ನಮ್ಮ ಸಿಎಂ ದೇಶದಲ್ಲೇ ಫೇಮಸ್: ರೈತ ಸೌರಶಕ್ತಿ ಮೇಳದಲ್ಲಿ ಸಚಿವರು ಹೀಗೆ ಹೇಳಿದ್ಯಾಕೆ?
ಬೆಂಗಳೂರು, ಮಾರ್ಚ್ 09: ರಾಜ್ಯದಲ್ಲಿ ಮಾತ್ರ ಅಲ್ಲ ನಮ್ಮ ಸಿಎಂ ಇಡೀ ದೇಶದಲ್ಲೇ ಅತ್ಯಂತ ಜನಪ್ರಿಯರು. ಅವರ ಸಲಹೆ ಮೇರೆಗೆ ರೈತರಿಗೆ 7 ತಾಸು ವಿದ್ಯುತ್ ನೀಡಲಾಯಿತು. ಹಿಂದಿನ ಸರ್ಕಾರದ ಅವಧಿಯಲ್ಲಿ ವಿದ್ಯುತ್ ಉತ್ಪಾದನೆ ಹೆಚ್ಚಿಸಲಿಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬರ ಪರಿಸ್ಥಿತಿ ಎದುರಾಯಿತು. ಆಗಲೂ ನಾವು ಎದೆಗುಂದದೆ, ಅಗತ್ಯ ಕ್ರಮವಹಿಸಿದೆವು. ಅದರಿಂದಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿಲ್ಲ ಎಂದು ಕೆ ಜೆ ಜಾರ್ಜ್ ಹೇಳಿದ್ದಾರೆ.
ರೈತ ಸೌರಶಕ್ತಿ ಮೇಳದಲ್ಲಿ ಮಾತನಾಡಿದ ಕೆ ಜೆ ಜಾರ್ಜ್, ಹೆಚ್ಚಿನ ಪ್ರಮಾಣದಲ್ಲಿ ಸೌರ ಪಂಪ್ ಸೆಟ್ ಅಳವಡಿಕೆಯನ್ನು ರೈತ ಸಮೂಹಗಳಲ್ಲಿ ಉತ್ತೇಜಿಸಲು ರಾಜ್ಯ ಸರ್ಕಾರದಿಂದ ಈವರೆಗೆ ನೀಡಲಾಗುತ್ತಿದ್ದ ಶೇ 30 ರಷ್ಟು ಸಹಾಯಧನವನ್ನು ಶೇ 50 ಕ್ಕೆ ಹೆಚ್ಚಿಸಿದೆ. ಒಟ್ಟಾರೆ ಮೊತ್ತದಲ್ಲಿ ಶೇ 20 ರಷ್ಟನ್ನು ಮಾತ್ರ ರೈತರು ಭರಿಸಬೇಕಾಗಿರುತ್ತದೆ. ಇದಲ್ಲದೇ, ಯೋಜನೆಯಡಿ ರೈತರಿಗೆ ಪಂಪ್, ಮೀಟರ್, ಪೈಪ್ಗಳನ್ನು ಒದಗಿಸಲಿದೆ ಎಂದು ಹೇಳಿದರು.

ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್ ಅವಲಂಬನೆ ಕಡಿಮೆ ಮಾಡಿ, ಸೌರಶಕ್ತಿಯ ಬಳಕೆ ಮೂಲಕ ರೈತರು ಸ್ವಾವಲಂಬನೆ ಸಾಧಿಸಬೇಕು. ಅದಕ್ಕಾಗಿ ನಮ್ಮ ಸರ್ಕಾರ 'ಕುಸುಮ್ ಬಿ' ಯೋಜನೆಯ ಅನುಷ್ಠಾನಕ್ಕೆ ಒತ್ತು ನೀಡುತ್ತಿದೆ. ನವೀನ ಮಾದರಿಯ ಸೌರ ಪಂಪ್ಸೆಟ್ಗಳ ಪ್ರಾತ್ಯಕ್ಷಿಕೆಯನ್ನು ನೋಡಿ, ಈ ವಿಚಾರವಾಗಿ ಇರುವ ಗೊಂದಲಗಳನ್ನು ಪರಿಹರಿಸಿಕೊಳ್ಳಲು ಮೇಳ ಅತ್ಯುತ್ತಮ ವೇದಿಕೆಯಾಗಲಿದೆ. ಸೌರ ಪಂಪ್ಸೆಟ್ಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದ ರೈತರು ತಮ್ಮ ಜಮೀನುಗಳಲ್ಲಿ ಇದನ್ನು ಅಳವಡಿಸಿಕೊಳ್ಳುವಂತಾಗಬೇಕು ಎಂದರು.
