಶ ನೀಡಲಾಗಿತ್ತು. ಸೋಮವಾರ ಕಡೆಯ ದಿನವಾಗಿದ್ದು, ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಕುತೂಹಲ ಹೆಚ್ಚಾಗಿತ್ತು. ಇನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕನಕಪುರ ಕ್ಷೇತ್ರದಿಂದ ಅರ್ಜಿ ಸಲ್ಲಿಸಿದ್ದರಿಂದ ಸಿದ್ದರಾಮಯ್ಯ ಕ್ಷೇತ್ರವನ್ನು ನಮೂದಿಸದೆ ಟಿಕೆಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಸೋಮವಾರ ಸಂಜೆ ಸಿದ್ದರಾಮಯ್ಯ ಪರ ವೆಂಕಟೇಶ್ ಹಾಗೂ ಪ್ರಭಾಕರ್ ಎಂಬುವರು ಕೆಪಿಸಿಸಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಿದ್ದಾರೆ. ತೀವ್ರ ಕುತೂಹಲದ ಹೊರತಾಗಿಯೂ ಸಿದ್ದರಾಮಯ್ಯ ಕ್ಷೇತ್ರವನ್ನು ಮಾತ್ರ ಬಹಿರಂಗಗೊಳಿಸಿಲ್ಲ. ಇತ್ತೀಚೆಗೆ ಮಾಧ್ಯಮಗಳ ಜೊತೆ ಮಾತನಾಡಿದ್ದ ಸಿದ್ದರಾಮಯ್ಯ ನಾನು ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬುದನ್ನು ಹೈಕಮಾಂಡ್ ನಿರ್ಧರಿಸಲಿದೆ, ಈಗಾಗಲೆ ಮೂರು ಕ್ಷೇತ್ರವನ್ನು ಶಾರ್ಟ್ಲಿಸ್ಟ್ ಮಾಡಿಕೊಂಡಿದ್ದೇನೆ ಎಂದು ತಿಳಿಸಿದ್ದರು.
ಮೂರು ಕ್ಷೇತ್ರ ಶಾರ್ಟ್ಲಿಸ್ಟ್
ಸಿದ್ದರಾಮಯ್ಯ ತಮ್ಮ ಹಳೆಯ ಕ್ಷೇತ್ರವಾದ ವರುಣ, ಹಾಲಿ ಶಾಸಕನಾಗಿರುವ ಕ್ಷೇತ್ರವಾದ ಬಾದಾಮಿ ಹಾಗೂ ಕೋಲಾರ ಕ್ಷೇತ್ರಗಳನ್ನು ಶಾರ್ಟ್ಲಿಸ್ಟ್ ಮಾಡಿಕೊಂಡಿದ್ದಾರೆ. ಈ ಮೂರರಲ್ಲಿ ಒಂದರಲ್ಲಿ ಸ್ಪರ್ಧೆ ಮಾಡುವುದನ್ನು ಖಚಿತಪಡಿಸಿದ್ದಾರೆಯೇ ಹೊರತು ಯಾವ ಕ್ಷೇತ್ರವೆಂದೂ ನಿರ್ಧರಿಸಿಲ್ಲ, ಈ ನಿರ್ಧಾರವನ್ನು ಹೈಕಮಾಂಡ್ಗೆ ಬಿಟ್ಟಿರುವುದಾಗಿ ತಿಳಿಸಿದ್ದರು.
ಇನ್ನು ಕಳೆದ ವರ್ಷದಂತೆ ಈ ಬಾರಿ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸುವುದಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಯ್ಕೆ ಮಾಡಿರುವ ಮೂರು ಕ್ಷೇತ್ರಗಳಲ್ಲಿ ವರುಣ ಗೆಲ್ಲುವುದಕ್ಕೆ ಸುಲಭದ ಕ್ಷೇತ್ರವಾಗಿದೆ. ಕೋಲಾರ ಮತ್ತು ಬಾದಾಮಿಯಲ್ಲಿ ಗೆಲ್ಲುವ ಅವಕಾಶವಿದೆಯಾದರೂ ಕಠಿಣ ಸ್ಪರ್ಧೆಯನ್ನು ಎದುರಿಸಬೇಕಾಗಿದೆ.
ರಾಜ್ಯದಲ್ಲಿ ಪ್ರಬಲ ರಾಜಕಾರಣಿಯಾಗಿರುವ ಸಿದ್ದರಾಮಯ್ಯ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳುತ್ತಾರೆ ಎಂಬುದು ಕೇವಲ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರಲ್ಲಿ ಮಾತ್ರವಲ್ಲದೆ ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಹಾಗೂ ರಾಜ್ಯ ಜನತೆಯಲ್ಲೂ ತೀವ್ರ ಕುತೂಹಲ ಮೂಡಿಸಿದೆ. ಆದರೆ ಕ್ಷೇತ್ರವನ್ನೇ ನಮೂದಿಸದೆ ಟಿಕೆಟ್ ಅರ್ಜಿ ಸಲ್ಲಿಸುವ ಮೂಲಕ ಕೂತೂಹಲವನ್ನು ಮತ್ತಷ್ಟು ಹೆಚ್ಚಾಗಿಸಿದ್ದಾರೆ.