ಸೋನಿಯಾ ಗಾಂಧಿ ಜೊತೆ ಸಿದ್ದರಾಮಯ್ಯ ಮಹತ್ವದ ಚರ್ಚೆ
Recommended Video
ಬೆಂಗಳೂರು, ಅಕ್ಟೋಬರ್ 16 : ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯನ್ನು ಭೇಟಿ ಮಾಡಿದರು. ಪ್ರತಿಪಕ್ಷ ನಾಯಕರಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಈ ಭೇಟಿ ನಡೆದಿದೆ.
ಬುಧವಾರ ನವ ದೆಹಲಿಯಲ್ಲಿ ಸಿದ್ದರಾಮಯ್ಯ ಸೋನಿಯಾ ಗಾಂಧಿಯನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಪ್ರತಿಪಕ್ಷ ನಾಯಕನಾಗಿ ಆಯ್ಕೆ ಮಾಡಿದ್ದಕ್ಕೆ ಧನ್ಯವಾದಗಳನ್ನು ಸಲ್ಲಿಸಿದರು. ರಾಜ್ಯ ರಾಜಕೀಯದ ಬಗ್ಗೆ ವಿವರಣೆ ನೀಡಿದರು.

ಕಳೆದ ವಾರ ಸಿದ್ದರಾಮಯ್ಯರನ್ನು ಕರ್ನಾಟಕ ವಿಧಾನಸಭೆ ವಿರೋಧ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಗಿತ್ತು. ಮೂರು ದಿನಗಳ ಕಾಲ ನಡೆದ ಅಧಿವೇಶನದಲ್ಲಿ ಸಿದ್ದರಾಮಯ್ಯ ಪ್ರವಾಹ ಪರಿಸ್ಥಿತಿ ಬಗ್ಗೆ ವಿವರವಾಗಿ ಮಾತನಾಡಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದರು.
ಕರ್ನಾಟಕದ 15 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾಗಿದೆ. ಉಪ ಚುನಾವಣೆ ಸಂಪೂರ್ಣ ಉಸ್ತುವಾರಿಯನ್ನು ಹೈಕಮಾಂಡ್ ಸಿದ್ದರಾಮಯ್ಯ ಹೆಗಲಿದೆ ಹಾಕಿದೆ. ಆದ್ದರಿಂದ, ಬುಧವಾರದ ಭೇಟಿ ಮಹತ್ವ ಪಡೆದುಕೊಂಡಿತ್ತು.
ಉಪ ಚುನಾವಣೆಯಲ್ಲಿ ಕಾಂಗ್ರೆಸ್ 10ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಜಯಗಳಿಸಬೇಕು ಎಂದು ಪಣ ತೊಟ್ಟಿದೆ. 6ಕ್ಕಿಂತ ಕಡಿಮೆ ಕ್ಷೇತ್ರದಲ್ಲಿ ಗೆದ್ದರೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸರ್ಕಾರಕ್ಕೆ ಸಂಕಷ್ಟ ಎದುರಾಗಲಿದೆ.
ಕಾಂಗ್ರೆಸ್ ಉಪ ಚುನಾವಣೆ ಸಿದ್ಧತೆಯನ್ನು ಆರಂಭಿಸಿದ್ದು ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಈಗಾಗಲೇ ಸಿದ್ಧಪಡಿಸಿದೆ. ಡಿಸೆಂಬರ್ 5ರಂದು ನಡೆಯುವ ಚುನಾವಣೆಗಾಗಿ ಪ್ರಚಾರವನ್ನು ಆರಂಭಿಸಿದೆ. ಉಪ ಚುನಾವಣೆ ಕಾರ್ಯತಂತ್ರದ ಬಗ್ಗೆ ಸಿದ್ದರಾಮಯ್ಯ ಸೋನಿಯಾ ಗಾಂಧಿ ಜೊತೆ ಮಾತುಕತೆ ನಡೆಸಿದ್ದಾರೆ.
ಸಿದ್ದರಾಮಯ್ಯ ಕಳೆದ ಬಾರಿ ದೆಹಲಿಗೆ ಹೋದಾಗ ಸೋನಿಯಾ ಗಾಂಧಿ ಭೇಟಿಯಾಗಿ ಮೂರು ದಿನ ಕಾದಿದ್ದರು. ಆದರೆ, ಕಾಲವಕಾಶ ಸಿಗದೇ ವಾಪಸ್ ಬಂದಿದ್ದರು. ಈಗ ಪ್ರತಿಪಕ್ಷ ನಾಯಕರಾದ ಬಳಿಕ ಭೇಟಿಯಾಗಿದ್ದಾರೆ.












Click it and Unblock the Notifications