Breaking; ಹಾಲಿ ಶಾಸಕನಿಗೆ ಟಿಕೆಟ್ ನೀಡದಂತೆ ಎಚ್ಡಿಕೆಗೆ ಮನವಿ!
ದೇವನಹಳ್ಳಿ (ಎಸ್ಸಿ) ಕ್ಷೇತ್ರದಲ್ಲಿ ಹಾಲಿ ಶಾಸಕ ನಿಸರ್ಗ ನಾರಾಯಣ ಸ್ವಾಮಿಗೆ ಟಿಕೆಟ್ ನೀಡಬಾರದು ಎಂದು ಎಚ್. ಡಿ. ಕುಮಾರಸ್ವಾಮಿಗೆ ಮನವಿ ಮಾಡಲಾಗಿದೆ.
ಬೆಂಗಳೂರು, ಫೆಬ್ರವರಿ 05; ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ಕೆಲವೇ ದಿನ ಬಾಕಿ ಇದೆ. ಜೆಡಿಎಸ್ ಪಕ್ಷ 93 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಈಗಾಗಲೇ ಬಿಡುಗಡೆ ಮಾಡಿದೆ.
ಈ ಪಟ್ಟಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ (ಎಸ್ಸಿ) ಕ್ಷೇತ್ರಕ್ಕೂ ಅಭ್ಯರ್ಥಿ ಘೋಷಣೆ ಮಾಡಲಾಗಿದೆ. ಕ್ಷೇತ್ರದ ಹಾಲಿ ಶಾಸಕ ನಿಸರ್ಗ ನಾರಾಯಣ ಸ್ವಾಮಿಗೆ ಮುಂದಿನ ಚುನಾವಣೆಗೆ ಅಭ್ಯರ್ಥಿ ಎಂದು ಘೋಷಣೆ ಮಾಡಿದೆ.
ಆದರೆ ಕ್ಷೇತ್ರದ ಜೆಡಿಎಸ್ನಲ್ಲಿ ಭಿನ್ನಮತ ಕಾಣಿಸಿಕೊಂಡಿದೆ. ಹಾಲಿ ಶಾಸಕ ನಿಸರ್ಗ ನಾರಾಯಣಸ್ವಾಮಿಗೆ ಟಿಕೆಟ್ ಘೋಷಣೆ ಮಾಡಿರುವುದಕ್ಕೆ ಪಕ್ಷದ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದಾರೆ.

ಭಾನುವಾರ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಮನೆ ಮುಂದೆ ಜೆಡಿಎಸ್ ಕಾರ್ಯಕರ್ತರು ಧರಣಿ ನಡೆಸಿ, ಟಿಕೆಟ್ ನೀಡುವುದಕ್ಕೆ ವಿರೋಧ ವ್ಯಕ್ತಪಡಿಸಿದರು.
ಶಾಸಕ ನಿಸರ್ಗ ನಾರಾಯಣಸ್ವಾಮಿಗೆ ಟಿಕೆಟ್ ನೀಡಬಾರದು ಎಂದು ಎಚ್. ಡಿ. ಕುಮಾರಸ್ವಾಮಿಗೆ ಮನವಿ ಮಾಡಿದರು. ಟಿಕೆಟ್ ನೀಡಿರೇ ಕ್ಷೇತ್ರದಲ್ಲಿ ಈ ಭಾರೀ ಜೆಡಿಎಸ್ ಪಕ್ಷ ಗೆಲ್ಲೋದಿಲ್ಲ ಎಂದು ಹೇಳಿದ್ದಾರೆ.
ಈ ಬಾರಿಯ ಚುನಾವಣೆಯಲ್ಲಿ ಜೆಡಿಎಸ್ ಹಾಲಿ ಶಾಸಕನಿಗಿಂತ ಹೊಸ ಅಭ್ಯರ್ಥಿಗೆ ಟಿಕೆಟ್ ನೀಡಬೇಕು ಎಂದು ಶಾಸಕ ನಿಸರ್ಗ ನಾರಾಯಣಸ್ವಾಮಿ ವಿರೋಧಿ ಬಣ ಆಗ್ರಹಿಸಿದೆ. ಆದರೆ ಎಚ್. ಡಿ. ಕುಮಾರಸ್ವಾಮಿ ವಿಚಾರವಾಗಿ ಇದುವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
2018ರ ವಿಧಾನಸಭೆ ಚುನಾವಣೆಯಲ್ಲಿ ದೇವನಹಳ್ಳಿ ಕ್ಷೇತ್ರದಲ್ಲಿ 86,966 ಮತಗಳನ್ನು ಪಡೆದು ಜಯಗಳಿಸಿದ್ದರು. ಕಾಂಗ್ರೆಸ್ನ ವೆಂಕಟಸ್ವಾಮಿ 69956 ಮತಗಳನ್ನು ಪಡೆದಿದ್ದರು. ಬಿಜೆಪಿಯ ಎ. ಕೆ. ಪಿ. ನಾಗೇಶ್ 9820 ಮತಗಳನ್ನು ಪಡೆದು ಸೋಲು ಕಂಡಿದ್ದರು.
ಕುಮಾರಸ್ವಾಮಿ ಸಭೆ; ಈಗಾಗಲೇ ಘೋಷಣೆ ಮಾಡಿರುವ 93 ಅಭ್ಯರ್ಥಿಗಳ ಜೊತೆ ಎಚ್. ಡಿ. ಕುಮಾರಸ್ವಾಮಿ ಶನಿವಾರ ಬೆಂಗಳೂರಿನಲ್ಲಿ ಸಭೆ ನಡೆಸಿದರು. ಇನ್ನಷ್ಟು ಶ್ರಮ ಹಾಕಿ ಎಲ್ಲರು ಕೆಲಸ ಮಾಡಬೇಕು ಎಂದು ಸೂಚನೆ ನೀಡಿದ್ದಾರೆ.
61 ಕ್ಷೇತ್ರಗಳಲ್ಲಿ ಪಂಚರತ್ನ ಯಾತ್ರೆ ಪೂರ್ಣಗೊಂಡಿದೆ. ಮನೆ-ಮನೆಗೂ ಪಂಚರತ್ನ ಕಾರ್ಯಕ್ರಮದ ಮಾಹಿತಿ ತಲುಪಿಸಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜನರ ಬಳಿ ತಲುಪಲು ಅಭ್ಯರ್ಥಿಗಳಿಗೆ ಗುರಿ ನೀಡಲಾಗಿದೆ. ಪಕ್ಷದ ನಿರೀಕ್ಷೆಗೆ ತಕ್ಕಂತೆ ಗುರಿ ತಲುಪದ ಅಭ್ಯರ್ಥಿಗಳ ಬದಲಾವಣೆ ಮಾಡುತ್ತೇವೆ ಎಂದು ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದರು.












Click it and Unblock the Notifications