Operation Hasta: ಬಿಜೆಪಿಯ ಈ 'ತ್ರಿಮೂರ್ತಿಗಳಿಗೆ' ಗಾಳ ಹಾಕಿದ ಸಿಎಂ, ಡಿಸಿಎಂ?
ಬೆಂಗಳೂರು, ಆಗಸ್ಟ್ 17: 2024 ಲೋಕಸಭಾ ಚುನಾವಣೆಗೆ ರಾಜ್ಯ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸುತ್ತಿದ್ದು, ಕನಿಷ್ಠ 20 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಟಾರ್ಗೆಟ್ ಹಾಕಿಕೊಂಡಿರುವ ರಾಜ್ಯ ಕಾಂಗ್ರೆಸ್ ಆಪರೇಷನ್ ಹಸ್ತಕ್ಕೆ ಮುಂದಾಗಿದ್ದು, ಬಿಜೆಪಿಗೆ ನಡುಕ ಶುರುವಾಗಿದೆ.
ಹೌದು, ಮೈತ್ರಿ ಸರ್ಕಾರದ ವೇಳೆ ಕಾಂಗ್ರೆಸ್ ಪಕ್ಷದಿಂದ ಬಿಜೆಪಿಗೆ ಸೇರ್ಪಡೆಯಾಗಿದ್ದ ನಾಯಕರನ್ನ ಮತ್ತೆ ಕಾಂಗ್ರೆಸ್ ಗೆ ಕರೆತರುವ ನಿಟ್ಟಿನಲ್ಲಿ ಕಾಂಗ್ರೆಸ್ ನಾಯಕರು ಮುಂದಾಗಿದ್ದು ಹಲವು ಬಿಜೆಪಿ ಶಾಸಕರಿಗೆ ಗಾಳ ಹಾಕಿದ್ದಾರೆ. 2023 ರ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನ ಗೆಲ್ಲುವ ಮೂಲಕ ಸರ್ಕಾರ ರಚಿಸಿರುವ ಕಾಂಗ್ರೆಸ್, ಇದೀಗ ಮುಂಬರುವ ಬಿಬಿಎಂಪಿ ಹಾಗೂ ಲೋಕಸಭಾ ಚುನಾವಣೆಯಲ್ಲೂ ಗೆಲುವಿನ ಓಟ ಮುಂದುವರಿಸಲು ಸಾಧ್ಯವಿರುವ ಎಲ್ಲ ಪ್ರಯತ್ನವನ್ನೂ ಆರಂಭಿಸಿದೆ.

ಹೀಗಾಗಿ ಮುಂದಿನ ಸಾಲು ಸಾಲು ಚುನಾವಣೆಗಳ ಕುರಿತು ಲೆಕ್ಕಾಚಾರವನ್ನ ಹಾಕಿಕೊಂಡಿರುವ ಕಾಂಗ್ರೆಸ್, ಬಿಜೆಪಿಯ ಮೂವರು ನಾಯಕರನ್ನ ಸೆಳೆಯುವ ಪ್ರಯತ್ನವನ್ನ ನಡೆಸಿದೆ ಎನ್ನಲಾಗಿದೆ. 20 ಕ್ಕೂ ಹೆಚ್ಚು ಸ್ಥಾನಗಳನ್ನ ಗೆಲ್ಲುವ ಕುರಿತು ಕಾಂಗ್ರೆಸ್ ನಾಯಕರು ಹೈಕಮಾಂಡ್ ನಾಯಕರಿಗೆ ಭರವಸೆಯನ್ನ ನೀಡಿದ್ದು,ಹೈಕಮಾಂಡ್ ವಿಶ್ವಾಸ ಉಳಿಸಿಕೊಳ್ಳುವ ಪ್ರಯತ್ನಕ್ಕೆ ಪೂರಕವಾಗಿ ಹಲವು ತಂತ್ರಗಾರಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಖುದ್ದಾಗಿ ಅಖಾಡಕ್ಕಿಳಿದಿದ್ದಾರೆ.
ರಾಜ್ಯದ ಚುಕ್ಕಾಣಿ ಹಿಡಿದ ಬಳಿಕ ಲೋಕಸಭೆ ಹಾಗೂ ಬಿಬಿಎಂಪಿ ಚುನಾವಣೆಯ ಮೇಲೆ ಕಣ್ಣೀಟ್ಟಿರುವ ಕಾಂಗ್ರೆಸ್ ನಾಯಕರು, ಈ ಹಿಂದೆ ಕಾಂಗ್ರೆಸ್ ತೊರೆದಿದ್ದ ಯಶವಂತಪುರ ಕ್ಷೇತ್ರದ ಎಸ್.ಟಿ.ಸೋಮಶೇಖರ್, ಯಲ್ಲಾಪುರದ ಶಿವರಾಂ ಹೆಬ್ಬಾರ್ ಹಾಗೂ ಜೆಡಿಎಸ್ ತೊರೆದಿದ್ದ ಮಹಾಲಕ್ಷ್ಮಿ ಲೇಔಟ್ನ ಕೆ.ಗೋಪಾಲಯ್ಯ ಅವರನ್ನು ಪಕ್ಷಕ್ಕೆ ಕರೆತರುವ ಪ್ರಯತ್ನ ನಡೆಸಿದ್ದಾರೆ ಎನ್ನಲಾಗಿದೆ.

