ಯಡಿಯೂರಪ್ಪ ದೆಹಲಿಗೆ, ವಿಪಕ್ಷ ನಾಯಕನ ಘೋಷಣೆ ವಿಳಂಬ!
ಬೆಂಗಳೂರು, ಜುಲೈ 02: ಕರ್ನಾಟಕದ ವಿರೋಧ ಪಕ್ಷದ ನಾಯಕ ಯಾರು?. ವಿಧಾನಸಭೆ ಚುನಾವಣೆಯಲ್ಲಿ 66 ಸ್ಥಾನಗಳನ್ನು ಗೆದ್ದಿರುವ ಬಿಜೆಪಿ ಇನ್ನೂ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಲ್ಲ. ಸೋಮವಾರದಿಂದ ವಿಧಾನಸಭೆಯ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ವಿರೋಧ ಪಕ್ಷದ ನಾಯಕ ಯಾರು? ಎಂಬುದು ಗುಟ್ಟಾಗಿಯೇ ಉಳಿದಿದೆ.
ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಭಾನುವಾರ ಸಂಜೆ ಕರ್ನಾಟಕ ಬಿಜೆಪಿಯ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿತ್ತು. ಆದರೆ ಈ ಸಭೆಯನ್ನು ದಿಢೀರ್ ರದ್ದುಗೊಳಿಸಲಾಗಿದೆ. ಸೋಮವಾರ ಸಭೆ ನಡೆಯಲಿದೆ ಎಂಬ ಮಾಹಿತಿ ಇದೆ. ಆದ್ದರಿಂದ ಸೋಮವಾರ ವಿಪಕ್ಷ ನಾಯಕನ ಹೆಸರು ಘೋಷಣೆಯಾಗುವ ಸಾಧ್ಯತೆ ಇದೆ.

ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪಗೆ ಹೈಕಮಾಂಡ್ ನಾಯಕರು ದೆಹಲಿಗೆ ಬರುವಂತೆ ಸೂಚನೆ ನೀಡಿದ್ದಾರೆ. ಬೆಂಗಳೂರಿನಿಂದ 11.30ರ ವಿಮಾನದಲ್ಲಿ ಅವರು ಪ್ರಯಾಣ ಬೆಳೆಸಲಿದ್ದಾರೆ. ವಿರೋಧ ಪಕ್ಷದ ನಾಯಕನ ಆಯ್ಕೆ ದೆಹಲಿಯಲ್ಲಿಯೇ ತೀರ್ಮಾನವಾಗುವ ನಿರೀಕ್ಷೆ ಇದೆ.
ಕರ್ನಾಟಕ ವಿಧಾನಸಭೆ ಚುನಾವಣೆ 2023ರ ಸೋಲಿನ ಬಗ್ಗೆ ಬಿಜೆಪಿಯಲ್ಲಿ ಆಂತರಿಕ ಕಚ್ಚಾಟ ಜೋರಾಗಿದೆ. ಇದನ್ನು ತಡೆಯಲು ಪಕ್ಷದ ನಾಯಕರು ಸಹ ಪ್ರಯತ್ನ ಕೈಗೊಂಡಿದ್ದಾರೆ. 11 ನಾಯಕರಿಗೆ ಶಿಸ್ತು ಸಮಿತಿ ನೋಟಿಸ್ ನೀಡಿದೆ ಎಂಬ ಮಾಹಿತಿಯೂ ಇದೆ. ಈ ನಡುವೆ ವಿರೋಧ ಪಕ್ಷದ ನಾಯಕನ ಆಯ್ಕೆ ಕಗ್ಗಂಟಾಗಿದೆ.
ಯಾರ-ಯಾರ ಹೆಸರು ಮುಂಚೂಣಿಯಲ್ಲಿ?; ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡುವುದು ಬಿಜೆಪಿಗೆ ಸವಾಲಿನ ಕೆಲಸವಾಗಿದೆ. ಏಕೆಂದರೆ ಹಲವಾರು ಹಿರಿಯ ನಾಯಕರು ಈ ಬಾರಿ ಪಕ್ಷ ಬಿಟ್ಟಿದ್ದಾರೆ, ಚುನಾವಣಾ ನಿವೃತ್ತಿ ಪಡೆದಿದ್ದಾರೆ, ಚುನಾವಣೆಯಲ್ಲಿ ಸೋಲು ಕಂಡಿದ್ದಾರೆ.
ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೆಸರು ಪ್ರಬಲವಾಗಿ ಕೇಳಿ ಬರುತ್ತಿದೆ. ಅವರನ್ನೇ ಆಯ್ಕೆ ಮಾಡಲಾಗುತ್ತದೆ ಎಂದು ಪಕ್ಷದ ಮೂಲಗಳು ಸಹ ಹೇಳಿವೆ. ಆದರೆ ಯಾವ ನಾಯಕರು ಈ ಕುರಿತು ಪ್ರತಿಕ್ರಿಯೆ ನೀಡಿಲ್ಲ.
