ನವೆಂಬರ್ 13ರಂದು ವೇತನ ಸಹಿತ ರಜೆ, ಆದೇಶ
ಬೆಂಗಳೂರು, ನವೆಂಬರ್ 11: ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಮತದಾನ ನವೆಂಬರ್ 13ರಂದು ನಡೆಯಲಿದೆ. ಬಹಿರಂಗ ಚುನಾವಣಾ ಪ್ರಚಾರಕ್ಕೆ ಸೋಮವಾರ ಸಂಜೆ 6 ಗಂಟೆಗೆ ತೆರೆ ಬೀಳಲಿದೆ. ಸಂಡೂರು, ಚನ್ನಪಟ್ಟಣ ಮತ್ತು ಶಿಗ್ಗಾವಿ ಕ್ಷೇತ್ರದಲ್ಲಿ ಮತದಾನ ನಡೆಯಲಿದ್ದು, ನವೆಂಬರ್ 23ರ ಶನಿವಾರ ಮತ ಎಣಿಕೆ ನಡೆಯಲಿದೆ.
ಮೂರು ಕ್ಷೇತ್ರದಲ್ಲಿ ಮತದಾನ ಮಾಡಲು ಅನುಕೂಲವಾಗುವಂತೆ ವೇತನ ಸಹಿತ ರಜೆ ಘೋಷಣೆ ಮಾಡಿ ಅಧಿಸೂಚನೆ ಹೊರಡಿಸಲಾಗಿದೆ. ಈ ಕುರಿತು ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ ಸರ್ಕಾರದ ಅಧೀನ ಕಾರ್ಯದರ್ಶಿ-1 (ಪ) ಸಿಆಸು ಇಲಾಖೆ (ರಾಜ್ಯ ಶಿಷ್ಟಾಚಾರ) ಅಧಿಸೂಚನೆ ಹೊರಡಿಸಿದ್ದಾರೆ.

ಅಧಿಸೂಚನೆ ವಿವರ: ಅಧಿಸೂಚನೆಯಲ್ಲಿ ದಿನಾಂಕ 13.11.2024ರ ಬುಧವಾರದಂದು ಶಿಗ್ಗಾವಿ, ಸಂಡೂರು ಮತ್ತು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ನಡೆಯಲಿದ್ದು, ಈ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಎಲ್ಲಾ ರಾಜ್ಯ ಸರ್ಕಾರಿ ಕಛೇರಿಗಳಿಗೆ, ಶಾಲಾ ಕಾಲೇಜುಗಳಿಗೆ (ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ) ಹಾಗೂ ರಾಷ್ಟ್ರೀಕೃತ ಬ್ಯಾಂಕುಗಳು, ಜೀವವಿಮಾ ನಿಗಮ, ಹಣಕಾಸು ಸಂಸ್ಥೆಗಳು ಹಾಗೂ ಇನ್ನಿತರೇ ಔದ್ಯಮಿಕ ಸಂಸ್ಥೆಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ಎಲ್ಲಾ ಅರ್ಹ ಮತದಾರರಿಗೆ ಸೀಮಿತವಾದಂತೆ ಹಾಗೂ ಮತದಾನ ಮಾಡಲು ಅನುಕೂಲವಾಗುವಂತೆ Negotiable Instrument Act 1881, ಕಲಂ 25ರಡಿ ಮತ್ತು Representation of People Act, 1951 ಕಲಂ 135 ಬಿ ಅಡಿಯಲ್ಲಿನ ಎಲ್ಲಾ ಉಪಬಂದಗಳನ್ವಯ ಒಂದು ದಿನದ ವೇತನ ಸಹಿತ ರಜೆ ಮಂಜೂರು ಮಾಡಲು ಅಧಿಕಾರವುಳ್ಳ ಅಧಿಕಾರಿಗಳು ಮಂಜೂರು ಮಾಡತಕ್ಕದ್ದು ಎಂಬ ಷರತ್ತಿಗೊಳಪಟ್ಟು ಒಂದು ದಿನದ ವೇತನ ಸಹಿತ ರಜೆಯನ್ನು ನೀಡಲು ಆದೇಶಿಸಿದೆ ಎಂದು ಹೇಳಿದೆ.