ಪಕ್ಷಕ್ಕಿಂತ ವೈಯಕ್ತಿಕ ವರ್ಚಸ್ಸಿನ ಜತೆಗೆ ಕ್ಷೇತ್ರದಲ್ಲಿ ತಮ್ಮದೇ ಮತ ಬ್ಯಾಂಕ್ ಸೃಷ್ಟಿಸಿಕೊಂಡಿರುವವರು ಹಾಗೂ ಯಾವುದೇ ಪಕ್ಷದಿಂದ ಸ್ಪರ್ಧಿಸಿದರೂ ಗೆಲ್ಲುವ ಸಾಮರ್ಥ್ಯವುಳ್ಳವರನ್ನೇ ಗುರಿಯಾಗಿಸಿಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಸೆಳೆಯುವ ಕಸರತ್ತಿಗೆ ಮುಂದಾಗಿದ್ದಾರೆ.
ಇನ್ನೂ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲೂ ಸಹ ವಿ.ಸೋಮಣ್ಣ ಕಾಂಗ್ರೆಸ್ಗೆ ಹೋಗುತ್ತಾರೆ ಎನ್ನುವ ಸುದ್ದಿ ಜೋರಾಗಿ ಹರಿದಾಡಿತ್ತು. ನಂತರ ಎರಡು ಕ್ಷೇತ್ರದಲ್ಲಿ ಸ್ಪರ್ಧೆ ನಡೆಸಿದ್ದ ಸೋಮಣ್ಣ ಸೋಲು ಅನುಭವಿಸಿದ್ದು, ಈಗಾಗಲೇ ಬಿಜೆಪಿಯಲ್ಲಿ ವಿ.ಸೋಮಣ್ಣ ರಾಜ್ಯಾಧ್ಯಕ್ಷ ಮತ್ತು ಲೋಕಸಭೆ ಟಿಕೆಟ್ಗೆ ಬೇಡಿಕೆ ಇಟ್ಟಿದ್ದಾರೆ. ಒಂದು ವೇಳೆ ಆ ಸ್ಥಾನ ಮಾನ ನೀಡದೇ ಹೋದ್ರೆ ಅದನ್ನೇ ಕಾರಣವಾಗಿ ಮುಂದಿಟ್ಟು, ಬಿಜೆಪಿ ಬಿಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಇನ್ನೂ ಕಾಂಗ್ರೆಸ್ ಗೆ ವಿ ಸೋಮಣ್ಣ ಬಂದ್ರೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ನೆರವು ಆಗುತ್ತೆ ಎನ್ನುವುದು ಕಾಂಗ್ರೆಸ್ ನಾಯಕರ ಲೆಕ್ಕಾಚಾರವಾಗಿದೆ.
ಎಸ್ ಟಿ ಸೋಮಶೇಖರ್, ಕೆ ಗೋಪಾಲಯ್ಯ ಹಾಗೂ ಶಿವರಾಮ್ ಹೆಬ್ಬಾರ್ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ನೇರವಾಗಿ ಭೇಟಿಯಾಗಿದ್ದರು. ಅಲ್ಲದೇ ಖಾಸಗಿ ಹೋಟೆಲ್ ನಲ್ಲಿ ಡಿ ಕೆ ಶಿವಕುಮಾರ್ ಜೊತೆಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಇನ್ನು ಅನ್ಯ ಪಕ್ಷಗಳಿಂದ ಪಕ್ಷಕ್ಕೆ ಕರೆತರುವ ಕುರಿತು ಹೈಕಮಾಂಡ್ ನಾಯಕರು ಸಹ ಈಗಾಗಲೇ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನಲಾಗಿದೆ.












Click it and Unblock the Notifications