ರಾಘವೇಶ್ವರ ಶ್ರೀ ಜಾಮೀನು ಅರ್ಜಿ ತೀರ್ಪು ಸೆ.30ಕ್ಕೆ
ಬೆಂಗಳೂರು, ಸೆಪ್ಟೆಂಬರ್ 23 : ಯಕ್ಷಗಾನ ಕಲಾವಿದೆ ಮೇಲೆ ಅತ್ಯಾಚಾರ ನಡೆಸಿದ ಆರೋಪ ಎದುರಿಸುತ್ತಿರುವ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಸ್ವಾಮೀಜಿಗಳು ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆಯನ್ನು ನಡೆಸಿದ ಸೆಷೆನ್ಸ್ ಕೋರ್ಟ್ ಸೆ.30ಕ್ಕೆ ತೀರ್ಪು ಕಾಯ್ದಿರಿಸಿದೆ.
ಮಂಗಳವಾರ ಜಾಮೀನು ಅರ್ಜಿಯ ವಿಚಾರಣೆ ಸಂದರ್ಭದಲ್ಲಿ ಸರ್ಕಾರಿ ಅಭಿಯೋಜಕರಾದ ಪೊನ್ನಣ್ಣ ಅವರು, 'ಆರೋಪಿ ಸ್ಥಾನದಲ್ಲಿರುವ ಸ್ವಾಮೀಜಿ ವಿರುದ್ಧ ಎರಡು ಅತ್ಯಾಚಾರ ಆರೋಪ ಪ್ರಕರಣಗಳಿದ್ದು, ತನಿಖೆಗೆ ಸಹಕರಿಸುತ್ತಿಲ್ಲ. 2ನೇ ಪ್ರಕರಣದಲ್ಲಿ ಒಮ್ಮೆ ಮಾತ್ರ ವಿಚಾರಣೆಗೆ ಹಾಜರಾಗಿದ್ದಾರೆ' ಎಂದು ವಾದ ಮಂಡನೆ ಮಾಡಿದರು. [ಶ್ರೀಗಳ ವಿರುದ್ಧದ 2 ಪ್ರಕರಣ ಸಿಐಡಿಗೆ]

'ಯಕ್ಷಗಾನ ಕಲಾವಿದೆ ಮೇಲೆ ಅತ್ಯಾಚಾರ ಮಾಡಿದ ಪ್ರಕರಣದಲ್ಲಿಯೂ ಸ್ವಾಮೀಜಿಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಬೇಕಿದೆ. ಆದ್ದರಿಂದ, ನಿರೀಕ್ಷಣಾ ಜಾಮೀನು ಮಂಜೂರು ಮಾಡಬಾರದು' ಎಂದು ಆಕ್ಷೇಪಣೆ ಸಲ್ಲಿಸಿದರು. ವಾದ ಆಲಿಸಿದ ನ್ಯಾಯಾಲಯ ಸೆ.29ರ ತನಕ ಸ್ವಾಮೀಜಿಗಳಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದು, ಸೆ.30ಕ್ಕೆ ಜಾಮೀನು ಅರ್ಜಿಯ ತೀರ್ಪನ್ನು ಕಾಯ್ದರಿಸಿದೆ. [ಗಿರಿನಗರ ಮಠದಲ್ಲಿ ಶ್ರೀಗಳ ವಿಚಾರಣೆ]
ಶ್ರೀಗಳಿಗೆ ಸರ್ಕಾರದ ರಕ್ಷಣೆ : ಅತ್ಯಾಚಾರ ಆರೋಪ ಎದುರಿಸುತ್ತಿರುವ ರಾಘವೇಶ್ವರ ಸ್ವಾಮೀಜಿಗಳಿಗೆ ಸರ್ಕಾರವೇ ರಕ್ಷಣೆ ನೀಡುತ್ತಿದೆಯೇ? ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ಲಲಿತಾ ಕುಮಾರಮಂಗಳಂ ಪ್ರಶ್ನಿಸಿದ್ದಾರೆ.
ಮಂಗಳವಾರ ಬೆಂಗಳೂರಿನಲ್ಲಿ ಮಾತನಾಡಿದ ಅವರು, 'ಸ್ವಾಮೀಜಿಗಳ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದ್ದರೂ ಜಾಮೀನು ಹೇಗೆ ಸಿಕ್ಕಿತು?, ಮೊದಲ ಪ್ರಕರಣ ದಾಖಲಾಗಿ ಒಂದು ವರ್ಷವಾದರೂ ಜಾರ್ಜ್ಶೀಟ್ ಸಲ್ಲಿಕೆಯಾಗಿಲ್ಲ. ರಾಮಕಥಾ ಗಾಯಕಿ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಆದಷ್ಟು ಬೇಗ ಚಾರ್ಜ್ ಶೀಟ್ ಸಲ್ಲಿಕೆ ಮಾಡಬೇಕು ಮತ್ತು ಎರಡನೇ ದೂರಿನ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ' ಎಂದು ಲಲಿತಾ ಕುಮಾರಮಂಗಳಂ ಹೇಳಿದ್ದಾರೆ.












Click it and Unblock the Notifications