ಉಪ ಚುನಾವಣೆ ಕಣದಲ್ಲಿ ಶಿಗ್ಗಾವಿಯಲ್ಲಿ 8, ಸಂಡೂರು ಕ್ಷೇತ್ರದಲ್ಲಿ 6 ಮತ್ತು ಚನ್ನಪಟ್ಟಣದಲ್ಲಿ ಅತಿ ಹೆಚ್ಚು ಎಂದರೆ 31 ಅಭ್ಯರ್ಥಿಗಳಿದ್ದಾರೆ. ಚನ್ನಪಟ್ಟಣ ಕ್ಷೇತ್ರದಲ್ಲಿ ಅತಿ ಹೆಚ್ಚು ಎಂದರೆ 50 ಅಭ್ಯರ್ಥಿಗಳು ನಾಮಪತ್ರಗಳನ್ನು ಸಲ್ಲಿಕೆ ಮಾಡಿದ್ದರು. ಅಂತಿಮವಾಗಿ 31 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ.
ಹಾವೇರಿ ಜಿಲ್ಲೆಯ ಶಿಗ್ಗಾವಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಭರತ್ ಬೊಮ್ಮಾಯಿ, ಕಾಂಗ್ರೆಸ್ನಿಂದ ಯಾಸೀರ್ ಅಹ್ಮದ್ ಖಾನ್ ಪಠಾಣ ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳು.
ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಕಾಂಗ್ರೆಸ್ನಿಂದ ಈ. ಅನ್ನಪೂರ್ಣ, ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಬಂಗಾರ ಹನುಮಂತ ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳು.
ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಕಾಂಗ್ರೆಸ್ನಿಂದ ಸಿ. ಪಿ. ಯೋಗೇಶ್ವರ ಮತ್ತು ಬಿಜೆಪಿ-ಜೆಡಿಎಸ್ನಿಂದ ನಿಖಿಲ್ ಕುಮಾರಸ್ವಾಮಿ ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳು. ಮತದಾನ ನವೆಂಬರ್ 13ಕ್ಕೆ ನಡೆದರೂ ಸಹ ಮತ ಎಣಿಕೆ ನವೆಂಬರ್ 23ರಂದು ನಡೆಯಲಿದೆ.
ಮತದಾನದ ಹಿನ್ನಲೆಯಲ್ಲಿ 48 ಗಂಟೆಗೂ ಮುನ್ನ ಅಂದರೆ ನವೆಂಬರ್ 11ರ ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯವಾಗಲಿದೆ. ಈ ಬಳಿಕ ವಾಹನಗಳ ಮೂಲಕ ಬಹಿರಂಗ ಪ್ರಚಾರ, ಧ್ವನಿವರ್ಧಕ ಬಳಕೆಗೆ ಅವಕಾಶ ಇರುವುದಿಲ್ಲ. ಅಭ್ಯರ್ಥಿಗಳು ಮನೆ-ಮನೆ ಭೇಟಿ ಮೂಲಕ ಮತಯಾಚನೆ ಮಾಡಬಹುದು.
ನವೆಂಬರ್ 11ರ ಸಂಜೆ 6 ರಿಂದ ನವೆಂಬರ್ 14 ಸಂಜೆ 6 ಗಂಟೆಯವರೆಗೆ ಶಿಗ್ಗಾವಿ, ಚನ್ನಪಟ್ಟಣ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ 2023 ರ ಕಲಂ 163 ಅಡಿ ಪ್ರತಿಬಂಧಕಾಜ್ಞೆ ಜಾರಿಯಾಗಲಿದೆ.












Click it and Unblock the Notifications