ಮೇಕೆದಾಟು ಪಾದಯಾತ್ರೆ: ಬಿಜೆಪಿ ನಿರೀಕ್ಷೆ ಹುಸಿಗೊಳಿಸಿದ ಸಿದ್ದರಾಮಯ್ಯ
ರಾಮನಗರ, ಜ 11: ಜಿಲ್ಲೆಯ ಕನಕಪುರ ತಾಲೂಕಿನ ಸಂಗಮದಲ್ಲಿ ಆರಂಭವಾದ ಕಾಂಗ್ರೆಸ್ಸಿನ ಮೇಕೆದಾಟು ಪಾದಯಾತ್ರೆಯಲ್ಲಿನ ಉದ್ಘಾಟನೆಯ ದಿನ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಭಾಗವಹಿಸಿದ್ದರು. ಆರೇಳು ಕಿಲೋಮೀಟರ್ ನಡೆದ ನಂತರ ಸುಸ್ತಾಗಿ ಬೆಂಗಳೂರಿಗೆ ವಾಪಸ್ ಆಗಿದ್ದರು. ಪಾದಯಾತ್ರೆಯಲ್ಲಿ ಸಿದ್ದರಾಮಯ್ಯ ಇನ್ನುಮುಂದೆ ಭಾಗವಹಿಸುವುದಿಲ್ಲವೇ ಎನ್ನುವ ಪ್ರಶ್ನೆ, ಬಿಜೆಪಿಯ ಟ್ವೀಟ್ ನಂತರ ಜನರಲ್ಲಿ ಮೂಡಿತ್ತು. ಈಗ ಅದಕ್ಕೆ ಉತ್ತರ ಕೊಡುವ ಪ್ರಯತ್ನವನ್ನು ಸಿದ್ದರಾಮಯ್ಯ ಮಾಡಿದ್ದಾರೆ.
ಕನಕಪುರದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಿದ್ದರಾಮಯ್ಯ ಭಾಗವಹಿಸಿದ್ದಾರೆ. ಜೊತೆಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ನಿವಾಸಕ್ಕೂ ಭೇಟಿ ನೀಡಿದ್ದಾರೆ. ಎರಡನೇ ದಿನದ ಪಾದಯಾತ್ರೆ ಯಶಸ್ವಿಯಾಗಿ ನಡೆಸಿದ್ದಕ್ಕೆ ಡಿಕೆಶಿಗೆ ಧನ್ಯವಾದ ಹೇಳಿದ ಸಿದ್ದರಾಮಯ್ಯ, ಪಾದಯಾತ್ರೆಯಲ್ಲಿ ಮುಂದೆ ಭಾಗವಹಿಸುತ್ತೇನೆ ಎಂದು ಹೇಳಿದ್ದಾರೆ. ಆ ಮೂಲಕ, ಬಿಜೆಪಿ ಹೇಳುತ್ತಿರುವ ಬಣ ರಾಜಕೀಯ ಸುಳ್ಳು ಎಂದು ಸಾರಲು ಸಿದ್ದರಾಮಯ್ಯ ಹೊರಟಂತಿದೆ.
"ಮೊನ್ನೆ ನನಗೆ ಜ್ವರ ಇದ್ದದ್ದರಿಂದ ಪಾದಯಾತ್ರೆಯ ನಡುವೆಯೇ ವಿಶ್ರಾಂತಿಗೆ ಹೋಗಬೇಕಾಯಿತು. ನಿನ್ನೆ ಕೂಡ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಲಿಲ್ಲ. ವೈದ್ಯರ ಸೂಚನೆ ಮೇರೆಗೆ ಅಗತ್ಯ ಚಿಕಿತ್ಸೆ ಪಡೆದು ಇಂದು ಮರಳಿದ್ದೇನೆ. ಕಳೆದೆರಡು ದಿನಗಳ ಕಾಲ ಪಾದಯಾತ್ರೆ ಅತ್ಯಂತ ಯಶಸ್ವಿಯಾಗಿ ನಡೆದಿದೆ. ಇದಕ್ಕಾಗಿ ಡಿ.ಕೆ.ಶಿವಕುಮಾರ್ ಅವರಿಗೂ, ಪಕ್ಷದ ಕಾರ್ಯಕರ್ತರಿಗೂ ಹಾಗೂ ಪಕ್ಷದ ಎಲ್ಲಾ ನಾಯಕರಿಗೂ, ಪಾದಯಾತ್ರೆಯಲ್ಲಿ ಭಾಗವಹಿಸಿದ ಪ್ರತಿಯೊಬ್ಬರಿಗೂ ಧನ್ಯವಾದ ಅರ್ಪಿಸುತ್ತೇನೆ"ಎಂದು ಸಿದ್ದರಾಮಯ್ಯ ಹೇಳಿದರು.
