KPSC ಪ್ರಶ್ನೆ ಪತ್ರಿಕೆಯಲ್ಲಿ ಕನ್ನಡ ದೋಷ; ತನಿಖೆಗೆ ಆರ್.ಅಶೋಕ್ ಪಟ್ಟು
ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ಗೆಜೆಟೆಡ್ ಪ್ರೊಬೇಷನರ್ಸ್ 384 ಹುದ್ದೆಗಳ ನೇಮಕಾತಿ ಪೂರ್ವಭಾವಿ ಪರೀಕ್ಷೆಯನ್ನು ಕಳೆದ ಮಂಗಳವಾರ ನಡೆಸಿದೆ. ಆದರೆ ಈ ಪರೀಕ್ಷೆ ಪ್ರಶ್ನೆ ಪತ್ರಿಕೆಯಲ್ಲಿ ಕನ್ನಡ ದೋಷ ಇರುವ ಕುರಿತು ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಬಗ್ಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಕೆಪಿಎಸ್ಸಿ ಪ್ರಕಟಣೆ ಹೊರಡಿಸಿರುವ ಬಗ್ಗೆಯೂ ಇದೀಗ ಆಕ್ರೋಶ ಭುಗಿಲೆದ್ದಿದೆ.
ಈ ಬಗ್ಗೆ ವಿಪಕ್ಷ ನಾಯಕ ಆರ್.ಅಶೋಕ್ ಅವರೂ ಖಂಡನೆ ವ್ಯಕ್ತಪಡಿಸಿದ್ದಾರೆ. ʼಅಂಗೈ ಹುಣ್ಣಿಗೆ ಕನ್ನಡಿ ಬೇಕೆ" ಎಂಬಂತೆ ಕೆಪಿಎಸ್ಸಿ ಪ್ರಶ್ನೆಪತ್ರಿಕೆಯ ತುಂಬಾ ಕಣ್ಣಿಗೆ ಕುಕ್ಕುವ ಹಾಗೆ ಕಾಣುತ್ತಿರುವ ಲೋಪದೋಷಗಳು ಸಾಮಾಜಿಕ ಜಾಲತಾಣಗಳಲ್ಲಿ, ಮಾಧ್ಯಮಗಳಲ್ಲಿ ಈಗಾಗಲೇ ಹರಿದಾಡುತ್ತಿದ್ದರೂ, ದೋಷಗಳಿಗೆ, ಭಾಷಾಂತರ ತಪ್ಪುಗಳಿಗೆ ಆಕ್ಷೇಪಣೆ ಸಲ್ಲಿಸಬೇಕು ಎಂದು ಹೊರಡಿಸಿರುವ ಪ್ರಕಟಣೆ ಅತ್ಯಂತ ಹಾಸ್ಯಾಸ್ಪದ ಮತ್ತು ಅಸಂಬದ್ಧವಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.

ಪ್ರಶ್ನೆಪತ್ರಿಕೆ ತಯಾರಾದ ನಂತರ ನುರಿತ ಸಂಪನ್ಮೂಲ ವ್ಯಕ್ತಿಗಳ ಕೈಯಲ್ಲಿ ಅದನ್ನು ಪ್ರೂಫ್ ರೀಡ್ ಮಾಡಿಸಿ, ಪ್ರಶ್ನೆಗಳ ರಚನೆ, ನಿಖರತೆ, ತರ್ಜುಮೆ ಮುಂತಾದವುಗಳಲ್ಲಿ ಯಾವುದಾದರೂ ಲೋಪದೋಷಗಳು ಇದ್ದಲ್ಲಿ ಅದನ್ನು ತಿದ್ದುಪಡಿ ಮಾಡಿದ ನಂತರ ಪ್ರಶ್ನೆ ಪತ್ರಿಕೆ ಅಂತಿಮಗೊಳಿಸಿ ಪರೀಕ್ಷೆ ನಡೆಸಿದ್ದರೆ ಇವತ್ತು ಇಡೀ ವ್ಯವಸ್ಥೆ ನಗೆಪಾಟಲಿಗೀಡಾಗುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಹೇಳಿದ್ದಾರೆ.
ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆ ಪತ್ರಿಕೆಯಲ್ಲಿ ಆಗಿರುವ ಲೋಪದೋಷಗಳ ಬಗ್ಗೆ ಈಗಾಗಲೇ ಬಹಿರಂಗ ಚರ್ಚೆಯಾಗುತ್ತಿರುವಾಗ ಆಕ್ಷೇಪಣೆ ಸಲ್ಲಿಸಬೇಕು ಎಂದು ಪ್ರಕಟಣೆ ಹೊರಡಿಸಿರುವುದು ಆಯೋಗ ಎಷ್ಟು ಅಸಮರ್ಥವಾಗಿದೆ ಎಂಬುದನ್ನ ಮತ್ತೊಮ್ಮೆ ಜಗಜ್ಜಾಹೀರು ಮಾಡಿದೆ ಎಂದು ಕೆಪಿಎಸ್ಸಿ ವಿರುದ್ಧ ದೂರಿದ್ದಾರೆ.

