ಡಿ.ಕೆ.ಶಿವಕುಮಾರ್ಗೆ ನಾಲ್ಕು ಸವಾಲ್ ಹಾಕಿದ ಆರ್.ಅಶೋಕ್
ಉತ್ತರ ಪ್ರದೇಶದಲ್ಲಿ ಬಹಳ ಪ್ರಸಿದ್ಧಿ ಪಡೆದಿರುವ ಗಂಗಾರತಿ ಮಾದರಿಯಲ್ಲಿ ಕರ್ನಾಟಕದ ಜೀವನದಿ ಕಾವೇರಿಗೆ ಆರತಿ ನಡೆಸಲು ಕರ್ನಾಟಕ ಸರ್ಕಾರ ಮುಂದಾಗಿದೆ. ಇದಕ್ಕಾಗಿ ಕಾಂಗ್ರೆಸ್ ನಾಯಕರ ನಿಯೋಗ ಈಗಾಗಲೇ ಹರಿದ್ವಾರ, ಕಾಶಿಗೆ ತೆರಳಿ ಅಲ್ಲಿನ ಗಂಗಾರತಿ ಪ್ರಕ್ರಿಯೆ ನೋಡಿ ಬಂದಿದೆ. ಈ ವಿಚಾರವಾಗಿ ವಿಪಕ್ಷ ನಾಯಕ ಆರ್.ಅಶೋಕ್ ಅವರು ಸರ್ಕಾರಕ್ಕೆ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ.
ಒಂದು ಬಾರಿ ಸರ್ಕಾರದ ನಿಯೋಗ ಹೋಗಿ ಬಂದಿದ್ದು, ಮತ್ತೊಮ್ಮೆ ಪರಿಶೀಲನೆಗೆ ತೆರಳಲಿದ್ದು ಇದಕ್ಕೆ ಅಶೋಕ್ ಕೆಂಡಕಾರಿದ್ದಾರೆ. ಗಂಗಾ ಆರತಿ ಮಾದರಿಯಲ್ಲಿ ಕಾವೇರಿ ಆರತಿ ನಡೆಸುವ ಸಲುವಾಗಿ ಮಂಡ್ಯ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಂಡ್ಯ, ಮೈಸೂರು ಭಾಗದ ಶಾಸಕರು, ವಿಧಾನಪರಿಷತ್ ಸದಸ್ಯರು, ಕಾವೇರಿ ಅಭಿವೃದ್ಧಿ ನಿಗಮದ ಹಿರಿಯ ಅಧಿಕಾರಿಗಳು ಈಗಾಗಲೇ ಮೂರು ದಿನಗಳ ಕಾಲ ಹರಿದ್ವಾರ ಹಾಗೂ ಕಾಶಿಗೆ ಭೇಟಿ ನೀಡಿ ಅಧ್ಯಯನ ನಡೆಸಿ ಬಂದಿರುವಾಗ ಈಗ ಮತ್ತೊಮ್ಮೆ ಅಧಿಕಾರಿಗಳ ನಿಯೋಗ ಕಳುಹಿಸುತ್ತಿರುವುದು ಯಾತಕ್ಕೆ? ಎಂದು ಪ್ರಶ್ನೆ ಮಾಡಿದ್ದಾರೆ.