ಮೇಳದ ಆಕರ್ಷಣೆ
• ರಾಜ್ಯದ ನಾನಾ ಭಾಗಗಳಿಂದ ಬರುವ ರೈತರಿಗೆ ಸೌರ ಪಂಪ್ಸೆಟ್ಗಳ ಬಗ್ಗೆ ಮಾಹಿತಿ ನೀಡಲು ಮೇಳದಲ್ಲಿ ವ್ಯವಸ್ಥೆ ಮಾಡಲಾಗಿತ್ತು. ವಿವಿಧ ಸೌರ ವಿದ್ಯುತ್ ಉತ್ಪನ್ನಗಳ ಮಳಿಗೆಗಳಿದ್ದವು.
• ಸೌರ ಪಂಪ್ಸೆಟ್ಗಳು ಹೇಗೆ ಕೆಲಸ ಮಾಡುತ್ತವೆ ಎಂಬುದನ್ನು ನೇರವಾಗಿ ನೋಡಲು ಪ್ರಾತ್ಯಕ್ಷಿಕೆ ನೀಡಲಾಯಿತು.
• ಸೋಲಾರ್ ಪಂಪ್ಸೆಟ್ ಅಳವಡಿಕೊಳ್ಳುವ ರೈತರಿಗಾಗಿಯೇ ಆನ್ಲೈನ್ ಪೋರ್ಟಲ್ ವಿನ್ಯಾಸಗೊಳಿಸಲಾಗಿದೆ.ಈ ಮೂಲಕ ರೈತರು ಅರ್ಜಿ ಸಲ್ಲಿಸಬಹುದಾಗಿದೆ.
• ರೈತರಿಗಾಗಿ ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಸೌರ ಪಂಪ್ ಸೆಟ್ಗಳ ಉತ್ಪಾದಕರು, ಮಾರಾಟಗಾರರು, ಬ್ಯಾಂಕ್ ಅಧಿಕಾರಿಗಳು, ಕೃಷಿ ಹಾಗೂ ಇಂಧನ ಇಲಾಖೆಯ ಅಧಿಕಾರಿಗಳು ರೈತರಿಗೆ ಮಾಹಿತಿ ನೀಡಿದರು.
ಕುಸುಮ್ ಬಿ
ಸಾಂಪ್ರದಾಯಿಕ ಗ್ರಿಡ್-ಆಧಾರಿತ ವಿದ್ಯುತ್ ಅವಲಂಬನೆಯನ್ನು ತಗ್ಗಿಸಲು, ರೈತರಿಗೆ ಸೌರ ಚಾಲಿತ ಪಂಪ್ಸೆಟ್ಗಳ ಬಳಕೆಗೆ ಒತ್ತು ನೀಡಲು ಸರ್ಕಾರ ರೈತರಿಗೆ ಸಬ್ಸಿಡಿ ನೀಡುತ್ತದೆ. ಕುಸುಮ್ ಬಿ ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರದಿಂದ 7.5 ಎಚ್.ಪಿ. ಸಾಮರ್ಥ್ಯದ ಸೌರ ಪಂಪ್ ಸೆಟ್ಗೆ ಶೇಕಡ 30 ಕೇಂದ್ರ ಸರ್ಕಾರದಿಂದ ಸಹಾಯಧನ ಒದಗಿಸುತ್ತದೆ. ರಾಜ್ಯದಿಂದ ನೀಡುತ್ತಿದ್ದ ಸಬ್ಸಿಡಿಯನ್ನು ರಾಜ್ಯ ಸರ್ಕಾರ ಶೇ.50ಕ್ಕೆ ಏರಿಸಿದೆ. ಅಷ್ಟೇ ಅಲ್ಲ, ಯೋಜನೆಯಡಿ ಪಂಪ್, ಮೀಟರ್, ಪೈಪ್ಗಳನ್ನು ಒದಗಿಸುತ್ತಿದೆ.
