ಹೃದಯಾಘಾತದಿಂದ ಖ್ಯಾತ ನೇತ್ರತಜ್ಞ ಡಾ. ಭುಜಂಗಶೆಟ್ಟಿ ನಿಧನ
ಬೆಂಗಳೂರು, ಮೇ 19: ದೇಶದ ಖ್ಯಾತ ನೇತ್ರ ತಜ್ಞರಾಗಿದ್ದ ಭುಜಂಗ ಶೆಟ್ಟಿ ಅವರು ಯಶವಂತಪುರ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಶುಕ್ರವಾರ ಸಂಜೆ ಹೃದಯಾಘಾತ ಸಂಭವಿಸಿದ್ದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಗೆ ತೆರಳಿ ಚಿಕಿತ್ಸೆ ನೀಡಿ ಮನೆಗೆ ವಾಪಸ್ಸಾಗಿದ್ದ ಭುಜಂಗ ಶೆಟ್ಟಿ ಅವರಿಗೆ ತೀವ್ರ ಹೃದಯಾಘಾತ ಉಂಟಾಗಿದ್ದು ನಿಧನರಾಗಿದ್ದಾರೆ.
80ರ ದಶಕದಲ್ಲಿ ಸಣ್ಣ ಕ್ಲಿನಿಕ್ನಲ್ಲಿ ನೇತ್ರ ಚಿಕಿಯ್ಸಾಲಯವನ್ನು ಪ್ರಾರಂಭಿಸಿದ ಡಾ. ಭುಜಂಗ ಶೆಟ್ಟಿ ನಾರಾಯಣ ನೇತ್ರಾಯಲದ ಅಧ್ಯಕ್ಷರಾಗಿದ್ದರು. 1978 ರಲ್ಲಿ ಬೆಂಗಳೂರು ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಮಾಡಿದ್ದರು. 1982 ರಲ್ಲಿ ಬೆಂಗಳೂರು ವೈದ್ಯಕೀಯ ಕಾಲೇಜಿನ ಮಿಂಟೋ ಆಪ್ತಾಲ್ಮಿಕ್ ಆಸ್ಪತ್ರೆಯಲ್ಲಿ ನೇತ್ರಶಾಸ್ತ್ರದಲ್ಲಿ ರೆಸಿಡೆನ್ಸಿ ತರಬೇತಿ ಪಡೆದಿದ್ದರು.

ನಾರಾಯಣ ನೇತ್ರಾಲಯವನ್ನು ಕರ್ನಾಟಕದ ಅತಿದೊಡ್ಡ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯಾಗಿ ಪರಿವರ್ತಿಸಲು ಕಾರಣರಾಗಿದ್ದರು. ಅವರು ಕಣ್ಣಿನ ಪೊರೆ ಮತ್ತು ಫಾಕೋಎಮಲ್ಸಿಫಿಕೇಶನ್ ಶಸ್ತ್ರಚಿಕಿತ್ಸಕರಾಗಿದ್ದರು. ಅವರು ನಾರಾಯಣ ನೇತ್ರಾಲಯದ ಅಧ್ಯಕ್ಷರೂ ಆಗಿದ್ದರು.
ಡಾ. ಭುಜಂಗಶೆಟ್ಟಿ ನಿಧನಕ್ಕೆ ಗಣ್ಯರಿಂದ ಸಂತಾಪ
ಖ್ಯಾತ ನೇತ್ರ ತಜ್ಞರಾದ ಡಾ. ಭುಜಂಗ ಶೆಟ್ಟಿ ಅವರು ಹೃದಯಾಘಾತದಿಂದ ನಿಧನರಾದ ವಿಷಯ ತಿಳಿದು ಅತ್ಯಂತ ದುಃಖವಾಗಿದೆ. ಕಣ್ಣಿನ ಶಸ್ತ್ರಚಿಕಿತ್ಸೆ ಮೂಲಕ ಸಾವಿರಾರು ಅಂಧರ ಬಾಳಿಗೆ ಬೆಳಕಾಗಿದ್ದ ಭುಜಂಗ ಶೆಟ್ಟಿ ಅವರ ನಿಧನದಿಂದ ರಾಜ್ಯ ಒಬ್ಬ ನೇತ್ರ ತಜ್ಞನನ್ನು ಕಳೆದುಕೊಂಡಂತಾಗಿದೆ ಎಂದು ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಂತಾಪ
ಖ್ಯಾತ ನೇತ್ರತಜ್ಞ ಡಾ. ಕೆ. ಭುಜಂಗ ಶೆಟ್ಟಿ ಅವರ ನಿಧನಕ್ಕೆ ನಿಯೋಜಿತ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ. "ಭುಜಂಗ ಶೆಟ್ಟಿ ಅವರು ಆರೋಗ್ಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ ಅಪಾರ. ರಾಜ್ಯ ಕಂಡ ಶ್ರೇಷ್ಠ ವೈದ್ಯರಲ್ಲಿ ಒಬ್ಬರು. ಜನರಲ್ಲಿ ಆರೋಗ್ಯ ಕುರಿತು ಜಾಗೃತಿ ಮೂಡಿಸುತ್ತಾ ಬಹಳ ದೂರದೃಷ್ಟಿ ಹೊಂದಿದ್ದ ವೈದ್ಯರಾಗಿದ್ದರು.