ಉಳಿದಂತೆ ಮಾಜಿ ಸಚಿವರಾದ ಆರಗ ಜ್ಞಾನೇಂದ್ರ, ಡಾ. ಸಿ. ಎನ್. ಅಶ್ವತ್ಥ ನಾರಾಯಣ, ವಿ. ಸುನಿಲ್ ಕುಮಾರ್ ಹೆಸರು ಕೇಳಿ ಬರುತ್ತಿದೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ರನ್ನು ವಿರೋಧ ಪಕ್ಷದ ನಾಯಕರನ್ನಾಗಿ ಮಾಡಬೇಕು ಎಂಬ ಬೇಡಿಕೆಯೂ ಇದೆ.
ಬಿ. ಎಸ್. ಯಡಿಯೂರಪ್ಪ ಪುತ್ರ, ಶಿಕಾರಪುರದ ಶಾಸಕ ಬಿ. ವೈ. ವಿಜಯೇಂದ್ರ ವಿರೋಧ ಪಕ್ಷದ ನಾಯಕರಾಗಬೇಕು ಎಂದು ಒತ್ತಾಯ ಮಾಡಲಾಗುತ್ತಿದೆ. ಆದರೆ ಮೊದಲ ಬಾರಿಗೆ ಶಾಸಕರಾದ ಅವರನ್ನು ಆಯ್ಕೆ ಮಾಡುವ ಸಾಧ್ಯತೆ ಕಡಿಮೆ ಇದೆ.
ಲಿಂಗಾಯತ ಸಮುದಾಯದ ನಾಯಕರನ್ನು ಹೈಕಮಾಂಡ್ ವಿರೋಧ ಪಕ್ಷದ ನಾಯಕರನಾಗಿ ಮಾಡಲು ಮುಂದಾಗಿದೆ ಎಂಬ ಮಾಹಿತಿ ಇದೆ. ದೆಹಲಿಯಲ್ಲಿ ಬಿ. ಎಸ್. ಯಡಿಯೂರಪ್ಪ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ, ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಭೇಟಿಯಾಗಲಿದ್ದಾರೆ. ಬಳಿಕ ಯಾರು ವಿರೋಧ ಪಕ್ಷದ ನಾಯಕರಾಗಬಹುದು? ಎಂಬ ಬಗ್ಗೆ ತೀರ್ಮಾನವಾಗುವ ನಿರೀಕ್ಷೆ ಇದೆ.
ಕಾಂಗ್ರೆಸ್ ವ್ಯಂಗ್ಯ; ಕರ್ನಾಟಕ ಕಾಂಗ್ರೆಸ್ ಶನಿವಾರ ಜಾಹೀರಾತು ರೂಪದಲ್ಲಿ ಟ್ವೀಟ್ವೊಂದನ್ನು ಮಾಡಿತ್ತು. ಪ್ರಕಟಣೆ ತುರ್ತಾಗಿ ಬೇಕಾಗಿದ್ದಾರೆ ಖಾಲಿ ಇರುವ ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕನ ಹುದ್ದೆಗೆ ಸೂಕ್ತ ವ್ಯಕ್ತ ಬೇಕಾಗಿದ್ದಾರೆ ಎಂದು ಬರೆದು ಬಿಜೆಪಿಯನ್ನು ವ್ಯಂಗ್ಯ ಮಾಡಿತ್ತು.
ಅಲ್ಲದೇ ವಿರೋಧ ಪಕ್ಷದ ನಾಯಕನ ಹುದ್ದೆಗೆ ಅರ್ಹತೆಗಳನ್ನು ಸಹ ಬರೆದಿತ್ತು. ವಿರೋಧ ಪಕ್ಷದ ನಾಯಕರೊಬ್ಬರು ಬೇಕಾಗಿದ್ದಾರೆ
* ಸಂವಿಧಾನವನ್ನು ತಿಳಿದವರು, ಪ್ರಜಾಪ್ರಭುತ್ವವನ್ನು ಅರಿತವರು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ.
* ಸಿಡಿಗೆ ತಡೆಯಜ್ಞೆ ತರದವರು, ಭ್ರಷ್ಟಾಚಾರಿಯಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ.
* RSS ಕೈಗೊಂಬೆಯಾಗದವರು, ಕೋಮುವಾದಿ ಅಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ.
*ವಾಟ್ಸಾಪ್ ಯೂನಿವರ್ಸಿಟಿಯಲ್ಲಿ ಪದವಿ ಪಡೆದಿರಬಾರದು, ಸುಳ್ಳು ಹೇಳಬಾರದು.
* ಘನತೆಯ ವ್ಯಕ್ತಿತ್ವದವರು, ತೂಕದ ಮಾತಿನವರು ವಿಪಕ್ಷ ನಾಯಕ ಬೇಕಾಗಿದ್ದಾರೆ.
ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ! ಎಂದು ಕಾಂಗ್ರೆಸ್ ಟ್ವೀಟ್ ಮಾಡಿತ್ತು.












Click it and Unblock the Notifications