ಮೇಕೆದಾಟು ಯೋಜನೆ; ಮೇಕೆದಾಟುವಿನಿಂದ ವಿಧಾನಸೌಧ ತನಕ ಪಾದಯಾತ್ರೆ
ಬೆಂಗಳೂರು, ಸೆಪ್ಟೆಂಬರ್ 21; ಮೇಕೆದಾಟು ಯೋಜನೆ ಅನುಷ್ಠಾನದ ವಿಚಾರದಲ್ಲಿ ಕರ್ನಾಟಕ ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವೆ ಮಾತಿನ ಸಮರ ನಡೆಯುತ್ತಿದೆ. ಯೋಜನೆ ವಿಚಾರದಲ್ಲಿ ಕೇಂದ್ರ ಸರ್ಕಾರ ಇನ್ನೂ ತನ್ನ ನಿಲುವು ಸ್ಪಷ್ಟಪಡಿಸಿಲ್ಲ. ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳು ಯೋಜನೆಯನ್ನು ಸಹ ವಿರೋಧಿಸುತ್ತಿವೆ.
ಮೇಕೆದಾಟು ಯೋಜನೆಯನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಮೇಕೆದಾಟುವಿನಿಂದ ವಿಧಾನಸೌಧ ತನಕ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ಸೆಪ್ಟೆಂಬರ್ 23ರಿಂದ 28ರ ತನಕ ಈ ಪಾದಯಾತ್ರೆ ನಡೆಯಲಿದೆ. ಕರ್ನಾಟಕ ಮೇಕೆದಾಟು ಹೋರಾಟ ಸಮಿತಿ ಅಧ್ಯಕ್ಷ ಸಂಪತ್ ಕುಮಾರ್ ಈ ಕುರಿತು ಮಾಹಿತಿ ನೀಡಿದರು, "ಮೇಕೆದಾಟು ಯೋಜನೆ ಅನುಷ್ಠಾನ ಮಾಡಬೇಕು ಎಂದು ಒತ್ತಾಯಿಸಿ ಮೇಕೆದಾಟುವಿನಿಂದ ವಿಧಾನಸೌಧ ತನಕ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ" ಎಂದು ಅವರು ಹೇಳಿದರು.
ಮೇಕೆದಾಟು, ಕಾವೇರಿ ವಿಚಾರದಲ್ಲಿ ಕರ್ನಾಟಕದ ಹಿತ ಕಾಪಾಡಲು ಬಿಜೆಪಿ ಕಟಿಬದ್ಧ: ಅರುಣ್ ಸಿಂಗ್
"ಸರ್ಕಾರ ಮೇಕೆದಾಟು ಯೋಜನೆ ಅನುಷ್ಠಾನ ಮಾಡಿದರೆ ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಯ ಜನರಿಗೆ ಕುಡಿಯುವ ನೀರು ಸಿಗಲಿದೆ. ಸರ್ಕಾರ ಈ ಯೋಜನೆ ಜಾರಿಗೆ ಮುಂದಾಗಬೇಕು" ಎಂದು ಸಂಪತ್ ಕುಮಾರ್ ಒತ್ತಾಯಿಸಿದರು.
ವಿಡಿಯೋ; ಮೇಕೆದಾಟು ಯೋಜನೆ ಬಗ್ಗೆ ಪ್ರಜ್ವಲ್ ಪ್ರಶ್ನೆ, ಕೇಂದ್ರದ ಉತ್ತರ
ಸೆಪ್ಟೆಂಬರ್ 23ರಿಂದ 28ರ ತನಕ ಈ ಪಾದಯಾತ್ರೆ ನಡೆಯಲಿದೆ. ಕನ್ನಡ ಸಂಘಟನೆಗಳ ಸದಸ್ಯರು, ದಲಿತ ಸಂಘಟನೆಗಳ ಸದಸ್ಯರು, ರೈತರು, ಕಾರ್ಮಿಕರು, ವಿದ್ಯಾರ್ಥಿಗಳು, ಮಹಿಳಾ ಸಂಘಟನೆಗಳು ಈ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿವೆ.
