ಯಡಿಯೂರಪ್ಪಗೆ 75, ರೈತ ಸಮಾವೇಶ, ಮೋದಿ ಆಗಮನ
ಬೆಂಗಳೂರು, ಫೆಬ್ರವರಿ 26 : ಕರ್ನಾಟಕ ಬಿಜೆಪಿ ಅಧ್ಯಕ್ಷ ಮತ್ತು 2018ರ ವಿಧಾನಸಭೆ ಚುನಾವಣೆಯ ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್.ಯಡಿಯೂರಪ್ಪ ಮಂಗಳವಾರ 75ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ.
ಯಡಿಯೂರಪ್ಪ ಹುಟ್ಟು ಹಬ್ಬದ ಅಂಗವಾಗಿ ದಾವಣಗೆರೆಯಲ್ಲಿ ರೈತ ಸಮಾವೇಶ ಆಯೋಜನೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿ 3ನೇ ಬಾರಿ ನರೇಂದ್ರ ಮೋದಿ ಪಾಲ್ಗೊಳ್ಳುತ್ತಿದ್ದಾರೆ.
ಬಿಎಸ್ಎಸ್ಎಸ್ಕೆ ಕಾರ್ಖಾನೆ ಆರಂಭ : ಅಮಿತ್ ಶಾ
75 ವರ್ಷವಾದವರಿಗೆ ಯಾವುದೇ ಹುದ್ದೆ ಇಲ್ಲ ಎಂಬುದು ಬಿಜೆಪಿಯೊಳಗಿನ ಅಲಿಖಿತ ನಿಯಮ. ಆದರೆ, ಅದನ್ನು ಬದಿಗೊತ್ತಿ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿದೆ.
ಕೇಂದ್ರ ನಾಯಕರ ಈ ನಿರ್ಧಾರ ಪಕ್ಷದ ಹಲವು ನಾಯಕರ ಹುಬ್ಬೇರುವಂತೆ ಮಾಡಿದೆ. ಮತ್ತೊಂದು ಕಡೆ ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರು ಮೈಸೂರಿನಲ್ಲಿ ನಡೆದ ನರೇಂದ್ರ ಮೋದಿ ಅವರ ಸಮಾವೇಶಕ್ಕೆ ಗೈರಾಗಿದ್ದು ಏಕೆ? ಎಂಬ ಪ್ರಶ್ನೆ ಎದ್ದಿದೆ.
ಈ ದೇಶದ ಪ್ರಧಾನಿಯಾಗಲು ಮೋದಿ ನಾಲಾಯಕ್: ಸಿದ್ದರಾಮಯ್ಯ
ಫೆ.27ರಂದು ಪ್ರಧಾನಿ ನರೇಂದ್ರ ಮೋದಿ ದಾವಣಗೆರೆಗೆ ಭೇಟಿ ನೀಡುತ್ತಿದ್ದಾರೆ. ಇದು ಕರ್ನಾಟಕದಲ್ಲಿ ಅವರ 3ನೇ ಚುನಾವಣಾ ಪ್ರಚಾರ ಭಾಷಣ. ಮೊದಲು ಬೆಂಗಳೂರು ನಂತರ ಮೈಸೂರಿನಲ್ಲಿ ಮೋದಿ ಸಮಾವೇಶ ಉದ್ದೇಶಿಸಿ ಮಾತನಾಡಿದ್ದಾರೆ.
ಕರ್ನಾಟಕ ಬಿಜೆಪಿ ರೈತರಿಗಾಗಿಯೇ ಸಮಾವೇಶ ಆಯೋಜನೆ ಮಾಡಿದೆ. ರೈತ ನಾಯಕರಾದ ಯಡಿಯೂರಪ್ಪ ಹುಟ್ಟು ಹಬ್ಬದ ದಿನವೇ ರೈತರ ಸಮಾವೇಶ ನಡೆಸುವ ಮೂಲಕ ಪಕ್ಷ ಚುನಾವಣಾ ಪ್ರಚಾರ ನಡೆಸುತ್ತಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ನಲ್ಲಿ ರೈತರಿಗಾಗಿ ಹಲವು ಯೋಜನೆ ಘೋಷಣೆ ಮಾಡಿದ್ದಾರೆ. ತಮ್ಮ ಭಾಷಣಗಳಲ್ಲಿ ಕೇಂದ್ರ ಸರ್ಕಾರ ರೈತರ ಸಾಲ ಮನ್ನಾ ಮಾಡಿಲ್ಲ ಎಂದು ಟೀಕಿಸುತ್ತಿದ್ದಾರೆ.
ಭಾನುವಾರ ಬೀದರ್ನಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ರೈತರ ಜೊತೆ ಸಂವಾದ ನಡೆಸಿದ್ದರು. ಈ ಸಂದರ್ಭದಲ್ಲಿ ಹಲವು ಗೊಂದಲ ಉಂಟಾಗಿತ್ತು. ರೈತರು ಪ್ರಶ್ನೆ ಕೇಳುವಾಗ ಅವರ ಮೈಕ್ ಕಸಿದುಕೊಂಡ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.
ಮಂಗಳವಾರದ ಸಮಾವೇಶದ ಮೂಲಕ ಯಡಿಯೂರಪ್ಪ ಅವರು ತಮ್ಮ ವರ್ಚಸ್ಸು ಹೆಚ್ಚಿಸಿಕೊಳ್ಳುವ ಜೊತೆಗೆ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡುವ ನಿರೀಕ್ಷೆ ಇದೆ.