ಕರ್ನಾಟಕದಲ್ಲಿ ತಗ್ಗಿದೆ ಮಕ್ಕಳಲ್ಲಿನ ಕೊರೊನಾ ಪರೀಕ್ಷಾ ಪ್ರಮಾಣ
ಬೆಂಗಳೂರು, ಸೆಪ್ಟೆಂಬರ್ 27: ಕೊರೊನಾ ಮೂರನೇ ಅಲೆ ಭೀತಿ ನಡುವೆ ಕರ್ನಾಟಕದಲ್ಲಿ ಮಕ್ಕಳಿಗೆ ಶಾಲೆ ತೆರೆಯಲು ಅನುಮತಿ ನೀಡಲಾಗಿದೆ. 6ರಿಂದ 12ನೇ ತರಗತಿ ಮಕ್ಕಳಿಗೆ ವಾರದಲ್ಲಿ ಐದು ದಿನ ಶಾಲೆಯನ್ನು ಸಂಪೂರ್ಣ ಸಾಮರ್ಥ್ಯದೊಂದಿಗೆ ನಡೆಸಲು ಅನುಮತಿ ನೀಡಲಾಗಿದೆ. ಆದರೆ ಮಕ್ಕಳಲ್ಲಿ ಕೊರೊನಾ ಪರೀಕ್ಷೆ ಕಡಿಮೆ ಮಟ್ಟದಲ್ಲಿದೆ ಎಂದು ರಾಜ್ಯ ಆರೋಗ್ಯ ಆಯುಕ್ತ ಡಾ. ಕೆ.ವಿ. ತ್ರಿಲೋಕ್ ಚಂದ್ರ ತಿಳಿಸಿದ್ದಾರೆ.
ರಾಜ್ಯದಲ್ಲಿ ಮಕ್ಕಳಲ್ಲಿನ ಕೊರೊನಾ ಪರೀಕ್ಷಾ ಮಟ್ಟ 3% ಇದ್ದು, ಸೆಪ್ಟೆಂಬರ್ 15ರಿಂದಲೂ ಯಾವುದೇ ಸುಧಾರಣೆ ಕಂಡಿಲ್ಲ. ಕೊರೊನಾ ಪರೀಕ್ಷಾ ಮಟ್ಟ ಇದೇ ಹಂತದಲ್ಲಿ ಸಾಗಿದರೆ ಮಕ್ಕಳಲ್ಲಿನ ಕೊರೊನಾ ಸೋಂಕನ್ನು ಶೀಘ್ರವಾಗಿ ಪತ್ತೆ ಮಾಡಿ ಹರಡದಂತೆ ತಡೆಯಲು ಕಷ್ಟಕರವಾಗುತ್ತದೆ ಎಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕಳೆದ ವಾರ ಈ ಕುರಿತು ರಾಜ್ಯ ಕೊರೊನಾ ತಾಂತ್ರಿಕ ಸಲಹಾ ಸಮಿತಿ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿತ್ತು. ಸೆಪ್ಟೆಂಬರ್ 19ರಂದು ಈ ಕುರಿತು ಪ್ರಸ್ತಾಪ ಮಾಡಿದ್ದ ತಜ್ಞರ ಸಮಿತಿ, ಮಕ್ಕಳಲ್ಲಿ ಕೊರೊನಾ ಪರೀಕ್ಷಾ ಪ್ರಮಾಣ ಕಡಿಮೆಯಾಗಿದೆ. ಮಕ್ಕಳಲ್ಲಿ ಸೋಂಕಿನ ಮಾದರಿ ಪರೀಕ್ಷೆ ಹೀಗೆ ತಗ್ಗಿದರೆ, ಮುಂದೆ ಸಮಸ್ಯೆಯಾಗಲಿದೆ. ಒಂದು ವಾರದಲ್ಲಿ ಈ ಪರೀಕ್ಷಾ ಪ್ರಮಾಣವನ್ನು 10%ಗೆ ಏರಿಸಬೇಕು ಎಂದು ಹೇಳಿತ್ತು. ಸೆಪ್ಟೆಂಬರ್ 26ರ ಹೊತ್ತಿಗೆ ಕೊರೊನಾ ಪರೀಕ್ಷಾ ಪ್ರಮಾಣವನ್ನು ಕನಿಷ್ಠ 10%ಗೆ ಏರಿಸಲು ಸೂಚಿಸಲಾಗಿತ್ತು.

ಅಕ್ಟೋಬರ್ ಅಥವಾ ನವೆಂಬರ್ ವೇಳೆಗೆ ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಕಾಣಿಸಿಕೊಳ್ಳಬಹುದು ಎಂದು ತಜ್ಞರ ಸಮಿತಿ ಎಚ್ಚರಿಕೆ ನೀಡಿದ್ದು, ಮಕ್ಕಳ ಆರೋಗ್ಯದ ಮೇಲೆ ನಿಗಾ ಇಡಲು ಸೂಚನೆ ನೀಡಲಾಗಿದೆ.
ಸೆಪ್ಟೆಂಬರ್ 15ರಿಂದ ಸೆಪ್ಟೆಂಬರ್ 22ರವರೆಗೆ ಮಕ್ಕಳಲ್ಲಿನ ಸೋಂಕು ಪತ್ತೆ ಪ್ರಮಾಣ 3% ಉಳಿದಿದ್ದು, ಮಕ್ಕಳಲ್ಲಿ ಕೊರೊನಾ ಸೋಂಕು ಪತ್ತೆಯಾಗದೇ ಹೋದರೆ, ಅದರಲ್ಲೂ ಸಂಪೂರ್ಣ ಸಾಮರ್ಥ್ಯದಲ್ಲಿ ತರಗತಿಗಳನ್ನು ನಡೆಸುತ್ತಿರುವ ಇಂಥ ಸಂದರ್ಭದಲ್ಲಿ ಕೊರೊನಾ ಪರೀಕ್ಷಾ ಪ್ರಮಾಣ ತಗ್ಗಿದರೆ ಸಮಸ್ಯೆಯಾಗಬಹುದು ಎಂದು ರಾಜ್ಯ ನೋಡಲ್ ಅಧಿಕಾರಿ ಡಾ. ಸಿ.ಎನ್. ಮಂಜುನಾಥ್ ಎಚ್ಚರಿಸಿದ್ದಾರೆ.
'ಆಗಸ್ಟ್ 23ರಿಂದ ಸೆಪ್ಟೆಂಬರ್ 22ರವರೆಗೆ 1.05 ಲಕ್ಷ ಮಕ್ಕಳಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದೆ' ಎಂದು ರಾಜ್ಯ ಆರೊಗ್ಯ ಆಯುಕ್ತ ಡಾ. ಕೆ.ವಿ. ತ್ರಿಲೋಕ್ ಚಂದ್ರ ಮಾಹಿತಿ ನೀಡಿದ್ದಾರೆ.