ಮೇಕೆದಾಟು ಯೋಜನೆ; ಸರ್ವಪಕ್ಷಗಳ ಸಭೆ ಕರೆಯಲಿದ್ದಾರೆ ಸಿಎಂ
ತಮಿಳುನಾಡು ವಿರೋಧ
ಕರ್ನಾಟಕದ ಸರ್ಕಾರದ ಪ್ರಸ್ತಾವಿತ ಮೇಕೆದಾಟು ಯೋಜನೆಯನ್ನು ತಮಿಳುನಾಡು, ಪುದುಚೇರಿ ವಿರೋಧಿಸುತ್ತಿವೆ. ಯೋಜನೆ ಜಾರಿಯಾದರೆ ರಾಜ್ಯಕ್ಕೆ ಹರಿದು ಬರುವ ಕಾವೇರಿ ನೀರಿನಲ್ಲಿ ಕೊರತೆ ಉಂಟಾಗಲಿದೆ ಎಂಬುದು ರಾಜ್ಯಗಳ ವಾದ. ಈ ಕುರಿತು ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದೆ. ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿಯೂ ಯೋಜನೆಗೆ ವಿರೋಧ ವ್ಯಕ್ತಪಡಿಸಿದೆ.
ಚರ್ಚೆ ಮುಂದೂಡಿದ್ದ ಪ್ರಾಧಿಕಾರ
ಆಗಸ್ಟ್ 31ರಂದು ದೆಹಲಿಯಲ್ಲಿ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ನಡೆದಿತ್ತು. ಮೇಕೆದಾಟು ಯೊಜನೆ ವಿಚಾರದಲ್ಲಿ ಕರ್ನಾಟಕ ಸಲ್ಲಿಸಿದ್ದ ಪ್ರಸ್ತಾವನೆಗೆ ತಮಿಳುನಾಡು, ಪುದುಚೇರಿ ವಿರೋಧ ವ್ಯಕ್ತಪಡಿಸಿದವು. ಆದರೆ ಈ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚೆಯನ್ನು ಮುಂದೂಡುತ್ತೇವೆ ಎಂದು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಎಸ್. ಕೆ. ಹಾಲ್ದಾರ್ ಹೇಳಿದರು.
ತಮಿಳುನಾಡು ಸರ್ಕಾರದ ಗುಂಡಾರ್ ಯೋಜನೆಗೆ ಸಹ ಕರ್ನಾಟಕ ಆಕ್ಷೇಪ ವ್ಯಕ್ತಪಡಿಸಿದೆ. ಇತರ ರಾಜ್ಯಗಳ ಅಭಿಪ್ರಾಯವನ್ನು ಪಡೆಯಬೇಕಿದ್ದು, ಮೇಕೆದಾಟು, ಗುಂಡಾರ್ ಯೋಜನೆ ಕುರಿತು ಚರ್ಚೆಯನ್ನು ಮುಂದೂಡಲಾಗಿದೆ.
ಕಾವೇರಿ ನ್ಯಾಯಾಧೀಕರಣದ ಅಂತಿಮ ತೀರ್ಪು
ಕಾವೇರಿ ನದಿ ನೀರು ಹಂಚಿಕೆ ಕುರಿತು ಕಾವೇರಿ ನ್ಯಾಯಾಧೀಕರಣ ನೀಡಿದ ಅಂತಿಮ ತೀರ್ಪಿನ ಅನ್ವಯ ಕಾವೇರಿ ನದಿ ಪಾತ್ರದಲ್ಲಿ ಯಾವುದೇ ಯೋಜನೆ ಕೈಗೊಳ್ಳುವ ಮುನ್ನ ಎಲ್ಲಾ ರಾಜ್ಯಗಳ ಒಪ್ಪಿಗೆಯನ್ನು ಪಡೆಯುವುದು ಅನಿವಾರ್ಯವಾಗಿದೆ.
