ಮತ್ತೆ ಆಪರೇಷನ್ ಕಮಲ; ಇಬ್ಬರು ಜೆಡಿಎಸ್ ಶಾಸಕರು ಬಿಜೆಪಿಗೆ?
ಬೆಂಗಳೂರು, ಡಿಸೆಂಬರ್ 17 : ಕರ್ನಾಟಕದಲ್ಲಿ ಆಪರೇಷನ್ ಕಮಲ ನಿಂತಿಲ್ಲವೇ? ಎಂಬ ಅನುಮಾನ ಹುಟ್ಟಿಕೊಂಡಿದೆ. ಇಬ್ಬರು ಜೆಡಿಎಸ್ ಶಾಸಕರು ಬಿಜೆಪಿ ಸೇರಲು ಮುಂದಾಗಿದ್ದಾರೆ ಎಂಬ ಸುದ್ದಿ ಮಂಗಳವಾರ ರಾಜ್ಯ ರಾಜಕೀಯದಲ್ಲಿ ಹಬ್ಬಿದೆ.
ರಾಜಕೀಯ ಭವಿಷ್ಯದ ದೃಷ್ಟಿಯಿಂದ ಮಂಡ್ಯ ಜಿಲ್ಲೆಯ ಇಬ್ಬರು ಜೆಡಿಎಸ್ ಶಾಸಕರು ಬಿಜೆಪಿಯತ್ತ ಮುಖಮಾಡಿದ್ದಾರೆ. ಈಗಾಗಲೇ ಕೆ. ಆರ್. ಪೇಟೆ ಉಪ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಜೆಡಿಎಸ್ ಭದ್ರಕೋಟೆಯಲ್ಲಿ ಬಿಜೆಪಿ ಖಾತೆ ತೆರೆದಿದೆ.
ಮಂಡ್ಯ ರಾಜಕೀಯಕ್ಕೆ ಹೊಸ ಜೋಡೆತ್ತುಗಳ ಆಗಮನ!
15 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಂದ ಫಲಿತಾಂಶ ನೋಡಿಕೊಂಡು ಇಬ್ಬರು ಶಾಸಕರು ಬಿಜೆಪಿ ಸೇರಲು ಮುಂದಾಗಿದ್ದಾರೆ. ಬಿಜೆಪಿ ನಾಯಕರು ಇಬ್ಬರೂ ಶಾಸಕರಿಗೆ ಆಹ್ವಾನ ನೀಡಿದ್ದಾರೆಯೇ? ಎಂಬುದು ಇನ್ನೂ ಬಹಿರಂಗವಾಗಿಲ್ಲ.
ಕೆಆರ್ ಪೇಟೆ: ಜೆಡಿಎಸ್ ಭದ್ರಕೋಟೆಯಲ್ಲಿ ಬಿಜೆಪಿ ಪತಾಕೆ!
ಇಬ್ಬರೂ ಶಾಸಕರು 2018ರ ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ಬಿಟ್ಟು ಜೆಡಿಎಸ್ ಸೇರಿದ್ದರು. ಚುನಾವಣೆಯಲ್ಲಿ ಕಣಕ್ಕಿಳಿದು ಗೆಲುವು ಸಾಧಿಸಿದ್ದರು. ಜೆಡಿಎಸ್ ವರಿಷ್ಠರ ನಡೆ, ರಾಜಕೀಯ ಭವಿಷ್ಯದ ಕಾರಣದಿಂದಾಗಿ ಬಿಜೆಪಿ ಸೇರಲು ಮುಂದಾಗಿದ್ದಾರೆ.
ಇನ್ನೂ ನಿಂತಿಲ್ಲ ಆಪರೇಷನ್ ಕಮಲ; ಈ ಸಾರಿ ಯಾರಿಗೆ ಗಾಳ?
ಇಬ್ಬರು ಶಾಸಕರು ಯಾರು?
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಕ್ಷೇತ್ರದ ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ ಮತ್ತು ನಾಗಮಂಗಲ ಕ್ಷೇತ್ರದ ಶಾಸಕ ಸುರೇಶ್ ಗೌಡ ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ. ಮಂಗಳವಾರ ರಾಜ್ಯ ರಾಜಕೀಯದಲ್ಲಿ ಈ ಸುದ್ದಿ ಬಿಸಿ-ಬಿಸಿ ಚರ್ಚೆಗೆ ಕಾರಣವಾಗಿದೆ.
ಬಿಜೆಪಿಗೆ ಭದ್ರನೆಲೆ ಇಲ್ಲ
ಬಿಜೆಪಿಗೆ ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಭದ್ರವಾದ ನೆಲೆ ಇಲ್ಲ. ಕೆ. ಆರ್. ಪೇಟೆ ಉಪ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಪಕ್ಷ ಮಂಡ್ಯದಲ್ಲಿ ಖಾತೆ ತೆರೆದಿದೆ. ಮಂಡ್ಯದಲ್ಲಿ ಪಕ್ಷ ಸಂಘಟನೆ ಬಲಿಷ್ಠಗೊಳಿಸಲು ಜೆಡಿಎಸ್ ಶಾಸಕರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಒಪ್ಪಿಗೆ ಸಿಕ್ಕಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಉಪ ಚುನಾವಣೆ ಫಲಿತಾಂಶ
ಇತ್ತೀಚೆಗೆ ನಡೆದ ಕೆ. ಆರ್. ಪೇಟೆ ಕ್ಷೇತ್ರದ ಉಪ ಚುನಾವಣೆಯಲ್ಲಿ ನಾರಾಯಣ ಗೌಡ ಬಿಜೆಪಿಯಿಂದ ಕಣಕ್ಕಿಳಿದು ಗೆಲುವು ಸಾಧಿಸಿದ್ದಾರೆ. ಈ ಫಲಿತಾಂಶ ನೋಡಿದ ಬಳಿಕ ಇಬ್ಬರು ಶಾಸಕರು ರಾಜಕೀಯ ಭವಿಷ್ಯದ ದೃಷ್ಟಿಯಿಂದ ಬಿಜೆಪಿಯತ್ತ ಹೊರಟಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.
ರವೀಂದ್ರ ಶ್ರೀಕಂಠಯ್ಯ ಸ್ಪಷ್ಟನೆ
ಬಿಜೆಪಿ ಸೇರುವ ಸುದ್ದಿಗಳ ಬಗ್ಗೆ ಶ್ರೀರಂಗಪಟ್ಟಣ ಶಾಸಕ ರವೀಂದ್ರ ಶ್ರೀಕಂಠಯ್ಯ ಸ್ಪಷ್ಟನೆ ನೀಡಿದ್ದಾರೆ. "ನಾನು ಮತ್ತು ಸುರೇಶ್ ಗೌಡ ಜೆಡಿಎಸ್ ತೊರೆದು ಬಿಜೆಪಿ ಸೇರಲಿದ್ದೇವೆ ಎಂಬ ಸುದ್ದಿ ಸತ್ಯಕ್ಕೆ ದೂರವಾದದ್ದು. ನಾವು ಯಾವುದೇ ಕಾರಣಕ್ಕೂ ಪಕ್ಷ ತೊರೆಯುವುದಿಲ್ಲ" ಎಂದು ಹೇಳಿದ್ದಾರೆ.