ಕಾಂಗ್ರೆಸ್ ಸಂಧಾನಕ್ಕೆ ಭಾರೀ ಹಿನ್ನಡೆ, ಕರ್ನಾಟಕದಲ್ಲಿ ಓವೈಸಿ ಪಕ್ಷ ಕಣಕ್ಕೆ
ಹೈದರಾಬಾದ್, ನವೆಂಬರ್ 28: ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷ ಹಿನ್ನಡೆಯೊಂದನ್ನು ಅನುಭವಿಸಿದೆ.
ಕಾಂಗ್ರೆಸ್ ಅಧಿಕಾರದಲ್ಲಿರುವ ಕರ್ನಾಟಕದಲ್ಲಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ಅಸಾದುದ್ದೀನ್ ಓವೈಸಿ ನೇತೃತ್ವದ ಆಲ್ ಇಂಡಿಯಾ ಮಜ್ಲಿಸ್ ಇ ಇತ್ತೆಹುದಾಲ್ ಮುಸ್ಲಿಮೀನ್ (ಎಐಎಂಐಎಂ) ಪಕ್ಷ ಪ್ರಕಟಣೆಯಲ್ಲಿ ಹೇಳಿದೆ.

'ಎಐಎಂಐಎಂ'ನ ಹೈದರಾಬಾದ್ ಮುಖ್ಯ ಕಚೇರಿಯಲ್ಲಿ ಇಂದು ನಡೆದ ಕರ್ನಾಟಕ ಘಟಕದ ಸಭೆಯ ನಂತರ ಅಸಾದುದ್ದೀನ್ ಓವೈಸಿ ಈ ತೀರ್ಮಾನವನ್ನು ಘೋಷಿಸಿದ್ದಾರೆ.
ಕರ್ನಾಟಕದಲ್ಲಿ ಸಾರ್ವಜನಿಕ ಸಭೆಗಳಲ್ಲಿ ತಮ್ಮನ್ನು ಮಾತನಾಡಲು ರಾಜ್ಯ ಕಾಂಗ್ರೆಸ್ ಸರಕಾರ ಬಿಡುತ್ತಿಲ್ಲ ಎಂದು ಅಸಾದುದ್ದೀನ್ ಓವೈಸಿ ಇದೇ ಸಂದರ್ಭದಲ್ಲಿ ಕಿಡಿಕಾರಿದರು.
"ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಯಾವುದೇ ವ್ಯತ್ಯಾಸವಿಲ್ಲ. ಕಾಂಗ್ರೆಸ್ ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಮಾತನಾಡುತ್ತದೆ. ಆದರೆ ಕಾಂಗ್ರೆಸ್ ಆಡಳಿತದಲ್ಲಿರುವ ರಾಜ್ಯಗಳಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯವಿಲ್ಲ. ಕರ್ನಾಟಕದಲ್ಲಿ ಸಾರ್ವಜನಿಕ ಕಾರ್ಯಕ್ರಮಗಳನ್ನುದ್ದೇಶಿಸಿ ಮಾತನಾಡಲು ನನಗೆ ಅವಕಾಶ ನೀಡುತ್ತಿಲ್ಲ," ಎಂದು ತಾವು ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೆಲವು ದಿನಗಳ ಹಿಂದೆ ಎಐಎಂಐಎಂ ಜತೆ ಮಾತುಕತೆ ನಡೆಸಲು ಕಾಂಗ್ರೆಸಿನಿಂದ ಜಮೀರ್ ಅಹಮದ್ ರನ್ನು ಕಳುಹಿಸಿಕೊಡಲಾಗಿತ್ತು. ಈ ಮೂಲಕ ಕರ್ನಾಟಕದಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದಂತೆ ಮನವಿ ಮಾಡಿಕೊಳ್ಳುವ ಪ್ರಯತ್ನ ನಡೆದಿತ್ತು.
ಆದರೆ ಇದೀಗ ಕಾಂಗ್ರೆಸ್ ಯತ್ನಕ್ಕೆ ಹಿನ್ನಡೆಯಾಗಿದ್ದು ಎಐಎಂಐಎಂ ಚುನಾವಣಾ ಕಣಕ್ಕಿಳಿಯುವುದಾಗಿ ಘೋಷಿಸಿದೆ.












Click it and Unblock the Notifications