ಉಪ ಲೋಕಾಯುಕ್ತ ಹುದ್ದೆ ಖಾಲಿ, ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಬೆಂಗಳೂರು, ಆಗಸ್ಟ್ 08; ಕಳೆದ ಜೂನ್ 14ರಿಂದ ಉಪಲೋಕಾಯುಕ್ತ-1 ಹುದ್ದೆ ಖಾಲಿ ಇದ್ದು, ಸರ್ಕಾರ ಅದನ್ನು ಭರ್ತಿ ಮಾಡಲು ಯಾವುದೇ ಕ್ರಮ ಕೈಗೊಂಡಿಲ್ಲ. ಇದೀಗ ವಿಚಾರ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದು, ನ್ಯಾಯಾಲಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.
ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಉಪ ಲೋಕಾಯುಕ್ತ-1 ಹುದ್ದೆಗೆ ನೇಮಕ ಪ್ರಕ್ರಿಯೆ ಆರಂಭಿಸಲು ನಿರ್ದೇಶಿಸುವಂತೆ ಕೋರಿರುವ ಅರ್ಜಿ ಕುರಿತು ಹೈಕೋರ್ಟ್ ಸೋಮವಾರ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.
ರಾಯಚೂರು ಕಲುಷಿತ ನೀರು ಕುಡಿದು ಸಾವು: ತನಿಖೆಗೆ ಆದೇಶಿಸಿದ ಲೋಕಾಯುಕ್ತ
ವಕೀಲ ಎಸ್. ಉಮಾಪತಿ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಅರಾಧೆ ಅವರ ನೇತೃತ್ವದ ವಿಭಾಗೀಯ ಪೀಠ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ (ಸೇವಾ ನಿಯಮಗಳು) ಇಲಾಖೆ ಹೆಚ್ಚುವರಿ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಿ ಆಕ್ಷೇಪಣೆ ಸಲ್ಲಿಸುವಂತೆ ನಿರ್ದೇಶಿಸಿ ವಿಚಾರಣೆ ಮುಂದೂಡಿತು.
ಕಸಾಪ ಆಜೀವ ಸದಸ್ಯತ್ವ ಪಡೆದ ಲೋಕಾಯುಕ್ತ ನ್ಯಾ. ಬಿ. ಎಸ್. ಪಾಟೀಲ್
ಅರ್ಜಿದಾರರು ವಾದ ಮಂಡಿಸಿ, ಲೋಕಾಯುಕ್ತರಾಗಿದ್ದ ನಿವೃತ್ತ ನ್ಯಾಯಮೂರ್ತಿ ಎಸ್. ವಿಶ್ವನಾಥ್ ಶೆಟ್ಟಿ ಅವರು 2022ರ ಜನವರಿ ಕೊನೆಯ ವಾರದಲ್ಲಿ ಸೇವೆಯಿಂದ ನಿವೃತ್ತಿ ಹೊಂದಿದ್ದರು. ಈ ಹುದ್ದೆಗೆ ಉಪ ಲೋಕಾಯುಕ-1 ಹುದ್ದೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಬಿ. ಎಸ್. ಪಾಟೀಲ್ ಅವರನ್ನು ನೇಮಕ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ 2022ರ ಜೂ.14ರಿಂದ ಉಪ ಲೋಕಾಯುಕ್ತ-1 ಹುದ್ದೆ ಖಾಲಿಯಿದೆ ಎಂದರು.
5 ತಿಂಗಳಿಂದ ಲೋಕಾಯುಕ್ತ ಹುದ್ದೆ ಖಾಲಿ: ಹೈಕೋರ್ಟ್ಗೆ ಸರ್ಕಾರ ಹೇಳಿದ್ದೇನು?
ಅದನ್ನು ಭರ್ತಿ ಮಾಡುವಂತೆ ಕೋರಿ 2022ರ ಜೂ.27ರಂದು ಅರ್ಜಿದಾರರು ಸಲ್ಲಿಸಿರುವ ಮನವಿ ಪತ್ರ ಪರಿಗಣಿಸಿ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅರ್ಜಿಯಲ್ಲಿ ಹೇಳಲಾಗಿದೆ. ಅಲ್ಲದೆ, ಸಾರ್ವಜನಿಕರು ತಮ್ಮ ಕುಂದುಕೊರತೆ ಕುರಿತು ಲೋಕಾಯುಕ್ತ ಸಂಸ್ಥೆಗೆ ದಾಖಲಿಸಿದ ಸಾಕಷ್ಟು ದೂರು ಹಾಗೂ ಮನವಿಗಳು ಹಲವು ವರ್ಷಗಳಿಂದ ಇತ್ಯರ್ಥವಾಗದೆ ಉಳಿದಿದೆ. ಜತೆಗೆ, ಅಸಂಖ್ಯ ಪ್ರಮಾಣದಲ್ಲಿ ಹೊಸ ದೂರುಗಳು ದಾಖಲಾಗುತ್ತಲೇ ಇವೆ. ಹೀಗಿದ್ದರೂ ಸರ್ಕಾರ ಈ ಖಾಲಿಯಿರುವ ಸಕಾಲಕ್ಕೆ ಉಪ ಲೋಕಾಯುಕ್ತರನ್ನು ನೇಮಕ ಮಾಡುತ್ತಿಲ್ಲ ಎಂದು ದೂರಲಾಗಿದೆ.
ಆ ಮೂಲಕ ಲೋಕಾಯುಕ್ತ ಸಂಸ್ಥೆಯ ಸಾಂವಿಧಾನಿಕ ಜವಾಬ್ದಾರಿಗಳ ನಿರ್ವಹಣೆಯನ್ನು ತಡೆಯುವ ಪ್ರಯತ್ನ ಮಾಡಲಾಗುತ್ತಿದೆ. ಆದ್ದರಿಂದ ಉಪ ಲೋಕಾಯುಕ್ತ-1ಹುದ್ದೆಯ ನೇಮಕ ಪ್ರಕ್ರಿಯೆಯನ್ನು ಆರಂಭಿಸಿ ತುರ್ತಾಗಿ ಅಂತಿಮಗೊಳಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.
ಉಪ ಲೋಕಾಯುಕ್ತ-2 ಹುದ್ದೆಗೆ ನಿವೃತ್ತ ನ್ಯಾಯಮೂರ್ತಿ ಕೆ. ಎನ್. ಫಣೀಂದ್ರ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಲಾಗಿದ್ದು, ಅವರು 2022 ಮಾ.29ರಂದು ಅಧಿಕಾರ ವಹಿಸಿಕೊಂಡು ಕಾರ್ಯ ನಿರ್ವಹಿಸುತ್ತಿದ್ದಾರೆ.
Recommended Video