"ಇಂದು ಮೈಸೂರು ಜಿಲ್ಲೆ ಹಾಗೂ ಇನ್ನಿತರ ಹನ್ನೊಂದು ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರು ಪಾದಯಾತ್ರೆಗೆ ಆಗಮಿಸಿದ್ದಾರೆ, ಹೀಗೆ ಮುಂದೆ ಹಾಸನ, ಮಂಡ್ಯ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು, ಕೋಲಾರ ಸುತ್ತಮುತ್ತಲಿನ ಜನ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಯ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಜನ ಸ್ವಯಂ ಪ್ರೇರಿತರಾಗಿ ನಮ್ಮೊಂದಿಗೆ ಅತ್ಯಂತ ಉತ್ಸಾಹದಿಂದ ಭಾಗವಹಿಸುತ್ತಿದ್ದಾರೆ, ಇದು ಮೇಕೆದಾಟು ಯೋಜನೆಯ ಬಗ್ಗೆ ಜನರ ಆಸಕ್ತಿಯನ್ನು ತೋರಿಸುತ್ತದೆ"ಎಂದು ಸಿದ್ದರಾಮಯ್ಯ ಅಭಿಪ್ರಾಯ ಪಟ್ಟರು.
|
ಕರ್ನಾಟಕ ಬಿಜೆಪಿ ಐಟಿ ಶೆಲ್ ಮಾಡಿದ ಟ್ವೀಟ್
ಕೋವಿಡ್ ಯಾತ್ರೆ ಎನ್ನುವ ಹ್ಯಾಷ್ ಟ್ಯಾಗ್ ಮೂಲಕ ಕರ್ನಾಟಕ ಬಿಜೆಪಿ ಐಟಿ ಶೆಲ್ ಟ್ವೀಟ್ ಮಾಡಿ, "ಅಂದ ಹಾಗೆ, ವಿಪಕ್ಷ ನಾಯಕ @siddaramaiah ಅವರೇ, ನಿಮ್ಮ ಆರೋಗ್ಯ ಹೇಗಿದೆ? ನಾವಿಬ್ಬರೇ ನಡೆಯುತ್ತೇವೆ ಎಂದು ಸವಾಲು ಹಾಕಿದ್ದ ನೀವು ನಾಲ್ಕೇ ಕಿಮೀ ನಡೆದು ಸುಸ್ತಾದರೆ ಹೇಗೆ? #ಸುಳ್ಳಿನಜಾತ್ರೆ ಯಲ್ಲಿ ಡಿಕೆಶಿ ಅವರಿಗೆ ಅರ್ಧದಲ್ಲೇ ಕೈ ಕೊಟ್ಟಿದ್ದರ ಹಿಂದೆ ನಿಮ್ಮ ಪೂರ್ವ ನಿಯೋಜಿತ ತಂತ್ರವಿದೆಯೇ?" ಎಂದು ಪ್ರಶ್ನಿಸಿತ್ತು. ಹಾಗಾಗಿ, ಸಿದ್ದರಾಮಯ್ಯನವರು ಪಾದಯಾತ್ರೆಯಲ್ಲಿ ಭಾಗವಹಿಸುತ್ತಾರಾ ಎನ್ನುವ ಪ್ರಶ್ನೆ ಎದುರಾಗಿತ್ತು.

ಗೋವಿಂದ ಕಾರಜೋಳ ಅವರು ನಿತ್ಯ ನಮ್ಮ ಬಗ್ಗೆ ಇಲ್ಲಸಲ್ಲದ ಸುಳ್ಳು ಆರೋಪ
"ಮೇಕೆದಾಟು ನಮ್ಮ ಕಾಂಗ್ರೆಸ್ ಸರ್ಕಾರದ ಯೋಜನೆ. ಈ ಯೋಜನೆ ಜಾರಿಯಾಗಬೇಕು ಎಂದು ಹೆಚ್ಚಿನ ಆಸಕ್ತಿ ವಹಿಸಿ ಡಿ.ಪಿ.ಆರ್ ಸಿದ್ಧಪಡಿಸಿದ್ದು ನಮ್ಮ ಸರ್ಕಾರ. ಆದರೆ ಜಲ ಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ ಅವರು ನಿತ್ಯ ನಮ್ಮ ಬಗ್ಗೆ ಇಲ್ಲಸಲ್ಲದ ಸುಳ್ಳು ಆರೋಪ ಮಾಡುವ ತಮ್ಮ ತಪ್ಪನ್ನು ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. 2008 ರಿಂದ 2013 ರ ವರೆಗೆ ಬಿಜೆಪಿ ಪಕ್ಷ ಅಧಿಕಾರದಲ್ಲಿ ಇದ್ದರೂ ಮೇಕೆದಾಟು ಯೋಜನೆ ಬಗ್ಗೆ ಯಾವುದೇ ಆಸಕ್ತಿ ತೋರಿರಲಿಲ್ಲ. ನಾವು ಮೇ 2013 ರಲ್ಲಿ ಅಧಿಕಾರಕ್ಕೆ ಬಂದೆವು, ಸೆಪ್ಟೆಂಬರ್ ತಿಂಗಳಲ್ಲೇ ಮೇಕೆದಾಟು ಜಾರಿ ಆಗಬೇಕು ಎಂದು ಡಿ.ಪಿ.ಆರ್ ಸಿದ್ಧಪಡಿಸಿ ಕಾವೇರಿ ಜಲ ಮಂಡಳಿ ಎದುರು ಮಂಡಿಸಿದ್ದೆವು" ಎಂದು ಸಿದ್ದರಾಮಯ್ಯ ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟನೆಯನ್ನು ನೀಡಿದರು.