ಪ್ರಶ್ನೆಪತ್ರಿಕೆ ಸಿದ್ಧಪಡಿಸಲು ಜವಾಬ್ದಾರರಾದ ಅಧಿಕಾರಿಗಳನ್ನು ಈ ಕೊಡಲೇ ಅಮಾನತು ಮಾಡಿ ತನಿಖೆಗೆ ಆದೇಶ ನೀಡಬೇಕು. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಪರೀಕ್ಷಾರ್ಥಿಗಳಿಗೆ ಸ್ಪಷ್ಟನೆ ನೀಡಬೇಕು. ಮುಂದಿನ ನಡೆಯ ಬಗ್ಗೆ ಮಾಹಿತಿ ನೀಡಬೇಕು. ಕೆಪಿಎಸ್ಸಿ ವ್ಯವಸ್ಥೆಗೆ ಆಮೂಲಾಗ್ರ ಸುಧಾರಣೆ ತರುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಪೂರ್ವಭಾವಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿನ ದೋಷದ ಕುರಿತು ಕನ್ನಡ ಅಭಿವೃದ್ಧಿ ಪ್ರಾಧಿಕಾರ ವರದಿಯನ್ನೂ ಕೇಳಿದೆ. ಅರ್ಥವಾಗದ ಕನ್ನಡ ಬಳಕೆಯಿಂದಾಗಿ ಕನ್ನಡ ಮಾಧ್ಯಮದಲ್ಲಿ ಓದಿದ ಮತ್ತು ಗ್ರಾಮೀಣ ಭಾಗದ ಅಭ್ಯರ್ಥಿಗಳಿಗೆ ಅನಾನುಕೂಲವಾಗಿದೆ. ಸಂಕೀರ್ಣ ಮತ್ತು ಗೊಂದಲ ಮೂಡಿಸುವಂತಹ ಇಂತಹ ಪ್ರಶ್ನೆ ಪತ್ರಿಕೆಗಳಿಂದ ಕನ್ನಡಿಗರೇ ಸಂಕಷ್ಟಕ್ಕೆ ಈಡಾಗಿದ್ದಾರೆ. ನೂರಾರು ಅಭ್ಯರ್ಥಿಗಳ ಕನಸು ನುಚ್ಚು ನೂರಾಗಿದೆ ಎಂದು ಪ್ರಾಧಿಕಾರ ಹೇಳಿದೆ.
ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಮತ್ತು ಆಡಳಿತ ಭಾಷೆಯಾಗಿದೆ. ಆದರೆ ಇಂಗ್ಲಿಷ್ ಭಾಷೆಯಲ್ಲಿ ಪ್ರಕಟವಾದ ಪ್ರಶ್ನೆಗಳನ್ನು ಓದಿ ಅರ್ಥೈಸಿಕೊಂಡು ಅಭ್ಯರ್ಥಿಗಳು ಉತ್ತರ ಬರೆಯುವಂತೆ ಸೂಚಿಸಿರುವುದನ್ನು ಪ್ರಾಧಿಕಾರ ಖಂಡಿಸುತ್ತದೆ. ಆಡಳತ ಭಾಷೆಯಾದ ಕನ್ನಡಕ್ಕೆ ಪ್ರಾಧಾನ್ಯತೆ ನೀಡದೆ ಮತ್ತು ಅಭ್ಯರ್ಥಿಗಳಿಗೆ ಅನಾನುಕೂಲತೆ ಉಂಟು ಮಾಡಿರುವ ಕೆಪಿಎಸ್ಸಿ ನಡೆಯನ್ನು ಪ್ರಾಧಿಕಾರ ವಿರೋಧಿಸಿ, ಖಂಡಿಸುತ್ತದೆ ಎಂದು ಹೇಳಿದೆ.












Click it and Unblock the Notifications