ಸೌರ ಪಂಪ್ಸೆಟ್ಗಳ ಸ್ಥಾಪನೆ ಸುಲಭವಾಗಿದ್ದು, ದೀರ್ಘಕಾಲ ಬಾಳಿಕೆ ಬರುವ ಕಾರಣದಿಂದ ಗ್ರಾಮೀಣ ಪ್ರದೇಶಗಳಲ್ಲೂ ಸೌರ ತಂತ್ರಜ್ಞಾನ ಹೆಚ್ಚು ಜನಪ್ರಿವಾಗುತ್ತಿದೆ. ಕುಸುಮ್ ಕಾಂಪೋನೆಂಟ್ - ಬಿ ಯೋಜನೆಯಡಿ ಸೌರ ಪಂಪ್ ಸೆಟ್ಗಳನ್ನು ಅಳವಡಿಸುವ ಕಾರ್ಯಕ್ರಮವನ್ನು ಮುಂದುವರಿಸಲಾಗಿದ್ದು, ರಾಜ್ಯದಲ್ಲಿ ಈವರೆಗೆ ಸುಮಾರು 7000 ಸೌರ ಪಂಪ್ ಸೆಟ್ಗಳನ್ನು ಅಳವಡಿಸಲಾಗಿದೆ.
ಕುಸುಮ್ ಸಿ
ಫೀಡರ್ ಮಟ್ಟದ ಸೋಲಾರೈಸೇಶನ್ ಯೋಜನೆಯಾದ 'ಕುಸುಮ್-ಸಿ' ಮೂಲಕ, ನೀರಾವರಿ ಪಂಪ್ ಸೆಟ್ಗಳಿಗೆ ಹಗಲಿನಲ್ಲಿ ವಿದ್ಯುತ್ ಸರಬರಾಜು ಮಾಡಲಾಗುತ್ತದೆ. ಈ ಯೋಜನೆಯಡಿ ರೆಸ್ಕೋ ಡೆವಲಪರ್ಗಳ ಮೂಲಕ 1302 ಮೆ.ವ್ಯಾ. ವಿಕೇಂದ್ರೀಕೃತ ಸೌರ ವಿದ್ಯುತ್ ಸ್ಥಾವರಗಳನ್ನು 248 ಉಪಕೇಂದ್ರಗಳಿಗೆ ಸಂಪರ್ಕಿಸುವ ಮೂಲಕ 806 ಕೃಷಿ ಫೀಡರ್ ಗಳನ್ನೊಳಗೊಂಡ 3,37,331 ಕೃಷಿ ಪಂಪ್ ಸೆಟ್ಗಳಿಗೆ ಹಗಲಿನಲ್ಲಿ ವಿದ್ಯುತ್ ಪೂರೈಸುತ್ತದೆ. ಎಂಎನ್ಆರ್ಇಯು ಪ್ರತಿ ಮೆ.ವ್ಯಾ.ಗೆ 1.05 ಕೋಟಿ ರೂ. ಅನುದಾನ ನೀಡುತ್ತಿದೆ.
ಬೆಸ್ಕಾಂ ಮತ್ತು ಹೆಸ್ಕಾಂ ಗಳಲ್ಲಿ 753.18 ಮೆ.ವ್ಯಾ.ಗೆ ಬಿಡ್ಗಳನ್ನು ಸ್ವೀಕರಿಸಲಾಗಿದ್ದು, 107 ಉಪಕೇಂದ್ರಗಳ 1,80,430 ಕೃಷಿ ಪಂಪ್ ಸೆಟ್ಗಳು ಮತ್ತು 463 ಕೃಷಿ ಫೀಡರ್ಗಳನ್ನು ಒಳಗೊಂಡಿವೆ. 12 ಸೋಲಾರ್ ಪವರ್ ಜನರೇಟರ್ಗಳಿಗೆ ಕಾರ್ಯಾದೇಶವನ್ನು ನೀಡಲಾಗಿದ್ದು, ಈ ಸೌರ ವಿದ್ಯುತ್ ಸ್ಥಾವರಗಳನ್ನು ಮಾರ್ಚ್-2025 ರೊಳಗೆ ಗ್ರಿಡ್ಗೆ ಸಂಪರ್ಕಿಸಲಾಗುತ್ತದೆ.












Click it and Unblock the Notifications