100 ದಿನದಲ್ಲಿ 3 ನಾಯಕರನ್ನು ಆಯ್ಕೆ ಮಾಡದ ಬಿಜೆಪಿ!
ಬೆಂಗಳೂರು, ಸೆಪ್ಟೆಂಬರ್ 01; ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಮುಗಿದು ಕಾಂಗ್ರೆಸ್ ಸರ್ಕಾರ ರಚನೆಗೊಂಡು 100 ದಿನಳನ್ನು ಪೂರೈಸಿದೆ. ಆದರೆ ಬಿಜೆಪಿ ಇನ್ನೂ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಲ್ಲ. ಈ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಜಟಾಪಟಿ ನಡೆಸಿದೆ.
ಶುಕ್ರವಾರ ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಈ ಕುರಿತು ಟ್ವೀಟ್ ಮಾಡಿದ್ದಾರೆ. 'ನೂರು ದಿನಗಳು ಕಳೆದರೂ ಮೂರು ನಾಯಕರನ್ನು ಆಯ್ಕೆ ಮಾಡಲಾಗಿಲ್ಲ' ಎಂದು ವಿರೋಧ ಪಕ್ಷವನ್ನು ಟೀಕಿಸಿದ್ದಾರೆ.

ವಿಧಾನಸಭೆ ಅಧಿವೇಶನ ಆರಂಭವಾದಾಗ ಬಿಜೆಪಿ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡುವ ನಿರೀಕ್ಷೆ ಇತ್ತು. ಆದರೆ ಬಜೆಟ್ ಅಧಿವೇಶನಕ್ಕೂ ಸಹ ವಿರೋಧ ಪಕ್ಷದ ನಾಯಕನ್ನು ಆಯ್ಕೆ ಮಾಡದ ರಾಜ್ಯದ ಬಿಜೆಪಿ ನಾಯಕರು ದೆಹಲಿಯ ನಾಯಕರು ನೀಡುವ ಸೂಚನೆಗಾಗಿ ಕಾದು ಕೂತಿದ್ದಾರೆ.
ಪ್ರಿಯಾಂಕ್ ಖರ್ಗೆ ಟ್ವೀಟ್
ಸಚಿವರು ಟ್ವೀಟ್ ಮಾಡಿ, 'ನಮ್ಮ ಸರ್ಕಾರ ರಚನೆಯಾಗಿ ನೂರು ದಿನಗಳು ಕಳೆದಿವೆ, ನೂರು ದಿನಗಳಲ್ಲಿ ನೂರಾರು ಜನಪರ ಯೋಜನೆಗಳು, ನಿರ್ಧಾರಗಳೊಂದಿಗೆ ಮುನ್ನಡೆಯುತ್ತಿದ್ದೇವೆ. ಆದರೆ ಬಿಜೆಪಿಗೆ ನೂರು ದಿನಗಳು ಕಳೆದರೂ ಮೂರು ನಾಯಕರನ್ನು ಆಯ್ಕೆ ಮಾಡಲಾಗಿಲ್ಲ
* ವಿರೋಧ ಪಕ್ಷದ ನಾಯಕ
* ರಾಜ್ಯಧ್ಯಕ್ಷ
* ವಿಧಾನ ಪರಿಷತ್ ವಿಪಕ್ಷ ನಾಯಕ
'ನೂರು ದಿನಗಳದರೂ ಈ ಮೂರು ಹುದ್ದೆಗೆ ನಾಯಕರು ಸಿಗದಷ್ಟು ರಾಜಕೀಯ ದಿವಾಳಿತನ ಎದುರಿಸುತ್ತಿದೆಯೇ ಬಿಜೆಪಿ?. ನಮ್ಮ ಗ್ಯಾರಂಟಿಗಳನ್ನು ಟೀಕಿಸುತ್ತಿದ್ದ ಬಿಜೆಪಿಯವರಿಗೆ ಈ ಮೂರು ಹುದ್ದೆಗಳಿಗೆ ನೇಮಕದ ಗ್ಯಾರಂಟಿ ಇಲ್ಲದಿರುವುದು ದುರಂತ!' ಎಂದು ಟೀಕೆ ಮಾಡಿದ್ದಾರೆ.
ವಿರೋಧ ಪಕ್ಷದ ನಾಯಕ ನಾಯಕನ ಆಯ್ಕೆಯನ್ನು ಏಕೆ ಮಾಡುತ್ತಿಲ್ಲ? ಎಂಬುದಕ್ಕೆ ಕರ್ನಾಟಕದ ಬಿಜೆಪಿ ನಾಯಕರೇ ಉತ್ತರ ನೀಡಬೇಕಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವಧಿ ಸಹ ಮುಕ್ತಾಯಗೊಂಡಿದೆ. ಆದರೆ ಹೊಸ ರಾಜ್ಯಾಧ್ಯಕ್ಷರ ಆಯ್ಕೆ ಸಹ ಇನ್ನೂ ನಡೆದಿಲ್ಲ.
ನಮ್ಮ ಸರ್ಕಾರ ರಚನೆಯಾಗಿ ನೂರು ದಿನಗಳು ಕಳೆದಿವೆ, ನೂರು ದಿನಗಳಲ್ಲಿ ನೂರಾರು ಜನಪರ ಯೋಜನೆಗಳು, ನಿರ್ಧಾರಗಳೊಂದಿಗೆ ಮುನ್ನಡೆಯುತ್ತಿದ್ದೇವೆ.