ಯಾಕೆ ಯೋಜನೆ ಜಾರಿ ಮಾಡಿಲ್ಲ ಮಿಸ್ಟರ್ ಕಾರಜೋಳ?
"ರಾಜ್ಯದಲ್ಲಿ ನಾವು ಅಧಿಕಾರದಲ್ಲಿ ಇದ್ದಾಗ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇತ್ತು, ನಮಗೆ ಯೋಜನೆ ಜಾರಿಮಾಡಲು ಅನುಮತಿ ಸಿಗಲಿಲ್ಲ ಅಂತ ಬಿಡಬಹುದು, ಆದರೆ ಈಗ ಹಾಗಿಲ್ಲ. ಎರಡೂ ಕಡೆ ಬಿಜೆಪಿ ಸರ್ಕಾರ ಇದೆ, ಕೇಂದ್ರದಲ್ಲಿ ನೀರಾವರಿ, ಕಾನೂನು ಸಚಿವರು ನಿಮ್ಮವರೇ ಇದ್ದಾರೆ, ರಾಜ್ಯದಿಂದ 25 ಜನ ಸಂಸದರನ್ನು ಜನ ಬಿಜೆಪಿಯ ಸಂಸದರನ್ನು ಜನ ಆರಿಸಿ ಕಳುಹಿಸಿದ್ದಾರೆ. ಇನ್ನೂ ಯಾಕೆ ಯೋಜನೆ ಜಾರಿ ಮಾಡಿಲ್ಲ ಮಿಸ್ಟರ್ ಕಾರಜೋಳ?"ಎಂದು ಸಿದ್ದರಾಮಯ್ಯನವರು ಜಲಸಂಪನ್ಮೂಲ ಖಾತೆಯ ಸಚಿವ ಗೋವಿಂದ ಕಾರಜೋಳ ಅವರನ್ನು ಪ್ರಶ್ನಿಸಿದರು.
Recommended Video

ಡಿ.ಕೆ ಶಿವಕುಮಾರ್ ಕಲ್ಲುಗುಂಡಿನ ಹಾಗೆ ಇದ್ದಾರೆ
"ನಿನ್ನೆ ಡಿ.ಕೆ ಶಿವಕುಮಾರ್ ಅವರ ಗಂಟಲು ದ್ರವ ಮಾದರಿ ತಗೊಂಡು ಬರಲು ಸರ್ಕಾರ ವೈದ್ಯಾಧಿಕಾರಿಯನ್ನು ಕಳುಹಿಸಿತ್ತು. ಬಹುಶಃ ಮಾದರಿ ಪರೀಕ್ಷೆ ಮಾಡಿ ಕೊರೊನಾ ಇದೆ ಎಂದು ಸುಳ್ಳು ವರದಿ ಕೊಡುವ ಯೋಚನೆ ಮಾಡಿಕೊಂಡಿದ್ದರೋ ಏನೋ. ಎರಡು ದಿನ ಬಿಸಿಲಿನಲ್ಲಿ ನಡೆದರೂ ಡಿ.ಕೆ ಶಿವಕುಮಾರ್ ಕಲ್ಲುಗುಂಡಿನ ಹಾಗೆ ಇದ್ದಾರೆ. ಈ ಹಿಂದೆ ಬಳ್ಳಾರಿಯಲ್ಲಿ ಪಾದಯಾತ್ರೆ ಮಾಡಿದಾಗ ಕಡೇ ದಿನ ಐದು ಲಕ್ಷ ಜನ ಸೇರಿದ್ದರೂ. ಈಗಲೂ ಜನ ನಮ್ಮ ಪಾದಯಾತ್ರೆಗೆ ಸ್ವಯಂ ಪ್ರೇರಿತರಾಗಿ ಬರಲು ಆರಂಭ ಮಾಡಿದ್ದಾರೆ. ಇದರಿಂದ ಬಿಜೆಪಿಯವರಿಗೆ ಭಯ ಶುರುವಾಗಿದೆ"ಎಂದು ಸಿದ್ದರಾಮಯ್ಯನವರು ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದರು.












Click it and Unblock the Notifications