ಈಗ ಮತ್ತೊಮ್ಮೆ ಅಧಿಕಾರಿಗಳ ನಿಯೋಗ ಹೋಗಬೇಕು ಎನ್ನುವುದಾದರೆ ಸಚಿವರು ತಮ್ಮ ತಂಡದೊಂದಿಗೆ ಅಲ್ಲಿ ಹೋಗಿ ಮಾಡಿದ್ದಾದರೂ ಏನು? ಸರ್ಕಾರಿ ಹಣದಲ್ಲಿ ಮೋಜು-ಮಸ್ತಿ ಮಾಡಲು ಹೋಗಿದ್ದಾ? ಎಂದು ವಾಗ್ದಾಳಿ ನಡೆಸಿದ್ದಾರೆ.
ಅಯೋಧ್ಯೆ ರಾಮಮಂದಿರದ ಉದ್ಘಾಟನೆ ವೇಳೆ 30 ವರ್ಷದ ಹಳೆಯ ಪ್ರಕರಣಗಳನ್ನು ರೀ ಓಪನ್ ಮಾಡಿ, ಕರಸೇವಕರನ್ನ ಜೈಲಿಗೆ ಹಾಕಿದ್ದ ಈ ಕಾಂಗ್ರೆಸ್ ಸರ್ಕಾರ, ಗಣೇಶನ ಮೂರ್ತಿಯನ್ನು ಪೊಲೀಸ್ ವ್ಯಾನ್ ಹತ್ತಿಸಿದ ಈ ಕಾಂಗ್ರೆಸ್ ಸರ್ಕಾರ, ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುದಳ್ಳುರಿಯನ್ನ ಸಣ್ಣ ಘಟನೆ, ಆಕಸ್ಮಿಕ ಘಟನೆ ಎಂದು ತಿಪ್ಪೆ ಸಾರಿಸಿದ ಕಾಂಗ್ರೆಸ್ ಸರ್ಕಾರ ಈಗ ದಿಢೀರನೆ ಹಿಂದೂ ಧರ್ಮದ ಬಗ್ಗೆ, ಹಿಂದೂಗಳ ಆಚಾರ-ವಿಚಾರದ ಬಗ್ಗೆ, ಸಂಪ್ರದಾಯ-ಪರಂಪರೆ ಬಗ್ಗೆ ಎಲ್ಲಿಲ್ಲದ ಆಸಕ್ತಿ ತೋರುವ ನಾಟಕ ಮಾಡುತ್ತಿದೆ ಎಂದು ಲೇವಡಿ ಮಾಡಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ, ನಿಮಗೆ ನಿಜವಾಗಿಯೂ ದೇಶ-ಧರ್ಮದ ಬಗ್ಗೆ ಕಿಂಚಿತ್ತಾದರೂ ಕಾಳಜಿ ಇದ್ದರೆ, ಮೊದಲು ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಬ್ರದರ್ಸ್ಗಳನ್ನ ಒದ್ದು ಒಳಗೆ ಹಾಕಿ ಎಂದು ಆರ್.ಅಶೋಕ್ ಸವಾಲು ಹಾಕಿದ್ದಾರೆ.
ನಾಗಮಂಗಲದಲ್ಲಿ, ದಾವಣಗೆರೆಯಲ್ಲಿ ಗಣೇಶ ವಿಸರ್ಜನೆ ವೇಳೆ ಗಲಭೆ ಎಬ್ಬಿಸಿದ ಬ್ರದರ್ಸ್ಗಳನ್ನ ಒದ್ದು ಒಳಗೆ ಹಾಕಿ, ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ಟೈನ್ ಧ್ವಜ ಹಿಡಿದು ಪುಂಡಾಟಿಕೆ ಮಾಡಿದ ಬ್ರದರ್ಸ್ಗಳನ್ನ ಒದ್ದು ಒಳಗೆ ಹಾಕಿ. ಅದು ಬಿಟ್ಟು ಬರೀ ತೋರಿಕೆಗೆ ಕಾವೇರಿ ಆರತಿ ಮಾಡುವ ನಾಟಕ ಮಾಡಿದರೆ ಆ ತಾಯಿ ಕಾವೇರಿ ಮೆಚ್ಚುತ್ತಾಳಾ? ಎಂದು ಕುಟುಕಿದ್ದಾರೆ.

ಗಂಗಾರತಿ ಬಗ್ಗೆ ಮಾಹಿತಿ ನೀಡಿದ್ದ ಸಚಿವ ಚಲುವರಾಯಸ್ವಾಮಿ, ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ ನಡೆಸಲು ಹರಿದ್ವಾರ ಮತ್ತು ವಾರಣಾಸಿಯಲ್ಲಿ ಅಧ್ಯಯನ ನಡೆಸಲಾಗಿದೆ. ವರದಿ ಸಿದ್ದಪಡಿಸಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ಗೆ ನೀಡಲಾಗುತ್ತದೆ. ಬಳಿಕ ಸಭೆ ನಡೆಸಿ, ಕಾವೇರಿ ಆರತಿಯ ದಿನಾಂಕ ಹಾಗೂ ಸ್ಥಳ ನಿಗದಿಪಡಿಸಲಾಗುವುದು ಎಂದು ಹೇಳಿದ್ದರು.












Click it and Unblock the Notifications