CM Siddaramaiah: ಸರ್ಕಾರ ದೃಢವಾಗಿದೆ ಬಿಜೆಪಿಯವರು ಹೇಳಿದ ಕೂಡಲೇ ಬಿದ್ದುಹೋಗುವುದಿಲ್ಲ: ಸಿದ್ದರಾಮಯ್ಯ
ಬೆಂಗಳೂರು,ಅಕ್ಟೋಬರ್ 31:ಬೆಂಗಳೂರು, ಅಕ್ಟೋಬರ್ 31: ಬಿಜೆಪಿಯವರು ಹೇಳಿದ ಕೂಡಲೇ ಸರ್ಕಾರ ಬಿದ್ದುಹೋಗುವುದಿಲ್ಲ. ನಮ್ಮ ಸರ್ಕಾರ ಧೃಢವಾಗಿದೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.
ಈ ಕುರಿತು ಮಂಗಳವಾರ ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ 39 ನೇ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂಧಿರಾಗಾಂಧಿ ಅತ್ಯಂತ ಧೈರ್ಯವಂತ ಮಹಿಳೆ. ದೇಶದ ಬಡವರ ಆರಾಧ್ಯ ದೈವ ಆಗಿದ್ದರು ಎಂದು ಮೆಚ್ಚುಗೆ ಸೂಚಿಸಿದರು. ಇಂದಿರಾಗಾಂಧಿ ಅವರಂಥಾ ಜನಪರ-ಜನಪ್ರಿಯ ಪ್ರಧಾನಮಂತ್ರಿ ಮತ್ತೆ ಯಾರೂ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು.

ಬಿಜೆಪಿಯವರಿಗೆ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಚರಿತ್ರೆ ಇಲ್ಲ. ಕೇವಲ ಖಾಲಿ ದೇಶಭಕ್ತಿ ಬಗ್ಗೆ ಭಾಷಣ ಮಾಡುತ್ತಾರೆ. ಖಾಲಿ ಭಾಷಣಗಳಿಂದ ದೇಶಕ್ಕೆ, ದೇಶದ ಜನರಿಗೆ ಏನೂ ಸಿಗುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.
ಮಹಾತ್ಮಗಾಂಧಿ ಹತ್ಯೆ, ಇಂದಿರಾಗಾಂಧಿ ಹತ್ಯೆ, ರಾಜೀವ್ ಗಾಂಧಿ ಹತ್ಯೆ ದೇಶಕ್ಕೆ ಆದ ದೊಡ್ಡ ನಷ್ಟ. ಈ ಮೂವರು ದೇಶಕ್ಕಾಗಿ ಹುತಾತ್ಮರಾದರು. ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದರು. ಇವರು ದೇಶಕ್ಕಾಗಿ ಮಾಡಿದ ತ್ಯಾಗ, ಬಲಿದಾನ ನಮ್ಮ ದೇಶದ ಮಣ್ಣಿನಲ್ಲಿ ದಾಖಲಾಗಿದೆ ಎಂದರು. ಇಂದು ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜನ್ಮದಿನ. ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಇವರ ಕೊಡುಗೆ ಅಪಾರ ಎಂದು ಅವರ ಹೋರಾಟದ ಘಟನೆಗಳನ್ನು ಸ್ಮರಿಸಿದರು. ಇನ್ನೂ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ 39 ನೇ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಸೇರಿದಂತೆ ಪಕ್ಷದ ಹಲವು ಮುಖಂಡರು ವೇದಿಕೆಯಲ್ಲಿದ್ದರು.
ಸರ್ದಾರ್ ವಲ್ಲಭಬಾಯ್ ಪಟೇಲ್ ಅವರಿಗೆ ಗೌರವ ನಮನ
ಮಾಜಿ ಉಪ ಪ್ರಧಾನಿ ದಿವಂಗತ ಸರ್ದಾರ್ ವಲ್ಲಭಬಾಯ್ ಪಟೇಲ್ ಅವರ ಜನ್ಮದಿನದ ಪ್ರಯುಕ್ತ ವಿಧಾನಸೌಧದ 3ನೇ ಮಹಡಿಯ ಸಮ್ಮೇಳನ ಸಭಾಂಗಣದಲ್ಲಿ ನಡೆದ "ರಾಷ್ಟ್ರೀಯ ಏಕತಾ ದಿವಸ" ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವಾಲಯದ ಅಧಿಕಾರಿಗಳಿಗೆ ಹಾಗೂ ನೌಕರರಿಗೆ ಪ್ರತಿಜ್ಞಾ ವಚನ ಬೋಧಿಸಿದರು.
ಇದೇ ವೇಳೆ, ಸರ್ದಾರ್ ವಲ್ಲಭಬಾಯ್ ಪಟೇಲ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಮನ ಸಲ್ಲಿಸಿದರು. ಈ ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ. ಮಹದೇವಪ್ಪ, ಕೃಷಿ ಇಲಾಖೆ ಸಚಿವ ಚಲುವರಾಯಸ್ವಾಮಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಶಾಸಕ ನರೇಂದ್ರಸ್ವಾಮಿ, ವಿಧಾನ ಪರಿಷತ್ ಸದಸ್ಯ ಯು.ಬಿ.ವೆಂಕಟೇಶ್, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.












Click it and Unblock the Notifications