'ಈ ವಿಷಯದಲ್ಲಿ ಕೆಲವು ಅಡೆತಡೆಗಳನ್ನು ನಾವು ಎದುರಿಸುತ್ತಿದ್ದೇವೆ. ಐದು ವರ್ಷದೊಳಗಿನ ಮಕ್ಕಳಿಗೆ ಆರ್ಟಿಪಿಸಿಆರ್ ಪರೀಕ್ಷೆ ನಡೆಸಲು ಆಗುತ್ತಿಲ್ಲ. ಅವರಿಗೆ ಕೊರೊನಾ ಪರೀಕ್ಷೆ ನಡೆಸುವುದು ಕಷ್ಟವಾಗುತ್ತಿದೆ. ಲಕ್ಷಣರಹಿತ ಮಕ್ಕಳನ್ನು ಕೂಡ ಪರೀಕ್ಷೆ ನಡೆಸಲಾಗುತ್ತಿದೆ. ರಾಜ್ಯದಲ್ಲಿ ಆರೋಗ್ಯ ನಂದನ ಯೋಜನೆಯಡಿಯಲ್ಲಿ ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದ ಅಧಿಕಾರಿಗಳು ಶಾಲೆಗಳಿಗೆ ಹೋಗಿ ಮಕ್ಕಳಿಗೆ ಕೊರೊನಾ ಪರೀಕ್ಷೆ ನಡೆಸುತ್ತಿದ್ದಾರೆ' ಎಂದು ಅವರು ಮಾಹಿತಿ ನೀಡಿದರು.
ಆಗಸ್ಟ್ 15ರಿಂದ ಸೆಪ್ಟೆಂಬರ್ 22ರವರೆಗೆ 6-12ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ 141274 ಮಕ್ಕಳ ಕೊರೊನಾ ಪರೀಕ್ಷಾ ಮಾದರಿಗಳನ್ನು ಸಂಗ್ರಹಿಸಲಾಗಿದೆ ಎಂದು ದತ್ತಾಂಶಗಳು ತೋರಿವೆ. ಬಿಬಿಎಂಪಿ ಕೇವಲ 104 ಮಾದರಿಗಳನ್ನು ಪರೀಕ್ಷಿಸಿದೆ. ಬೆಂಗಳೂರು ನಗರ ಪ್ರದೇಶದಲ್ಲಿ ಕೇವಲ 2071 ಮಕ್ಕಳ ಮಾದರಿಗಳ ಪರೀಕ್ಷೆ ನಡೆಸಲಾಗಿದೆ.
ಸೆಪ್ಟೆಂಬರ್ 21ರ ಒಂದೇ ದಿನ 1-18 ವರ್ಷದವರ 4675 ಮಾದರಿಗಳನ್ನು ಕೊರೊನಾ ಪರೀಕ್ಷೆಗೆ ಸಂಗ್ರಹಿಸಲಾಗಿದೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ ಡಾ. ರಣದೀಪ್ ಹೇಳಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 743 ಗಂಟಲ ದ್ರವ ಸಂಗ್ರಹಿಸುವ ಸಿಬ್ಬಂದಿಯಿದ್ದಾರೆ. ಅವರು ಮಕ್ಕಳ ಗಂಟಲ ದ್ರವ ಸಂಗ್ರಹಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಹಿತಿ ನೀಡಿದರು.
ಕರ್ನಾಟಕದಲ್ಲಿ ಕೊರೊನಾ ಸೋಂಕು:
ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆ ಕಂಡಿದೆ. ಭಾನುವಾರ 775 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ ಹೊಸ ಸೋಂಕಿತ ಪ್ರಕರಣಗಳ ಪ್ರಮಾಣ ಶೇ.0.54 ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 1.16 ರಷ್ಟಿದೆ. 860 ಸೋಂಕಿತರು ಗುಣಮುಖರಾಗಿದ್ದಾರೆ. 9 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದು, ಈವರೆಗೂ 37726 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
ಭಾನುವಾರದ ಅಂಕಿಅಂಶಗಳ ಪ್ರಕಾರ, 775 ಹೊಸ ಕೊರೊನಾ ಸೋಂಕಿನ ಪ್ರಕರಣಗಳು ಸೇರಿದಂತೆ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 2973395ಕ್ಕೆ ಏರಿಕೆಯಾಗಿದೆ. ಒಟ್ಟು 2922427 ಸೋಂಕಿತರು ಗುಣಮುಖರಾಗಿದ್ದು, 13213 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.












Click it and Unblock the Notifications