ಲೋಕಸಭೆಯಲ್ಲಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಸಹ ಇದನ್ನೇ ಹೇಳಿದ್ದಾರೆ. "ಮೇಕೆದಾಟು ಯೋಜನೆ ಡಿಪಿಆರ್ಗೆ ಕೇಂದ್ರ ಸರ್ಕಾರದಿಂದ ತಾತ್ವಿಕ ಒಪ್ಪಿಗೆ ನೀಡಲಾಗಿದೆ. ಆದರೆ ಕಾವೇರಿ ಕಣಿವೆಯ ಕೆಳಹಂತದ ರಾಜ್ಯಗಳ ಒಪ್ಪಿಗೆ ಅಗತ್ಯವಿದೆ. ತಮಿಳುನಾಡು ಮತ್ತು ಪುದುಚೇರಿ ರಾಜ್ಯಗಳ ಒಪ್ಪಿಗೆ ಪಡೆಯಬೇಕು. ಕರ್ನಾಟಕ ಡಿಪಿಆರ್ ಸಲ್ಲಿಕೆ ಮಾಡಿದಾಗಲೇ ಇದನ್ನು ಸ್ಪಷ್ಟಪಡಿಸಲಾಗಿತ್ತು" ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
ಕೇಂದ್ರದ ಅನುಮತಿಯೂ ಸಿಕ್ಕಿಲ್ಲ
ಕರ್ನಾಟಕ ಸರ್ಕಾರದ ಪ್ರಸ್ತಾವಿತ ಮೇಕೆದಾಟು ಯೋಜನೆಯ ಡಿಪಿಆರ್ಗೆ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯದ ಅನುಮತಿಯೂ ಸಿಕ್ಕಿಲ್ಲ. ಕೇಂದ್ರ ಸರ್ಕಾರದಿಂದ ತಾತ್ವಿಕ ಒಪ್ಪಿಗೆ ದೊರೆತಿದೆ ಎಂದು ಕರ್ನಾಟಕ ಭಾವಿಸಿದರೂ ಸಹ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಗಮನಕ್ಕೆ ತಂದು ಅನುಮತಿ ಪಡೆಯಬೇಕು. ಮೇಕೆದಾಟು ಯೋಜನೆ ಕುರಿತು ಕರ್ನಾಟಕ ಸಲ್ಲಿಕೆ ಮಾಡಿರುವ ಅರ್ಜಿಯ ಪರಿಶೀಲನೆಗೆ ಪರಿಸರ ಮತ್ತು ಅರಣ್ಯ ಸಚಿವಾಲಯಕ್ಕೆ ಸೂಚನೆ ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.
Recommended Video
ಕರ್ನಾಟಕ ಸರ್ಕಾರ ಹೇಳುವುದೇನು?
ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೇಕೆದಾಟು ಯೋಜನೆ ಜಾರಿಗೊಳಿಸುತ್ತೇವೆ ಎಂದು ಹೇಳಿದ್ದಾರೆ, "ಸುಪ್ರೀಂಕೋರ್ಟ್ ಬೆಂಗಳೂರು ನಗರಕ್ಕೆ ಕುಡಿಯುವ ಉದ್ದೇಶಕ್ಕೆ 6 ಟಿಎಂಸಿಯಷ್ಟು ಹೆಚ್ಚುವರಿ ನೀರು ಹಂಚಿಕೆ ಮಾಡಿದೆ. ಅದಕ್ಕಾಗಿ ಮೇಕೆದಾಟು ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ತಮಿಳುನಾಡು ಹಿಂದಿನಿಂದಲೂ ಕರ್ನಾಟಕದ ಎಲ್ಲಾ ಯೋಜನೆಗಳಿಗೂ ಅಡ್ಡಿ ಮಾಡುತ್ತಲೇ ಬಂದಿದೆ. ಅನುಮತಿ ತೆಗೆದುಕೊಂಡು ಯೋಜನೆ ಮಾಡೇ ತೀರುತ್ತೇವೆ" ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದ್ದಾರೆ.