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) September 1, 2023
ಆದರೆ ಬಿಜೆಪಿಗೆ
ನೂರು ದಿನಗಳು ಕಳೆದರೂ ಮೂರು ನಾಯಕರನ್ನು ಆಯ್ಕೆ ಮಾಡಲಾಗಿಲ್ಲ,
🔹ವಿರೋಧ ಪಕ್ಷದ ನಾಯಕ
🔹ರಾಜ್ಯಧ್ಯಕ್ಷ
🔹ವಿಧಾನ ಪರಿಷತ್ ವಿಪಕ್ಷ ನಾಯಕ
ನೂರು ದಿನಗಳದರೂ ಈ ಮೂರು ಹುದ್ದೆಗೆ…
ಮಾಜಿ ಮುಖ್ಯಮಂತ್ರಿಗಳಾದ ಬಿ. ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ದೆಹಲಿಗೆ ತೆರಳಿ ಪಕ್ಷದ ವರಿಷ್ಠರನ್ನು ಭೇಟಿ ಮಾಡಿ ಬಂದಿದ್ದಾರೆ. ಆದರೆ ಇನ್ನೂ ವರಿಷ್ಠರು ವಿರೋಧ ಪಕ್ಷದ ನಾಯಕನ ಆಯ್ಕೆಗೆ ಒಪ್ಪಿಗೆ ನೀಡಿಲ್ಲ. ಇದೇ ವಿಚಾರ ಕಾಂಗ್ರೆಸ್ ಪಕ್ಷದ ಟೀಕೆಗೆ ಅಸ್ತ್ರವಾಗಿದೆ.
ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಭೇಟಿ ನೀಡಿದ್ದರು. ಆಗ ಬಿಜೆಪಿ ನಾಯಕರು ಬ್ಯಾರಿಕೇಡ್ ಒಳಗೆ ನಿಂತು ಅವರಿಗೆ ಕೈ ಬೀಸಿದ್ದರು. ಆಗ ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿ, 'ರಾಜಕೀಯವಾಗಿ, ಸೈದ್ದಾಂತಿಕವಾಗಿ ವಿರೋಧಿಗಳಾಗಿದ್ದರೂ BJP Karnataka ನಾಯಕರ ದುರಾವಸ್ಥೆ ನೋಡಿ ಕರುಣೆ ಹುಟ್ಟುತ್ತಿದೆ!' ಎಂದು ಲೇವಡಿ ಮಾಡಿದ್ದರು.
'ಪ್ರಧಾನಿ ಮುಂದೆ ಬ್ಯಾರಿಕೆಡ್ ಬಂಧಿಗಳಾಗಿ ಗಮನ ಸೆಳೆಯಲು ಹರಸಾಹಸ ಮಾಡುತ್ತಿರುವ ಬಿಜೆಪಿ ನಾಯಕರು ಸ್ವಾಭಿಮಾನ, ಆತ್ಮಗೌರವವನ್ನು ಬೀದಿಪಾಲು ಮಾಡಿಕೊಂಡಿದ್ದು ಕರುಣಾಜನಕವಾಗಿದೆ'
'ಹೈಕಮಾಂಡ್ನಿಂದ ಇಷ್ಟೊಂದು ತಿರಸ್ಕಾರಕ್ಕೆ ಒಳಪಟ್ಟಿರುವಾಗ "ವಿರೋಧ ಪಕ್ಷದ ನಾಯಕ"ನ ಆಯ್ಕೆ ಸಾಧ್ಯವಾಗುವುದೇ? "ಈಗ ಸ್ವತಃ ಬಿಜೆಪಿಗರೂ ಸರ್ವಾಧಿಕಾರದ ಸಂತ್ರಸ್ತರಾಗಿದ್ದಾರೆ" ಬೀದಿಯಲ್ಲಿ ನಿಂತ ಬಿಜೆಪಿ ನಾಯಕರು ತಮ್ಮನ್ನು ತಾವೇ ಅವಮಾನಿಸಿಕೊಂಡಿದ್ದಲ್ಲ, ಇದು ಮತ ನೀಡಿದ ಮತದಾರರಿಗೆ ಅವಮಾನ, ಕನ್ನಡಿಗರಿಗೆ ಅವಮಾನ, ಕಾರ್ಯಕರ್ತರಿಗೆ ಅವಮಾನ' ಎಂದು ಹೇಳಿದ್ದರು.
ವಿಧಾನಸಭೆ ಚುನಾವಣೆಯಲ್ಲಿ 66 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ರಾಜ್ಯದಲ್ಲಿ ಅಧಿಕಾರ ಕಳೆದುಕೊಂಡ ಬಳಿಕ ವರಿಷ್ಠರು ರಾಜ್ಯದ ಬಿಜೆಪಿ ನಾಯಕರನ್ನು ಕಡೆಗಣಿಸುತ್ತಿದ್ದಾರೆಯೇ?. ವಿರೋಧ ಪಕ್ಷದ ನಾಯಕ ಯಾರಾಗುತ್ತಾರೆ? ಎಂಬ ಪ್ರಶ್ನೆಗೆ ಪಕ್ಷವೇ ಉತ್ತರ ಕೊಡಬೇಕು.











Click it and Unblock the Notifications