ನಾರಾಯಣ ನೇತ್ರಾಲಯದ ಮುಖ್ಯಸ್ಥರಾಗಿ ಭುಜಂಗ ಶೆಟ್ಟಿ ಅವರು ಈ ಸಂಸ್ಥೆಯನ್ನು ಅತ್ಯುನ್ನತ ಮಟ್ಟಕ್ಕೆ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅತ್ಯಾಧುನಿಕ ತಂತ್ರಜ್ಞಾನ ಮೂಲಕ ಸಾರ್ವಜನಿಕರಿಗೆ ಸೇವೆ ಒದಗಿಸಿಕೊಂಡು ಬಂದಿದ್ದವರು.
ಆರೋಗ್ಯ ಕ್ಷೇತ್ರದಲ್ಲಿ ಅಪಾರ ಸೇವೆಗೆ 2010 ರಲ್ಲಿ ರಾಜ್ಯೋತ್ಸವ ಪುರಸ್ಕಾರ ಸೇರಿದಂತೆ ಅನೇಕ ಪ್ರಶಸ್ತಿಗಳಿಗೆ ಇವರು ಭಾಜನರಾಗಿದ್ದಾರೆ.ಭುಜಂಗ ಶೆಟ್ಟಿ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ಬಹಳ ಬೇಸರವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ಅವರ ಕುಟುಂಬ ಸದಸ್ಯರು ಹಾಗೂ ಆತ್ಮೀಯರಿಗೆ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ" ಎಂದು ಶಿವಕುಮಾರ್ ಅವರು ತಮ್ಮ ಸಂತಾಪ ನುಡಿಯಲ್ಲಿ ತಿಳಿಸಿದ್ದಾರೆ.
ಸಿದ್ದರಾಮಯ್ಯ ಸಂತಾಪ
ನಾರಾಯಣ ನೇತ್ರಾಲಯದ ಖ್ಯಾತ ನೇತ್ರತಜ್ಞರಾದ ಡಾ. ಭುಜಂಗ ಶೆಟ್ಟಿ ಅವರ ನಿಧನದ ಸುದ್ದಿ ಆಘಾತವುಂಟುಮಾಡಿದೆ.ಭುಜಂಗ ಶೆಟ್ಟಿಯವರು ಲಕ್ಷಾಂತರ ಜನರಿಗೆ ದೃಷ್ಟಿ ಸಾಮರ್ಥ್ಯ ನೀಡುವ ಮೂಲಕ ಅವರ ಕುಟುಂಬಗಳಿಗೆ ಬೆಳಕಾದವರು. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬ ಸದಸ್ಯರಿಗೆ ನೋವು ಭರಿಸುವ ಶಕ್ತಿ ದೊರಕಲಿ ಎಂದು ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಹೆಚ್.ಡಿ.ಕುಮಾರಸ್ವಾಮಿ ಸಂತಾಪ
ಖ್ಯಾತ ನೇತ್ರತಜ್ಞ, ನಾರಾಯಣ ನೇತ್ರಾಲಯದ ಮುಖ್ಯಸ್ಥರಾಗಿದ್ದ ಡಾ.ಭುಜಂಗ ಶೆಟ್ಟಿ ಅವರ ನಿಧನದ ಸುದ್ದಿ ಕೇಳಿ ಬಹಳ ದುಃಖವಾಯಿತು. ನೇತ್ರದಾನದ ಬಗ್ಗೆ ಜನರಲ್ಲಿ ಅಪಾರ ಅರಿವು ಮೂಡಿಸಿದ್ದ ಅವರು, ಅನೇಕರ ಬಾಳಿಗೆ ಬೆಳಕಾಗಿದ್ದರು. ಶ್ರೀಯುತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಈ ದುಃಖ ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ಕರುಣಿಸಲಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.












Click it and Unblock the Notifications