ಸಿದ್ದರಾಮಯ್ಯಗೆ ಸಿಎಂ ಸ್ಥಾನ ನೀಡಿ: ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಕೊಟ್ಟ ಎಚ್ಚರಿಕೆ ಏನು?
ಬೆಂಗಳೂರು, ಮೇ15: ಐತಿಹಾಸಿಕ ಗೆಲವು ಸಾಧಿಸಿದ ಕಾಂಗ್ರೆಸ್ ಮುಖ್ಯಮಂತ್ರಿ ಆಯ್ಕೆ ವಿಚಾರವೇ ದೊಡ್ಡ ಸವಾಲಾಗಿದೆ. ಈಗಾಗಲೇ ಕಾಂಗ್ರೆಸ್ ನ 135 ಶಾಸಕರ ಅಭಿಪ್ರಾಯಿಸಿದ್ದು, ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿ ಆಗಬೇಕು ಎಂದು ಹಲವು ಸಮುದಾಯಗಳು ಆಗ್ರಹಿಸಿದ್ದು, ಹಲವು ಕಾಂಗ್ರೆಸ್ ನಾಯಕರು ಸಿದ್ದರಾಮಯ್ಯ ಪರ ಒಲವು ತೋರಿದ್ದಾರೆ.
ಇತ್ತ ಸೋಮವಾರ ಬೆಂಗಳೂರಿನಲ್ಲಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಮತ್ತೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಬೇಕು, ಸಿದ್ದರಾಮಯ್ಯ ಅವರಿಗೆ ಸಿಎಂ ಸ್ಥಾನ ನೀಡಿ ಎಂದು ಆಗ್ರಹಿಸಿದ್ದಾರೆ.

ಈಗಾಗಲೇ ಹೈಕಮಾಂಡ್ ನಾಯಕರ ಬುಲಾವ್ ಮೇರೆಗೆ ಸಿದ್ದರಾಮಯ್ಯ ಅವರು ತಮ್ಮ ಆಪ್ತ ನಾಯಕರ ಜೊತೆಗ ದೆಹಲಿಗೆ ತೆರಳಿದ್ದು, ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಸಿದ್ದರಾಮಯ್ಯ ಪರವಾಗಿ ಬ್ಯಾಟಿಂಗ್ ಮಾಡಿದೆ.
ಸೋಮವಾರ ಖಾಸಗಿ ಹೋಟೆಲ್ ನಲ್ಲಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಸಂಚಾಲಕ ಮಾವಳ್ಳಿ ಶಂಕರ್ ಮಾತನಾಡಿ, ಈ ಹಿಂದೆ ಸಿದ್ದರಾಮಯ್ಯ ಐದು ವರ್ಷಗಳ ಕಾಲ ದೇಶ ಮೆಚ್ಚುವ ರೀತಿಯ ಸರ್ಕಾರ ಕೊಟ್ಟಿದ್ದಾರೆ. ರಾಜ್ಯದಲ್ಲಿ ಬಲಿಷ್ಠ ಜಾತಿಗಳೇ ಆಳ್ವಿಕೆ ಮಾಡಿದೆ, ಅಹಿಂದ ವರ್ಗದ ಹಿತ ಕಾಪಾಡುವ ಅನೇಕ ಕಾರ್ಯಕ್ರಮ ನೀಡಿದ್ದಾರೆ. ಯಾವುದೇ ಕಪ್ಪು ಚುಕ್ಕೆ ಇಲ್ಲದೆ ರಾಜ್ಯದ ಆಡಳಿತ ನೀಡಿದ್ದಾರೆ. ಹೀಗಾಗಿ ಮತ್ತೆ ಸಿದ್ದರಾಮಯ್ಯ ಅವರಿಗೆ ಸಿಎಂ ಸ್ಥಾನ ನೀಡಿ ಎಂದು ಆಗ್ರಹಿಸಿದ್ದಾರೆ.
ರಾಜ್ಯದ ಜನತೆ ಮತ್ತೊಮ್ಮೆ ಸಿದ್ದರಾಮಯ್ಯ ಆಡಳಿತ ನಿರೀಕ್ಷೆ ಮಾಡುತ್ತಿದ್ದಾರೆ. ರಾಜ್ಯಕ್ಕೆ ಸಿದ್ದರಾಮಯ್ಯ ಆರ್ಥಿಕ ಶಿಸ್ತನ್ನು ನೀಡಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆ ಎದುರಿಸುವ ಎದೆಗಾರಿಕೆ, ಸೈದ್ಧಾಂತಿಕ ಬದ್ಧತೆ ಇರುವುದು ಸಿದ್ದರಾಮಯ್ಯ ಅವರಿಗೆ. ಸಿದ್ದರಾಮಯ್ಯ ಅವರನ್ನ ನೋಡಿಯೇ ನಮ್ಮ ಸಮುದಾಯ ಕಾಂಗ್ರೆಸ್ ಗೆ ಮತ ಹಾಕಿದೆ, ಹೀಗಾಗಿ ಅವರಿಗೆ ಸಿಎಂ ಸ್ಥಾನವನ್ನ ನೀಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಇದರ ಸಂಕಷ್ಟವನ್ನ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇನ್ನೂ ಈ ವೇಳೆ ಮಾಜಿ ಸಚಿವ ಬಿ.ಟಿ ಲಲಿತಾ ನಾಯಕ್ ಮಾತನಾಡಿ, ಮುಂದಿನ ಚುನಾವಣೆಗಳ ದೃಷ್ಟಿಯಲ್ಲಿ ಸಿದ್ದರಾಮಯ್ಯ ಅವರಿಗೆ ನಾಯಕತ್ವ ನೀಡಬೇಕು. ಇದರಿಂದ ಕಾಂಗ್ರೆಸ್ ಪಕ್ಷಕ್ಕೆ ಅನುಕೂಲವಾಗಲಿದೆ. ಕೋಮುವಾದ, ಹಿಂದುತ್ವ ಗದ್ದಲ ನಿಭಾಯಿಸುವುದು ಅಗತ್ಯವಾಗಿದೆ. ಹೀಗಾಗಿ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗುವುದನ್ನು ಎಲ್ಲರೂ ಒಪ್ಪಬೇಕು ಎಂದರು.
ಕಾಂಗ್ರೆಸ್ನ ಎಲ್ಲಾ ನಾಯಕರು ಕಷ್ಟ ಪಟ್ಟಿದ್ದಾರೆ ಆದರೂ ಸಿದ್ದರಾಮಯ್ಯ ಅವರಿಗೆ ಅವಕಾಶ ಕಲ್ಪಿಸಬೇಕು. ಸರಿಯಾದ ದಿಕ್ಕಿನಲ್ಲಿ ರಾಜ್ಯವನ್ನು ತೆಗೆದುಕೊಂಡು ಹೋಗುವುದು ಅಗತ್ಯವಾಗಿದೆ. ಕಾಂಗ್ರೆಸ್ ನಲ್ಲಿ ಕೆಲವರಲ್ಲಿ ಕೊರತೆ ಇದೆ. ನಮ್ಮ ಸಮುದಾಯದ ಬೆಂಬಲ ನಿಮಗಿದೆ. ಕಾಂಗ್ರೆಸ್ ನಮ್ಮ ಮಾತನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳುವ ಮೂಲಕ ಸಿದ್ದರಾಮಯ್ಯ ಗೆ ಮುಖ್ಯಮಂತ್ರಿ ಸ್ಥಾನ ನೀಡಿ ಎಂದು ಆಗ್ರಹಿಸಿದ್ದಾರೆ.












Click it and Unblock the Notifications